ADVERTISEMENT

ಹಾವೇರಿ ಜಿಲ್ಲೆಯಲ್ಲಿ ಬಾಲ್ಯ ವಿವಾಹ, ಬಾಲ ಗರ್ಭಿಣಿಯರು ಹೆಚ್ಚಳ: ವಿಷಾದ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2025, 2:57 IST
Last Updated 1 ನವೆಂಬರ್ 2025, 2:57 IST
ಹಾವೇರಿಯ ಜಿ.ಪಂ. ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ‘ತರಬೇತಿ ಕಾರ್ಯಾಗಾರ’ವನ್ನು ನ್ಯಾಯಾಧೀಶರಾದ ಎನ್.ಎಂ. ರಮೇಶ ಉದ್ಘಾಟಿಸಿದರು
ಹಾವೇರಿಯ ಜಿ.ಪಂ. ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ‘ತರಬೇತಿ ಕಾರ್ಯಾಗಾರ’ವನ್ನು ನ್ಯಾಯಾಧೀಶರಾದ ಎನ್.ಎಂ. ರಮೇಶ ಉದ್ಘಾಟಿಸಿದರು   

ಹಾವೇರಿ: ‘ಜಿಲ್ಲೆಯಲ್ಲಿ ಬಾಲ್ಯವಿವಾಹ ಮತ್ತು ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚುತ್ತಿರುವುದು ವಿಷಾಧಕರ ಸಂಗತಿ. ಮಹಿಳೆ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಯಲು ಪ್ರತಿಯೊಬ್ಬರೂ ಕೈಜೋಡಿಸಬೇಕು. ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸುವ ಕೆಲಸವಾಗಬೇಕು’ ಎಂದು 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಎನ್.ಎಂ. ರಮೇಶ ಹೇಳಿದರು.

ನಗರದ ಹೊರವಲಯದಲ್ಲಿರುವ ಜಿ.ಪಂ. ಸಭಾಂಗಣದಲ್ಲಿ ಮಕ್ಕಳ ರಕ್ಷಣಾ ನಿರ್ದೇಶನಾಲಯ ಹಾಗೂ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಗ್ರಾ.ಪಂ. ಅಧಿಕಾರಿಗಳಿಗಾಗಿ ಶುಕ್ರವಾರ ಹಮ್ಮಿಕೊಂಡಿದ್ದ ‘ತರಬೇತಿ ಕಾರ್ಯಾಗಾರ’ ಉದ್ಘಾಟಿಸಿ ಅವರು ಮಾತನಾಡಿದರು.

‘ಬಾಲ್ಯವಿವಾಹ ನಿಷೇಧ ಕಾಯ್ದೆ ಹಾಗೂ ಪೋಕ್ಸೊ (ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ) ಕಾಯ್ದೆಗಳ ಪರಿಣಾಮಕಾರಿ ಮತ್ತು ಪ್ರಯೋಜನಕಾರಿ ಅನುಷ್ಠಾನಕ್ಕೆ ಎಲ್ಲರೂ ಶ್ರಮಿಸಬೇಕು. ಮಹಿಳೆ ಮತ್ತು ಮಕ್ಕಳ ಸಂರಕ್ಷಣೆ ನಮ್ಮ-ನಿಮ್ಮೆಲ್ಲರ ಕರ್ತವ್ಯವಾಗಿದೆ’ ಎಂದರು.

ADVERTISEMENT

ಹೆಚ್ಚುವರಿ ಜಿಲ್ಲಾಧಿಕಾರಿ ನಾಗರಾಜ್ ಎಲ್. ಮಾತನಾಡಿ, ‘ಜಿಲ್ಲೆಯಲ್ಲಿ ಬಾಲ್ಯ ವಿವಾಹ, ಪೋಕ್ಸೊ ಹಾಗೂ ಬಾಲಗರ್ಭಿಣಿ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿರುವುದು ಕಳವಳಕಾರಿ ಸಂಗತಿ. ಕಳೆದ ಏಪ್ರಿಲ್ ಮಾಹೆಯಿಂದ ಸೆಪ್ಟೆಂಬರ್ ಮಾಹೆವರೆಗೆ 84 ಪೋಕ್ಸೊ, 26 ಬಾಲ್ಯ ವಿವಾಹ ಹಾಗೂ 29 ಬಾಲಗರ್ಭಿಣಿ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಈ ಪ್ರಕರಣಗಳು ಶೂನ್ಯವಾಗಲು ಎಲ್ಲ ಇಲಾಖೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು’ ಎಂದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪುನೀತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯೂ ಆಗಿರುವ ನ್ಯಾಯಾಧೀಶರಾದ ಶ್ರೀಶೈಲಜಾ ಎಚ್.ವಿ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ರೇವತಿ ಹೊಸಮಠ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಪ್ರಭಾರ) ಡಾ. ಎಚ್.ಜಯಾನಂದ, ಜಿ.ಪಂ. ಮುಖ್ಯ ಯೋಜನಾಧಿಕಾರಿ ಎಚ್.ವೈ. ಮೀಸೆ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಗೀತಾ ಪಾಟೀಲ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಯಶ್ರೀ ಪಾಟೀಲ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.