
ರಾಣೆಬೆನ್ನೂರು: ‘ತಾಲ್ಲೂಕಿನ ಮೆಡ್ಲೇರಿ ಗ್ರಾಮದಲ್ಲಿ ಈಚೆಗೆ ಪತ್ತೆಯಾಗಿರುವ ಬಾಲ ಗರ್ಭಿಣಿಯರ ಪ್ರಕರಣವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ. ಈ ಕುರಿತು ಅಧಿಕಾರಿಗಳು ಹೆಚ್ಚಿನ ಜಾಗೃತಿ ವಹಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪುನೀತ್ ಬಿ.ಆರ್. ಹೇಳಿದರು.
ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಾಮಾನ್ಯ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಿ ಅವರು ಮಾತನಾಡಿದರು.
‘ಇಲ್ಲಿ ಬಾಲ್ಯ ವಿವಾಹ ಹಾಗೂ ಬಾಲ ಗರ್ಭಿಣಿ ಪ್ರಕರಣಕ್ಕೆ ಕಾರಣ ಏನು ಎಂಬುದರ ಸತ್ಯಾಸತ್ಯತೆ ತಿಳಿಯಬೇಕಿದೆ. ಸಂಬಂಧಿಸಿದ ಅಧಿಕಾರಿಗಳು ಮಾಹಿತಿ ಕಲೆಹಾಕಿ ವರದಿ ನೀಡಬೇಕು. ಯಾರಾದರೂ ಪ್ರಭಾವ ಬೀರಲು ಅಥವಾ ಒತ್ತಡ ಹೇರುವುದು ಕಂಡುಬಂದರೆ ಅದನ್ನೂ ಜಿಲ್ಲಾಡಳಿತಕ್ಕೆ ಮತ್ತು ತಾಲ್ಲೂಕು ಆಡಳಿತಕ್ಕೆ ತಿಳಿಸಬೇಕು’ ಎಂದು ಸೂಚಿಸಿದರು.
‘ಈಗಾಗಲೇ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಇನ್ನು ಮುಂದೆ ಇಂತಹ ಪ್ರಕರಣಗಳು ಇತರೆ ಗ್ರಾಮಗಳಲ್ಲಿಯೂ ಮರುಕಳಿಸಬಾರದು. ಅದಕ್ಕಾಗಿ ಅರಿವು ಮೂಡಿಸುವ, ಹಿರಿಯರನ್ನು ಮನವೊಲಿಸುವ ಕಾರ್ಯವನ್ನು ಆರೋಗ್ಯ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯವರು, ಗ್ರಾಮ ಪಂಚಾಯಿತಿವರು, ಪೊಲೀಸರು ಕ್ರಮಕೈಗೊಳ್ಳಬೇಕು’ ಎಂದರು.
‘ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಹೋದರೆ ಬಾಲ ಗರ್ಭಿಣಿಯರನ್ನು ನೋಡಲು ಪೋಷಕರು ಮತ್ತು ಪಾಲಕರು ಮನೆಯೊಳಗೆ ಬಿಡುತ್ತಿಲ್ಲ’ ಎಂದು ತಿಳಿಸಿದಾಗ, ‘ಇಂಥ ಸಂದರ್ಭದಲ್ಲಿ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು’ ಎಂದರು.
ಕೃಷಿ, ಸಮಾಜ ಕಲ್ಯಾಣ, ಆರೋಗ್ಯ, ರೇಷ್ಮೆ, ನೀರಾವರಿ, ತೋಟಗಾರಿಕೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾ ಪಂಚಾಯಿತಿ, ಲೋಕೋಪಯೋಗಿ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ತಾಲ್ಲೂಕು ಪಂಚಾಯಿತಿ ಇಒ ವೆಂಕಟೇಶ್ ಸಣ್ಣಬಿದರಿ ಹಾಗೂ ಸಿಬ್ಬಂದಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.