ಹಾವೇರಿ: ‘ಪ್ರಧಾನಿ ಮೋದಿಯವರು ತಮ್ಮ ಸರ್ವಾಧಿಕಾರಿ ಧೋರಣೆಯಿಂದ ರೈತರ ಬಾಳನ್ನು ಸರ್ವನಾಶ ಮಾಡಲು ಹೊರಟಿದ್ದಾರೆ. ಮುಂದಿನ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸಲಿದ್ದಾರೆ’ ಎಂದು ಮಾಜಿ ಸಚಿವ ರುದ್ರಪ್ಪ ಲಮಾಣಿ ಎಚ್ಚರಿಕೆ ನೀಡಿದರು.
ಇಂಧನ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಜಿಲ್ಲಾ ಸಮಿತಿ ವತಿಯಿಂದ ನಗರದ ಪುರಸಿದ್ಧೇಶ್ವರ ದೇವಾಲಯದಿಂದ ಹೊಸಮನಿ ಸಿದ್ದಪ್ಪ ವೃತ್ತದವರೆಗೆ ಪ್ರತಿಭಟನಾ ಜಾಥಾ ನಡೆಸಿದ ಸಂದರ್ಭ ಅವರು ಮಾತನಾಡಿದರು.
ಕರಾಳ ಕೃಷಿ ಕಾನೂನುಗಳನ್ನು ಜಾರಿಗೊಳಿಸಿ, ರೈತರು ನಿರಂತರವಾಗಿ ಪ್ರತಿಭಟನೆಗಿಳಿಯುವಂತೆ ಕೇಂದ್ರ ಸರ್ಕಾರ ಮಾಡಿದೆ. 155 ರೈತರು ಪ್ರಾಣ ಕಳೆದುಕೊಂಡಿದ್ದರೂ, ರೈತರ ಕೂಗನ್ನು ಪ್ರಧಾನಿ ಆಲಿಸುತ್ತಿಲ್ಲ. ರೈತರ ಮೇಲೆ ಸುಳ್ಳು ಮೊಕದ್ದಮೆಗಳನ್ನು ಹಾಕಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ಕಾಂಗ್ರೆಸ್ ನಿರ್ಮಿಸಿದ ರಸ್ತೆ ಮೇಲೆ ನಿಂತು ದೇಶಕ್ಕೆ ಕಾಂಗ್ರೆಸ್ ಕೊಡುಗೆ ಏನು ಎಂದು ಪ್ರಧಾನಿ ಮೋದಿ ಪ್ರಶ್ನಿಸುತ್ತಿದ್ದಾರೆ. ಕಚ್ಚಾತೈಲ ಬೆಲೆ ಇಳಿದರೂ ಪೆಟ್ರೋಲ್, ಡೀಸೆಲ್ ಬೆಲೆ ಇಳಿಸದೆ ಜನಸಾಮಾನ್ಯರ ಬದುಕು ಬೀದಿಪಾಲಾಗುವಂತೆ ಮಾಡಿದ್ದಾರೆ. ಕೃಷಿ ಚಟುವಟಿಕೆಗಳಿಗೂ ಧಕ್ಕೆಯಾಗಿದೆ. ದಿನಸಿ ಪದಾರ್ಥಗಳ ಬೆಲೆ ಗಗನಕ್ಕೇರುತ್ತಿದೆ. ಕೂಡಲೇ ತೆರಿಗೆ ಇಳಿಸಿ, ಜನರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎಂ.ಹಿರೇಮಠ, ಮಾಜಿ ಸಚಿವ ಬಸವರಾಜ ಶಿವಣ್ಣನವರ, ನಗರಸಭೆ ಅಧ್ಯಕ್ಷ ಸಂಜೀವ ನೀರಲಗಿ ಮುಂತಾದವರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.