ADVERTISEMENT

ಕೋವಿಡ್‌: 22 ಸಂಚಾರಿ ತಂಡ ರಚನೆ

ಹಿಂಜರಿಕೆ ತೊರೆದು ತಪಾಸಣೆ ಮಾಡಿಸಿಕೊಳ್ಳಿ: ಸಿಇಒ ರಮೇಶ ದೇಸಾಯಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2020, 13:00 IST
Last Updated 16 ಸೆಪ್ಟೆಂಬರ್ 2020, 13:00 IST
ರಮೇಶ ದೇಸಾಯಿ, ಸಿಇಒ, ಜಿಲ್ಲಾ ಪಂಚಾಯಿತಿ
ರಮೇಶ ದೇಸಾಯಿ, ಸಿಇಒ, ಜಿಲ್ಲಾ ಪಂಚಾಯಿತಿ   

ಹಾವೇರಿ:ಕೋವಿಡ್ ಪರೀಕ್ಷೆಗೆಗಾಗಿ ಜಿಲ್ಲೆಯಾದ್ಯಂತ 22 ಸಂಚಾರಿ ತಂಡಗಳನ್ನು ರಚಿಸಲಾಗಿದೆ. ಈಗಾಗಲೇ ಜಿಲ್ಲಾ ಹಾಗೂ ಎಲ್ಲ ತಾಲ್ಲೂಕು ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗಾಗಿ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ರಮೇಶ ದೇಸಾಯಿ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಆರೋಗ್ಯ ಇಲಾಖೆ ಹಾಗೂ ಇತರ ಇಲಾಖೆ ಅಧಿಕಾರಿಗಳೊಂದಿಗೆ ಅವರು ಮಾತನಾಡಿದರು. ಪಾಸಿಟಿವ್ ಪ್ರಮಾಣ ಹಾಗೂ ಕೋವಿಡ್ ಸೋಂಕಿನಿಂದ ಮರಣ ಪ್ರಮಾಣ ಕಡಿಮೆ ಮಾಡಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎರಡನೇ ಸುತ್ತಿನ ಆರೋಗ್ಯ ತಪಾಸಣೆ ನಡೆಸಲು ಸೂಚನೆ ನೀಡಲಾಗಿದೆ ಎಂದರು.

ಮೂಢನಂಬಿಕೆ ತೊರೆಯಿರಿ:

ADVERTISEMENT

ಕೋವಿಡ್‌ ಒಂದು ಸಾಮಾನ್ಯ ಕಾಯಿಲೆಯಾಗಿದೆ. ಯಾವುದೇ ಭಯ, ಆತಂಕ, ಹಿಂಜರಿಕೆ ಹಾಗೂ ಮೂಢನಂಬಿಕೆಗೆ ಒಳಗಾಗದೇ ಕೆಮ್ಮು, ಶೀತ, ನೆಗಡಿ, ಜ್ವರ ಕಂಡುಬಂದರೆ ಸ್ವಯಂ ಪ್ರೇರಣೆಯಿಂದ ಉಚಿತ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಾರ್ವಜನಿಕರಿಗೆ ಸಲಹೆ ನೀಡಿದರು.

ಶೇಷವಾಗಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಹಾಗೂ ಎಚ್.ಐ.ವಿ. ಅಸ್ತಮಾ, ಟಿಬಿ, ರಕ್ತದೊತ್ತಡ, ಮಧುಮೇಹದಂತಹ ಗಂಭೀರ ಕಾಯಿಲೆಯಿಂದ ಬಳಲುವವರ ಆರೋಗ್ಯ ತಪಾಸಣೆಗೆ ಒಳಪಡಿಸಲು ಆಶಾ ಕಾರ್ಯಕರ್ತರನ್ನು ನಿಯೋಜಿಸಲಾಗಿದೆ. ಇಂದಿನಿಂದಲೇ ತಪಾಸಣೆ ಆರಂಭಿಸಿ ಎರಡು ದಿನಗಳಲ್ಲಿ ಪೂರ್ಣಗೊಳಿಸುವಂತೆ ಸೂಚನೆ ನೀಡಲಾಗಿದೆ ಎಂದರು.

ಚಿಕಿತ್ಸೆಗೆ ಸಲಹೆ:

ಆಸ್ತಮಾ, ಶ್ವಾಸಕೋಶದ ಸಮಸ್ಯೆಗಳು, ಹೃದಯಸಂಬಂಧಿ ಕಾಯಿಲೆಗಳು, ಸಕ್ಕರೆ ಕಾಯಿಲೆ, ರಕ್ತದೊತ್ತಡ, ಟಿ.ಬಿ, ಎಚ್.ಐ.ವಿ ಅಂತಹ ಗಂಭೀರ ಕಾಯಿಲೆಯಿಂದ ಬಳಲುತ್ತಿರುವವರಿಗೆ ರೋಗ ನಿರೋಧಕ ಶಕ್ತಿ ಕಡಿಮೆ ಇರುತ್ತದೆ. ಇಂತಹ ವ್ಯಕ್ತಿಗಳಿಗೆ ಕೋವಿಡ್ ಸೋಂಕಿನ ಪರಿಣಾಮ ತೀವ್ರವಾಗಿರುತ್ತದೆ. ಕೋವಿಡ್ ಸೋಂಕಿನಂತಹ ಲಕ್ಷಣಗಳು ಕಂಡುಬಂದರೆ ತಕ್ಷಣವೇ ಆಸ್ಪತ್ರೆಗೆ ತೆರಳಿ ಪರೀಕ್ಷೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆದುಕೊಳ್ಳಲು ಸಲಹೆ ನೀಡಿದರು.

ಡಾ.ಜಗದೀಶ ಪಾಟೀಲ, ಡಾ.ನಿಲೇಶ, ಸಮಾಜ ಕಲ್ಯಾಣಾಧಿಕಾರಿ ಚೈತ್ರಾ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಂದಾನಪ್ಪ ವಡಗೇರಿ, ಪೌರಾಯುಕ್ತ ಬಸವರಾಜ ಜಿದ್ದಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಪೂಜಾರ, ವಾರ್ತಾಧಿಕಾರಿ ಬಿ.ಆರ್.ರಂಗನಾಥ್, ಆರೋಗ್ಯ ಇಲಾಖೆಯ ಚನ್ನಪ್ಪ ಇತರ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.