ADVERTISEMENT

ಕೋವಿಡ್‌ ಚಿಕಿತ್ಸೆ: ಡಿ.ಸಿ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2021, 15:17 IST
Last Updated 23 ಏಪ್ರಿಲ್ 2021, 15:17 IST
ಶಿಗ್ಗಾವಿ ಹಾಗೂ ಸವಣೂರು ತಾಲ್ಲೂಕು ಆಸ್ಪತ್ರೆಗಳಿಗೆ ಗುರುವಾರ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಭೇಟಿ ನೀಡಿ, ವ್ಯವಸ್ಥೆ ಪರಿಶೀಲಿಸಿದರು 
ಶಿಗ್ಗಾವಿ ಹಾಗೂ ಸವಣೂರು ತಾಲ್ಲೂಕು ಆಸ್ಪತ್ರೆಗಳಿಗೆ ಗುರುವಾರ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಭೇಟಿ ನೀಡಿ, ವ್ಯವಸ್ಥೆ ಪರಿಶೀಲಿಸಿದರು    

ಹಾವೇರಿ: ಕೋವಿಡ್-19 ಎರಡನೇ ಅಲೆ ಹಿನ್ನೆಲೆಯಲ್ಲಿ ಶಿಗ್ಗಾವಿ ಹಾಗೂ ಸವಣೂರು ತಾಲ್ಲೂಕು ಆಸ್ಪತ್ರೆಗಳಿಗೆ ಗುರುವಾರ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಗತ್ಯ ಬೇಡಿಕೆಗಳ ಕುರಿತಂತೆ ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ತಾಲ್ಲೂಕು ಆಸ್ಪತ್ರೆಗಳಲ್ಲಿ ದಾಸ್ತಾನಿರುವ ಜಂಬೋ ಹಾಗೂ ಮಿನಿ ಆಕ್ಸಿಜನ್ ಸಿಲಿಂಡರ್‌ಗಳ ದಾಸ್ತಾನುಗಳು, ರೆಮ್‍ಡಿಸಿವರ್ , ಔಷಧಿಗಳ ದಾಸ್ತಾನು, ಐ.ಸಿ.ಯು ಘಟಕ, ವೆಂಟಿಲೇಟರ್ ವ್ಯವಸ್ಥೆ, ಆಕ್ಸಿಜನ್ ಪೂರೈಕೆ ವ್ಯವಸ್ಥೆ ಹಾಗೂ ಆಸ್ಪತ್ರೆಯಲ್ಲಿ ಕೋವಿಡ್ ಪಾಸಿಟಿವ್ ಹಾಗೂ ಕೋವಿಡೇತರ ರೋಗಿಗಳ ಚಿಕಿತ್ಸೆಗೆ ಕೈಗೊಂಡಿರುವ ವ್ಯವಸ್ಥೆ ಕುರಿತಂತೆ ಖುದ್ದಾಗಿ ಪರಿಶೀಲನೆ ನಡೆಸಿದರು.

ರೆಮ್‍ಡಿಸಿವರ್ ಲಸಿಕೆ ಹಾಗೂ ಆಕ್ಸಿಜನ್ ಸಿಲೆಂಡರ್‌ಗಳ ಅವಶ್ಯಕತೆ ಇದ್ದರೆ ಮುಂಜಾಗ್ರತೆಯಾಗಿ ಬೇಡಿಕೆ ಸಲ್ಲಿಸಿದರೆ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಸಮಸ್ಯೆಗಳಿದ್ದರೆ ನನ್ನ ಗಮನಕ್ಕೆ ತನ್ನಿ. ತಕ್ಷಣ ಪರಿಹಾರ ಒದಗಿಸಲಾಗುವುದು. ವೈದ್ಯಾಧಿಕಾರಿಗಳ ಅವಶ್ಯವಿದ್ದರೆ ಆಯುಷ್ ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದರು.

ADVERTISEMENT

ಕೋವಿಡ್ ನಿಯಂತ್ರಣಕ್ಕೆ ಈಗಾಗಲೇ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಇದು ಜನತಾ ಕರ್ಫ್ಯೂ ಇದ್ದ ಹಾಗೆ. ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ಅಂತರ ಕಾಯ್ದುಕೊಳ್ಳಬೇಕು, ಮಾಸ್ಕ್‌ ಧರಿಸಬೇಕು ಹಾಗೂ ಮನೆಯಲ್ಲೇ ಇದ್ದರೆ ಜಿಲ್ಲೆಯಲ್ಲಿ ಕೋವಿಡ್ ಹರಡುವುದನ್ನು ನಿಯಂತ್ರಿಸಬಹುದು. ಸ್ವಯಂ ಪ್ರೇರಣೆಯಿಂದ ನಿಯಮ ಪಾಲನೆಗೆ ಮುಂದಾಗುವಂತೆ ಮನವಿ ಮಾಡಿಕೊಂಡರು.

ಶಿಗ್ಗಾವಿ ಕೋವಿಡ್ ನೋಡಲ್ ಅಧಿಕಾರಿ ಡಾ.ವಿವೇಕ, ಫಿಜಿಸಿಯನ್ ಡಾ.ಉದಯ, ಸವಣೂರ ತಾಲ್ಲೂಕು ಆಸ್ಪತ್ರೆಯ ಕೋವಿಡ್ ನೋಡಲ್ ಅಧಿಕಾರಿ ಡಾ.ರಾಜಶೇಖರ ಮೂಲಿಮನಿ, ಎಂ.ಒ. ಡಾ.ಶಂಕರಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.