ADVERTISEMENT

ಖಾಸಗಿ ಆಸ್ಪತ್ರೆಗಳಲ್ಲೂ ಕೋವಿಡ್‌ ವ್ಯಾಕ್ಸಿನ್; ದರ ನಿಗದಿ

ಕೋವ್ಯಾಕ್ಸಿನ್‌ಗೆ ₹1410 ಹಾಗೂ ಕೋವಿಶೀಲ್ಡ್‌ ಲಸಿಕೆಗೆ ₹780 ದರ ನಿಗದಿ: ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 16 ಜುಲೈ 2021, 17:06 IST
Last Updated 16 ಜುಲೈ 2021, 17:06 IST
ಹಾವೇರಿ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಅವರು ಶುಕ್ರವಾರ ಅಧಿಕಾರಿಗಳ ಸಭೆ ನಡೆಸಿದರು. ಜಿಲ್ಲಾ ಪಂಚಾಯಿತಿ ಸಿಇಒ ಮೊಹಮ್ಮದ್‌ ರೋಶನ್‌, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌.ಯೋಗೇಶ್ವರ ಇದ್ದಾರೆ  
ಹಾವೇರಿ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಅವರು ಶುಕ್ರವಾರ ಅಧಿಕಾರಿಗಳ ಸಭೆ ನಡೆಸಿದರು. ಜಿಲ್ಲಾ ಪಂಚಾಯಿತಿ ಸಿಇಒ ಮೊಹಮ್ಮದ್‌ ರೋಶನ್‌, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌.ಯೋಗೇಶ್ವರ ಇದ್ದಾರೆ     

ಹಾವೇರಿ: ‘ಜಿಲ್ಲೆಯ ಆಯ್ದ ಖಾಸಗಿ ಆಸ್ಪತ್ರೆಗಳಲ್ಲಿ ನಿಗದಿತ ಶುಲ್ಕ ಪಾವತಿಸಿ ಕೋವಿಡ್ ಲಸಿಕೆ ಪಡೆಯುವ ವ್ಯವಸ್ಥೆಗೆ ಅನುಮತಿ ನೀಡಲಾಗಿದೆ. ಸಾರ್ವಜನಿಕರು ನಿಗದಿತ ಶುಲ್ಕ ಪಾವತಿಸಿ ಲಸಿಕೆ ಪಡೆಯಬಹುದು. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮ ಮುಂದುವರಿಯಲಿದೆ’ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ‘ವಾತ್ಸಲ್ಯ’ ಮಕ್ಕಳ ಆರೋಗ್ಯ ತಪಾಸಣೆ ಯೋಜನೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು.

ಕೋವಿಡ್ ಲಸಿಕೆ ಉತ್ಪಾದನಾ ಕಂಪನಿಯಿಂದ ನೇರವಾಗಿ ಖರೀದಿ ಮಾಡಿ ಬಳಕೆ ಮಾಡಲು ಜಿಲ್ಲೆಯ ಐದು ಖಾಸಗಿ ಆಸ್ಪತ್ರೆಗಳಿಗೆ ಅನುಮತಿ ನೀಡಲಾಗಿದೆ. ಕೋವ್ಯಾಕ್ಸಿನ್ ಲಸಿಕೆಗೆ ₹1410 ಹಾಗೂ ಕೋವಿಶಿಲ್ಡ್ ಲಸಿಕೆಗೆ ₹780 ದರ ನಿಗದಿ ಮಾಡಲಾಗಿದೆ. ಜಿಲ್ಲೆಯ ವೀರಾಪುರ ಆಸ್ಪತ್ರೆ, ಮಾಗಾವಿ ಆಸ್ಪತ್ರೆ, ಹೆಗ್ಗೇರಿ ಆಸ್ಪತ್ರೆ, ಓಂ ಆಸ್ಪತ್ರೆ ಹಾಗೂ ಸಾಯಿ ಆಸ್ಪತ್ರೆಗೆ ಲಸಿಕೆ ಹಾಕಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದರು.

ADVERTISEMENT

ಜಿಲ್ಲೆಯ ಖಾಸಗಿ ಆಸ್ಪತ್ರೆಗಳು ಮುಂದೆ ಬಂದರೆ ನಿಯಮಾನುಸಾರ ಅವಕಾಶ ನೀಡಲಾಗುವುದು. ಕೋವಿಡ್ ಲಸಿಕೆ ನೀಡಲು ಮುಂದಾಗುವ ಖಾಸಗಿ ಆಸ್ಪತ್ರೆಗಳು ಕನಿಷ್ಠ 18 ಹಾಸಿಗೆ ವ್ಯವಸ್ಥೆ, ಕೆಪಿಎಂ ಕಾಯ್ದೆಯಡಿ ನೋಂದಣಿ, ಕೋಲ್ಡ್‌ಚೈನ್‌ ವ್ಯವಸ್ಥೆ ಸೇರಿದಂತೆ ಹಲವು ನಿಯಮಗಳನ್ನು ಪಾಲಿಸಬೇಕು ಎಂದು ತಿಳಿಸಿದರು.

ಮಕ್ಕಳ ತಪಾಸಣೆ:

‘ವಾತ್ಸಲ್ಯ’ ವಿಶೇಷ ಆರೋಗ್ಯ ಅಭಿಯಾನದಡಿ ಮೊದಲ ಸುತ್ತಿನ ತಪಾಸಣೆಯಲ್ಲಿ ಕೈಬಿಟ್ಟು ಹೋದ ಮಕ್ಕಳನ್ನು ಪುನಃ ಅಂಗನವಾಡಿ ಶಾಲೆಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಬೇಕು. ಈಗಾಲೇ ತಪಾಸಣೆ ಸಂದರ್ಭದಲ್ಲಿ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಮಕ್ಕಳಿಗೆ ಸೂಕ್ತ ಪೌಷ್ಟಿಕ ಆಹಾರ, ಔಷಧಿ, ನ್ಯೂಟ್ರಿಷಿಯನ್ ಪೌಡರ್ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿವಿಧ ಆರೋಗ್ಯ ಸಮಸ್ಯೆ, ನಿರೀಕ್ಷಿತ ಪ್ರಮಾಣದಲ್ಲಿ ಬೆಳವಣಿಗೆ ಇಲ್ಲದ ಮಕ್ಕಳನ್ನು ವರ್ಗವಾರು ವಿಂಗಡಿಸಿ ಸೂಕ್ತ ಚಿಕಿತ್ಸೆಗೆ ಕ್ರಮವಹಿಸಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿರುವ ಡೇ ಕೇರ್‌ಗಳಲ್ಲಿ ಆ ಮಕ್ಕಳಿಗೆ ಮೊಟ್ಟೆ, ಪೌಷ್ಟಿಕ ಆಹಾರವನ್ನು ನೀಡಬೇಕು. ಈ ಮಕ್ಕಳಿಗೆ ಆರೋಗ್ಯ ಸುರಕ್ಷಾ ಟ್ರಸ್ಟ್ ಯೋಜನೆಯಡಿ ವೈದ್ಯಕೀಯ ವೆಚ್ಚ ಭರಿಸಲು ಸಾಧ್ಯವೇ ಎಂದು ಪರಿಶೀಲಿಸಿ ಅಗತ್ಯ ಕ್ರಮವಹಿಸಬೇಕು ಎಂದರು.

ಜಿಲ್ಲಾ ಪಂಚಾಯ್ತಿ ಸಿಇಒ ಮೊಹಮ್ಮದ್‌ ರೋಶನ್‌ ಮಾತನಾಡಿ, ‘ಕೋವಿಡ್ ಲಕ್ಷಣವುಳ್ಳ ಮಕ್ಕಳಿಗೆ ಈಗಾಗಲೇ ಚಿಕಿತ್ಸೆ ನೀಡಲಾಗಿದೆ. ಈ ಮಕ್ಕಳಲ್ಲಿ ಟಿ.ಬಿ ತಪಾಸಣೆ ಕೈಗೊಳ್ಳಬೇಕು. ಗುರುತಿಸಲಾದ ಮಕ್ಕಳಿಗೆ ಪೂರಕ ಔಷಧಗಳ ಖರೀದಿಗೆ ಕ್ರಮವಹಿಸಬೇಕು’ ಎಂದು ಸೂಚನೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌. ಯೋಗೇಶ್ವರ, ಉಪವಿಭಾಗಾಧಿಕಾರಿಗಳಾದ ಶಿವಾನಂದ ಉಳ್ಳಾಗಡ್ಡಿ, ಅನ್ನಪೂರ್ಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್. ರಾಘವೇಂದ್ರಸ್ವಾಮಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಪಿ.ಆರ್. ಹಾವನೂರ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಶ್ರೀನಿವಾಸ ಆಲದರ್ತಿ, ತಾಲ್ಲೂಕು ಶಿಕ್ಷಣಾಧಿಕಾರಿಗಳು, ಶಿಶು ಅಭಿವೃದ್ಧಿ ಅಧಿಕಾರಿಗಳು, ತಾಲೂಕಾ ಆರೋಗ್ಯಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.