ADVERTISEMENT

ಪ್ರವಾಸಿ ತಾಣಗಳ ಬಂದ್‍ಗೆ ಡಿ.ಸಿ. ಸೂಚನೆ

ವಿದೇಶ ಪ್ರವಾಸದಿಂದ ಹಿಂದಿರುಗಿದವರ ಮಾಹಿತಿ ನೀಡಲು ಮನವಿ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2020, 9:33 IST
Last Updated 17 ಮಾರ್ಚ್ 2020, 9:33 IST
ಕೃಷ್ಣ ಬಾಜಪೇಯಿ 
ಕೃಷ್ಣ ಬಾಜಪೇಯಿ    

ಹಾವೇರಿ: ಕೊರೊನಾ ವೈರಸ್ ಸೋಂಕು ತಡೆಗಟ್ಟುವ ಉದ್ದೇಶದಿಂದ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಜಿಲ್ಲೆಯ ಪ್ರವಾಸಿ ತಾಣಗಳನ್ನು ತಾತ್ಕಾಲಿಕವಾಗಿ ಬಂದ್‌ ಮಾಡಲು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಕೊರೊನಾ ನಿಯಂತ್ರಣ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಸಭೆಯಲ್ಲಿ ಅವರು ಮಾತನಾಡಿದರು.

ವಿದೇಶದಿಂದ ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ಹಾಗೂ ಮೆಕ್ಕಾ ಮತ್ತು ಮದಿನಾ ಯಾತ್ರೆ ಮುಗಿಸಿ ಹಿಂದಿರುಗಿದವರ ಮಾಹಿತಿಯನ್ನು ಸಾರ್ವಜನಿಕರು ಜಿಲ್ಲಾ ಸಹಾಯವಾಣಿ ಸಂಖ್ಯೆ 08375–249102ಗೆ ಮಾಹಿತಿ ನೀಡಲು ಮನವಿ ಮಾಡಿದರು.

ADVERTISEMENT

ಕೋವಿಡ್‌–19 ಜ್ವರದ ತಪಾಸಣೆ ಹಾಗೂ ನಿಗಾವಹಿಸಲು ಜಿಲ್ಲಾ ಆಸ್ಪತ್ರೆಯಲ್ಲಿ ಸ್ಥಾಪಿಸಲಾದ ಹತ್ತು ಹಾಸಿಗೆಯ ಐಸೋಲೇಷನ್ ವಾರ್ಡ್‍ಗಳ ಜತೆಗೆ ಮೂವತ್ತು ಹಾಸಿಗೆ ಹಾಗೂ ವೆಂಟಿಲೇಟರ್ ಸೌಲಭ್ಯವಿರುವ ಮಾಗಾವಿ ಖಾಸಗಿ ಆಸ್ಪತ್ರೆಯನ್ನು ಬಳಸಿಕೊಳ್ಳಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಸೂಚಿಸಿದರು.

ಮಾಗಾವಿ ಆಸ್ಪತ್ರೆಯ ಸ್ವಚ್ಛತೆ, ನೀರಿನ ವ್ಯವಸ್ಥೆ, ಅಗತ್ಯವಾದ ವೈದ್ಯರು ಹಾಗೂ ಅರೇವೈದ್ಯಕೀಯ ಸಿಬ್ಬಂದಿಗೆ ವೈರಸ್‌ ತಡೆಯ ಚಿಕಿತ್ಸೆ ಕುರಿತು ತರಬೇತಿ ನೀಡಿ ನಿಯೋಜಿಸಲು ಸಲಹೆ ನೀಡಿದರು.

ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ಗುಂಪು ಸೇರುವುದನ್ನು ಮಿತಗೊಳಿಸಿ, ವೈರಸ್‌ ಕುರಿತು ಜಾಗೃತಿ ಮೂಡಿಸಿ, ದೈನಂದಿನ ಜೀವನಕ್ಕೆ ಯಾವುದೇ ತೊಂದರೆಯಾಗದಂತೆ ಕ್ರಮವಹಿಸಿ. ಸ್ವಚ್ಛತೆ ಹಾಗೂ ಶುದ್ಧ ನೀರಿನ ಪೂರೈಕೆಗೆ ಆದ್ಯತೆ ನೀಡಿ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಂದ್ರ ದೊಡ್ಡಮನಿ ಮಾತನಾಡಿ, ಈವರೆಗೆ ಜಿಲ್ಲೆಯಲ್ಲಿ ವೈರಸ್‌ನ ಶಂಕಿತ ಪ್ರಕರಣಗಳಲ್ಲಿ ಯಾರಲ್ಲಿಯೂ ಪಾಸಿಟಿವ್ ದೃಢಪಟ್ಟಿಲ್ಲ. ಜಿಲ್ಲಾ ಆಸ್ಪತ್ರೆಯಲ್ಲಿ ಮೆಕ್ಕಾ–ಮದಿನಾ ಯಾತ್ರೆಯಿಂದ ಹಿಂದಿರುಗಿದ ಮೂರು ಜನರನ್ನು ಐಸೋಲೇಷನ್ ವಾರ್ಡ್‍ನಲ್ಲಿರಿಸಿ ನಿಗಾ ವಹಿಸಲಾಗಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜು, ಜಿಲ್ಲಾ ಪಂಚಾಯಿತಿ ಸಿಇಒ ರಮೇಶ ದೇಸಾಯಿ, ಉಪವಿಭಾಗಾಧಿಕಾರಿ ದೀಲಿಶ್ ಸಸಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ನಾಗರಾಜ ನಾಯಕ, ಡಾ.ಜಗದೀಶ, ಡಾ.ಸಂತೋಷ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಅಂದಾನಪ್ಪ ವಡಗೇರಿ, ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯ ಹಾವೇರಿ ವಿಭಾಗೀಯ ನಿಯಂತ್ರಣಾಧಿಕಾರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.