ಹಾವೇರಿ: ತಾಲ್ಲೂಕಿನ ಕೊರಡೂರ ಗ್ರಾಮದ ಮಾಜಿ ಶಾಸಕ ಡಾ.ಚಿತ್ತರಂಜನ ಕಲಕೋಟಿ (90) ಅವರು ವಯೋಸಹಜ ಕಾಯಿಲೆಯಿಂದ ಭಾನುವಾರ ನಿಧನರಾದರು.
ಅವರಿಗೆ ಪತ್ನಿ ಅನ್ನಪೂರ್ಣಮ್ಮ, ಪುತ್ರ ಮತ್ತು ಇಬ್ಬರು ಪುತ್ರಿಯರು ಇದ್ದಾರೆ. ಅಂತ್ಯಕ್ರಿಯೆಯು ಕೊರಡೂರಿನಲ್ಲಿ ಆ.16ರಂದು ಮಧ್ಯಾಹ್ನ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಡಾ.ಚಿತ್ತರಂಜನ ಅವರುಹಾವೇರಿ ವಿಧಾನಸಭಾ ಕ್ಷೇತ್ರದಿಂದ 1983 ಹಾಗೂ 1985ರಲ್ಲಿ ಜನತಾ ಪರಿವಾರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಇದಕ್ಕೂ ಮುನ್ನ ಹಾವೇರಿ ತಾಲ್ಲೂಕು ಪಂಚಾಯಿತಿ ಸದಸ್ಯರಾಗಿ, ಹಾವೇರಿ ಎಪಿಎಂಸಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ರಾಜಕೀಯ ಕ್ಷೇತ್ರದಲ್ಲಿ ಪ್ರಾಮಾಣಿಕ ಹಾಗೂ ಸರಳ ಸಜ್ಜನಿಕೆಯ ರಾಜಕಾರಣಿ ಎಂದು ಗುರುತಿಸಿಕೊಂಡಿದ್ದರು.
ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಮತ್ತು ಎಸ್.ಆರ್.ಬೊಮ್ಮಾಯಿ (ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತಂದೆ) ಅವರಿಗೆ ಪರಮಾಪ್ತರಾಗಿದ್ದರು. ಸಂಗೂರ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಪ್ರಮುಖ ಪಾತ್ರ ವಹಿಸಿ, ಅಭಿವೃದ್ಧಿಗೂ ಶ್ರಮಿಸಿದರು.
1958ರಲ್ಲಿ ಮುಂಬೈನ ಪೋದಾರ್ ಮೆಡಿಕಲ್ ಕಾಲೇಜಿನಿಂದ ಎಂಬಿಬಿಎಸ್ ಪದವಿಗೆ ಸರಿಸಮನಾದ ಜಿಎಫ್ಎಎಂ ಪದವಿ ಪಡೆದು, ಕೊರಡೂರಿನ ಗಾಂಧಿ ಸೇವಾ ಆಶ್ರಮದಲ್ಲಿ ಉಚಿತ ವೈದ್ಯಕೀಯ ಸೇವೆ ನೀಡುವ ಮೂಲಕ ಜನರಿಗೆ ಪ್ರೀತಿಪಾತ್ರರಾಗಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.