ಹಾವೇರಿ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕಾಗಿ ಮದ್ಯಮುಕ್ತ ರಾಜ್ಯವನ್ನಾಗಿ ಸರ್ಕಾರ ಘೋಷಿಸಬೇಕು.ಸರ್ಕಾರ ಆದಾಯ ಗಳಿಕೆಯ ಯೋಚನೆ ಮಾಡದೇ ಮದ್ಯ, ಸಿಗರೇಟ್, ಗುಟ್ಕಾ ಸೇರಿದಂತೆ ಮಾದಕ ವಸ್ತುಗಳನ್ನು ಪೂರ್ಣವಾಗಿ ನಿಷೇಧಿಸಬೇಕು ಎಂದು ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಒತ್ತಾಯಿಸಿದರು.
ನಗರದ ಜಿಲ್ಲಾ ಗುರುಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಜಿಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಮ.ನಿ.ಪ್ರ.ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದ ಇಳಕಲ್ಲಿನ ಡಾ.ಮಹಾಂತ ಶಿವಯೋಗಿಗಳು ಸಮಾಜ ಸುಧಾರಣೆಗೆ ತಮ್ಮ ಜೀವನ ಮುಡುಪಾಗಿಟ್ಟಿದ್ದ ದೊಡ್ಡ ಯುತಿಗಳು. ರೋಗ ಮುಕ್ತ ಕರ್ನಾಟಕ ಹಾಗೂ ದೇಶ ನಿರ್ಮಾಣದ ಸದುದ್ದೇಶದಿಂದ ಗ್ರಾಮಗಳಲ್ಲಿ ಸಂಚರಿಸಿ ತಮ್ಮ ಜೋಳಿಗೆಗೆ ವ್ಯಸನಿಗಳಿಂದ ದುಶ್ವಟಗಳ ಭಿಕ್ಷೆ ಹಾಕಿಸಿಕೊಳ್ಳುತ್ತಿದ್ದ ಮಹಾನ್ ವ್ಯಕ್ತಿ ಎಂದು ಬಣ್ಣಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ ಮಾತನಾಡಿ,ಮದ್ಯಪಾನ ಮತ್ತು ಧೂಮಪಾನ ಮಾತ್ರ ವ್ಯಸನಗಳಲ್ಲ. ಅತಿಯಾದ ಮೊಬೈಲ್ ಬಳಕೆ ಸಹ ಒಂದು ವ್ಯಸನವಾಗಿದೆ. ವಿದ್ಯಾರ್ಥಿಗಳು ಮೊಬೈಲ್ ಬಳಕೆ ಕಡಿಮೆ ಮಾಡಿ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಆಸ್ಪತ್ರೆ ಮಾನಸಿಕ ರೋಗ ತಜ್ಞ ಡಾ.ವಿಜಯಕುಮಾರ ಬಳಿಗಾರ ವಿಶೇಷ ಉಪನ್ಯಾಸ ನೀಡಿದರು. ಡಾ.ಜಯಾನಂದ, ಮೋಟೆಬೆನ್ನೂರ ಡಿಇಡಿ ಕಾಲೇಜು ಪ್ರಾಚಾರ್ಯ ಸುರೇಶ, ಪ್ರವಾಸಿ ಮಿತ್ರ ಮುಖ್ಯಸ್ಥರಾದ ಕುಂಚೂರ ಇದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಆರ್.ವಿ. ಚಿನ್ನಿಕಟ್ಟಿ ಸ್ವಾಗತಿಸಿದರು. ವಾರ್ತಾಧಿಕಾರಿ ಡಾ.ಬಿ.ಆರ್.ರಂಗನಾಥ್ ವಂದಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.