
ರಾಣೆಬೆನ್ನೂರು: ತಾಲ್ಲೂಕಿನ ಕೂನಬೇವು ಮತ್ತು ಕಜ್ಜರಿ ಸೇರಿದಂತೆ ಗ್ರಾಮೀಣ ಪ್ರದೇಶಗಳಿಗೆ ಸಮಪರ್ಕವಾಗಿ ಬಸ್ ಬಿಡಬೇಕೆಂದು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ವಿದ್ಯಾರ್ಥಿಗಳು ಶನಿವಾರ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿ ಘಟಕ ವ್ಯವಸ್ಥಾಪಕ ಆರ್.ಸಿ.ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.
ಎಸ್ಎಫ್ಐ ಮುಖಂಡ ಅರುಣ್ ನಾಗವತ್ ಮಾತನಾಡಿ, ತಾಲ್ಲೂಕಿನ ವಿವಿಧ ಗ್ರಾಮೀಣ ಪ್ರದೇಶಗಳಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು, ನೌಕರರು, ರೈತರು, ಕಾರ್ಮಿಕರು, ಸಾರ್ವಜನಿಕರು ಸೇರಿದಂತೆ ನಿತ್ಯ ಸಾವಿರಾರು ಜನರು ಪಟ್ಟಣಕ್ಕೆ ಬೇರೆ ಬೇರೆ ಕೆಲಸಗಳಿಗೆ ಆಗಮಿಸುತ್ತಾರೆ. ಆದರೆ, ಗ್ರಾಮೀಣ ಪ್ರದೇಶಗಳಿಗೆ ಸಮರ್ಪಕ ಬಸ್ ಸೌಲಭ್ಯ ಇಲ್ಲದಿರುವುದರಿಂದ ಸಾರಿಗೆ ಸಮಸ್ಯೆಗಳು ಹೆಚ್ಚಾಗುತ್ತಿವೆ ಎಂದರು.
ಈಗಾಗಲೇ ದ್ವಿತೀಯ ವಾರ್ಷಿಕ ಪರೀಕ್ಷೆಆರಂಭವಾಗಿವೆ. ಇದು ವಾರ್ಷಿಕ ಪರೀಕ್ಷಾ ಸಮಯವಾಗಿದ್ದರಿಂದ ಸಂಬಂಧಿಸಿದ ಕೆಎಸ್ಆರ್ಟಿಸಿ ಅಧಿಕಾರಿಗಳು ಗ್ರಾಮೀಣ ಪ್ರದೇಶಗಳಿಗೆ ಸಮರ್ಪಕವಾಗಿ ಬಸ್ ಬಿಡಬೇಕು ಎಂದರು.
ಸೋಮವಾರದೊಳಗೆ ವಿದ್ಯಾರ್ಥಿಗಳ ಬೇಡಿಕೆ ಈಡೇರಿಸಲು ಮುಂದಾಗದಿದ್ದರೆ ಎಸ್ಎಫ್ಐ ನೇತೃತ್ವದಲ್ಲಿ ಬಸ್ ನಿಲ್ದಾಣ ಬಂದ್ ಮಾಡಿ ಬೃಹತ್ ಪ್ರತಿಭಟನೆ ನಡೆಸಲಾಗುವುದುಐ ಎಂದು ಆಗ್ರಹಿಸಿದರು.
ವಿದ್ಯಾರ್ಥಿನಿ ಅನುಷ ಷಣ್ಮುಕಪ್ಪ ಮಾತನಾಡಿ, ಅನೇಕ ಬಾರಿ ಮನವಿ ಸಲ್ಲಿಸಿದರೂ ಸರಿಯಾಗಿ ಬಸ್ ಬಿಡುತ್ತಿಲ್ಲ, ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ವಿದ್ಯಾರ್ಥಿಗಳ ತಾಳ್ಮೆ ಪರೀಕ್ಷೆ ಮಾಡಬೇಡಿ ಕೂಡಲೇ ನಮ್ಮ ಹಳ್ಳಿಗಳಿಗೆ ಬಸ್ ಬಿಡಿ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಲಕ್ಮಿ ಭರಮಪ್ಪ, ಪವಿತ್ರ ಯಲಪ್ಪ, ರೇಣುಕಾ ಬಾರ್ಕಿ, ಗಂಗಮ್ಮ ಟಿ, ಲಲಿತಾ ಬಿ, ಚೈತ್ರ, ಕಾವ್ಯಾ ಬಾರ್ಕಿ ಸೇರಿದಂತೆ ಅನೇಕ ವಿದ್ಯಾರ್ಥಿನಿಯರು ಇದ್ದರು. ನಗರ ಠಾಣೆ ಪೊಲೀಸರು ಬಂದೋಬಸ್ತ್ ಒದಗಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.