ADVERTISEMENT

‘ಶಿಕ್ಷಕ ವೃತ್ತಿ ಎಲ್ಲಕ್ಕಿಂತ ಶ್ರೇಷ್ಠ’

ಡಾ.ಸರ್ವಪಲ್ಲಿ ರಾಧಾಕೃಷ್ಣನ್‌ ಜನ್ಮದಿನ: 21 ಶಿಕ್ಷಕರಿಗೆ ‘ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ’ ಪ್ರಶಸ್ತಿ ಪ್ರದಾನ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2021, 12:53 IST
Last Updated 5 ಸೆಪ್ಟೆಂಬರ್ 2021, 12:53 IST
ಹಾವೇರಿ ನಗರದ ಜಿಲ್ಲಾ ಗುರುಭವನದಲ್ಲಿ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ 2021–22ನೇ ಸಾಲಿನ ‘ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಶಾಸಕ ನೆಹರು ಓಲೇಕಾರ, ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಡಿಡಿಪಿಐ ಅಂದಾನಪ್ಪ ವಡಗೇರಿ ಇದ್ದಾರೆ  –ಪ್ರಜಾವಾಣಿ ಚಿತ್ರ 
ಹಾವೇರಿ ನಗರದ ಜಿಲ್ಲಾ ಗುರುಭವನದಲ್ಲಿ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ 2021–22ನೇ ಸಾಲಿನ ‘ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಶಾಸಕ ನೆಹರು ಓಲೇಕಾರ, ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಡಿಡಿಪಿಐ ಅಂದಾನಪ್ಪ ವಡಗೇರಿ ಇದ್ದಾರೆ  –ಪ್ರಜಾವಾಣಿ ಚಿತ್ರ    

ಹಾವೇರಿ: ‘ಶಿಕ್ಷಕ ವೃತ್ತಿ ಸಾಮಾನ್ಯ ವೃತ್ತಿಯಾಗಿರದೇ ಶ್ರೇಷ್ಠ ವೃತ್ತಿಯಾಗಿದೆ. ವಿದ್ಯಾರ್ಥಿಗಳನ್ನು ಸುಂದರ ಮೂರ್ತಿಗಳನ್ನಾಗಿ ರೂಪಿಸುವ ಶಿಲ್ಪಿಯಾದ ಶಿಕ್ಷಕ ಸಮಾಜಕ್ಕೆ ಉತ್ತಮ ಪ್ರಜೆಗಳನ್ನು ರೂಪಿಸುವ ಜವಾಬ್ದಾರಿ ಉಳ್ಳವನಾಗಿರುತ್ತಾನೆ’ ಎಂದು ನೆಹರು ಓಲೇಕಾರ ಹೇಳಿದರು.

ಡಾ.ಸರ್ವಪಲ್ಲಿ ರಾಧಾಕೃಷ್ಣನ್‍ ಅವರ 133ನೇ ಜನ್ಮ ದಿನದ ಅಂಗವಾಗಿ ಜಿಲ್ಲಾ ಗುರುಭವನದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಹಾಗೂ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿರು. ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನವನ್ನು ಅವರ ಅಭಿಲಾಷೆಯಂತೆ ಶಿಕ್ಷಕರ ದಿನವನ್ನಾಗಿ ಆಚರಿಲಾಗುತ್ತಿದೆ ಎಂದರು.

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳೊಂದಿಗೆ ಪಾಲಕರು ಸ್ಪರ್ಧಿಸಬೇಕಾಗಿದೆ. ಮಕ್ಕಳಿಗೆ ಶಿಕ್ಷಕರ ಜೊತೆಗೆ ಪಾಲಕರ ಬೆಂಬಲವೂ ಬೇಕು. ಇಂದು ಇಡೀ ದೇಶವೇ ಶಿಕ್ಷಕರಿಗೆ ನಮನವನ್ನು ಸಲ್ಲಿಸುತ್ತಿದೆ ಎಂದು ತಿಳಿಸಿದರು.

ADVERTISEMENT

ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಮಾತನಾಡಿ, ಸಮಾಜದಲ್ಲಿ ಉತ್ತಮ ಪ್ರಜೆಯಾಗಲು ಹಾಗೂ ಸನ್ಮಾರ್ಗದಲ್ಲಿ ನಡೆಯುವಂತೆ ದಾರಿ ತೋರಿಸುವವನೇ ಗುರು. ಅಂದು ಹೆಣ್ಣು ಮಕ್ಕಳನ್ನು ಅಸ್ಪೃಶ್ಯರಂತೆ ಕಾಣುವ ಸಂದರ್ಭದಲ್ಲಿ ವಿಶೇಷವಾಗಿ ಶಾಲೆ ತೆರೆದು ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಲು ಕಾರಣರಾದ ಸಾವಿತ್ರಿಬಾಯಿ ಫುಲೆ ಅವರ ಹೆಸರಿನಲ್ಲಿ ರಾಜ್ಯ ಸರ್ಕಾರ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಘೊಷಣೆ ಮಾಡಬೇಕು ಎಂದು ಮನವಿ ಮಾಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಂದಾನಪ್ಪ ವಡಗೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಮಾರಂಭದಲ್ಲಿ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಶ್ರೇಣಿಯಲ್ಲಿ ಬಂದ ವಿದ್ಯಾರ್ಥಿ ಸ್ನೇಹಾ ಹಾವೇರಿಯನ್ನು ಸನ್ಮಾನಿಸಲಾಯಿತು.

ಪ್ರಶಸ್ತಿ ಪುರಸ್ಕೃತ 21 ಶಿಕ್ಷಕರಿಗೆ ‘ಜಿಲ್ಲಾ ಅತ್ಯುತ್ತಮ ಶಿಕ್ಷಕ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ನಿವೃತ್ತಿ, ಸ್ವಯಂ ನಿವೃತ್ತಿ ಹೊಂದಿದ ಶಿಕ್ಷಕರಿಗೆ ಸನ್ಮಾನಿಸಲಾಯಿತು ಹಾಗೂ ಸೇವಾ ನಿರತವಾಗಿದ್ದ ಅಕಾಲಿಕ ಮರಣ ಹೊಂದಿದ ಶಿಕ್ಷಕರ ಕುಟುಂಬಗಳನ್ನು ಗೌರವಿಸಲಾಯಿತು.

ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ ಸಂಗೂರ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ಪಾಟೀಲ, ಡಯಟ್‌ ಪ್ರಭಾರ ಉಪನಿರ್ದೇಶಕ ಝಡ್.ಎಂ.ಖಾಜಿ, ಪುಷ್ಪಲತಾ ಬಿದರಿ, ಶಿಕ್ಷಕರ ಸಂಘದ ಪದಾಧಿಕಾರಿಗಳಾದ ವಿಜಯೇಂದ್ರ ಯತ್ನಳ್ಳಿ, ಎಸ್.ಸಿ ಕಲ್ಮನಿ, ಎಚ್.ಪಿ. ಬಣಕಾರ, ಎಂ.ಬಿ.ರಮೇಶ, ಜಿ.ಆರ್.ಭಟ್, ಎಂ.ಎಸ್. ಕೆಂಚನಗೌಡ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.