ADVERTISEMENT

ಹಾನಗಲ್ ಕ್ಷೇತ್ರದ ಆಪದ್ಬಾಂಧವ ಶ್ರೀನಿವಾಸ ಮಾನೆ

ಮುಖ್ಯಮಂತ್ರಿ ಬೊಮ್ಮಾಯಿಗೆ ತಿರುಗೇಟು ನೀಡಿದ ಡಿ.ಕೆ. ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2021, 14:56 IST
Last Updated 18 ಅಕ್ಟೋಬರ್ 2021, 14:56 IST
ತಿಳವಳ್ಳಿ ಸಮೀಪದ ಕೆಲವರಕೊಪ್ಪ ಗ್ರಾಮದಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿದರು
ತಿಳವಳ್ಳಿ ಸಮೀಪದ ಕೆಲವರಕೊಪ್ಪ ಗ್ರಾಮದಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿದರು   

ತಿಳವಳ್ಳಿ: ‘ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋರೂ ಕ್ಷೇತ್ರ ಬಿಟ್ಟು ಹೋಗದೆ ಮೂರೂವರೆ ವರ್ಷ ಹಾನಗಲ್ ಜನರ ಕಷ್ಟಗಳಲ್ಲಿ ಭಾಗಿಯಾಗಿ ಕ್ಷೇತ್ರದ ಜನರ ಆಪದ್ಬಾಂಧವರಾಗಿ ಶ್ರೀನಿವಾಸ ಮಾನೆ ಮೆಚ್ಚುಗೆ ಗಳಿಸಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಸಮೀಪದ ಕೆಲವರಕೊಪ್ಪ ಗ್ರಾಮದಲ್ಲಿ ನಡೆದ ಉಪಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವೀರಾವೇಶದಿಂದ ಮಾತಾಡಿದ್ದಾರೆ. ಕ್ಷೇತ್ರದಲ್ಲಾಗಿರುವ ಅಭಿವೃದ್ಧಿ ಕಾರ್ಯವನ್ನು ನೋಡಿ ಎಂದು ಸವಾಲು ಹಾಕಿದ್ದಾರೆ. ನೋಡೋಣ ಎಂದು ನಡೆದುಕೊಂಡೇ ಈಗ ನಿಮ್ಮೂರಿಗೆ ಬಂದೆ. ರಸ್ತೆಗಳು ಕಣಿವೆ ಇದ್ದಂತಿದೆ. ಇದೇನಾ ಅಭಿವೃದ್ಧಿ ಕೆಲಸ’ ಎಂದು ವ್ಯಂಗ್ಯವಾಡಿದರು.

ADVERTISEMENT

‘ಬಿಜೆಪಿಯವರು ಕೇವಲ ಸುಳ್ಳು ಹೇಳಿ ಮೋಸ ಮಾಡುತ್ತಿದ್ದಾರೆ. ಸರ್ಕಾರ ಮಾತು ಕೊಟ್ಟರೆ ಅದನ್ನು ಉಳಿಸಿಕೊಳ್ಳಬೇಕು. ಅವರು ರೈತ, ಕಾರ್ಮಿಕ, ಕೊರೊನಾ ಸೋಂಕಿತರು, ಸತ್ತವರ ಕುಟುಂಬಕ್ಕೆ ಸಹಾಯ ಮಾಡಲಿಲ್ಲ. ಆದರೂ ಅದ್ಯಾವ ಮುಖ ಇಟ್ಟುಕೊಂಡು ಬಂದು ಮತ ಕೇಳುತ್ತಿದ್ದಾರೋ ಗೊತ್ತಿಲ್ಲ’ ಎಂದು ಹರಿಹಾಯ್ದರು.

‘ಇಲ್ಲಿ ಕೇವಲ ಶ್ರೀನಿವಾಸ ಮಾನೆ ಅಭ್ಯರ್ಥಿಯಲ್ಲ. ಇಲ್ಲಿರುವ ಪ್ರತಿಯೊಬ್ಬ ಮತದಾರನೂ ಅಭ್ಯರ್ಥಿಯೇ. ಕೇವಲ ನೀವು ಮಾತ್ರ ಮಾನೆ ಅವರಿಗೆ ಮತ ಹಾಕಿದರೆ ಸಾಲದು. ನಿಮ್ಮ ಜತೆ ಇನ್ನೂ ಐದು ಜನ ಮತಹಾಕುವಂತೆ ಮಾಡಬೇಕು. ಆಗ ಮಾನೆ 25 ಸಾವಿರ ಮತಗಳ ಅಂತರದಲ್ಲಿ ಗೆಲ್ಲಲು ಸಾಧ್ಯ’ ಎಂದರು.

ಅಭ್ಯರ್ಥಿ ಶ್ರೀನಿವಾಸ ಮಾನೆ, ಕೆಪಿಸಿಸಿ ಕಾರ್ಯಧ್ಯಕ್ಷ ಸಲೀಂ ಅಹಮದ್, ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ, ಎಚ್.ಕೆ. ಪಾಟೀಲ್, ಎ.ಎಂ. ಹಿಂಡಸಗೇರಿ, ಅಲ್ಲಂ ವೀರಭದ್ರಪ್ಪ, ಮನೋಹರ್ ತಹಶೀಲ್ದಾರ್, ಪಿ.ಟಿ. ಪರಮೇಶ್ವರ ನಾಯಕ್, ಪುಷ್ಪಾ ಅಮರನಾಥ, ಯಾಸೀಖಾನ್ ಮಕಾನದಾರ, ಚಂದ್ರಪ್ಪ ಜಾಲಗಾರ, ಅನೀಲ ಪಾಟೀಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.