ಹಾವೇರಿ: ಬಾಲಕಾರ್ಮಿಕ ನಿಷೇಧ ಕಾಯ್ದೆಯಡಿ 14 ವರ್ಷದೊಳಗಿನ ಮಕ್ಕಳನ್ನು ಕೆಲಸ ಮಾಡಿಸಿಕೊಂಡಲ್ಲಿ ಶಿಕ್ಷೆ ವಿಧಿಸಬಹುದಾಗಿದೆ. ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸುವ ಮೂಲಕ ಅವರಿಗೆ ಉತ್ತಮ ಬದುಕು ಕಟ್ಟಿಕೊಡಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುಟ್ಟರಾಜು ಹೇಳಿದರು.
ನಗರದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಸರ್ಕಾರಿ ವೈದ್ಯಕೀಯ ಕಾಲೇಜು ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಅಭಿಯೋಜನಾ ಇಲಾಖೆ, ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ಕಾರ್ಮಿಕ ಇಲಾಖೆ ಸಹಯೋಗದಲ್ಲಿ ಈಚೆಗೆ ಜರುಗಿದ ಬಾಲ್ಯ ವಿವಾಹ ಮತ್ತು ಬಾಲ ಕಾರ್ಮಿಕ ನಿಷೇಧ ಕಾಯ್ದೆ ಕುರಿತು ಕಾನೂನು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬಾಲ್ಯ ವಿವಾಹವನ್ನು ನಿಷೇಧಿಸಲಾಗಿದ್ದು, ವಿವಾಹ ಮಾಡಲು ಹುಡುಗಿಯರಿಗೆ ಕನಿಷ್ಠ 18 ಹಾಗೂ ಹುಡುಗರಿಗೆ 21 ವರ್ಷ ನಿಗದಿಪಡಿಸಲಾಗಿದೆ. ಬಾಲ್ಯ ವಿವಾಹ ಮಾಡಿಸುವುದು ಅಪರಾಧವಾಗಿದೆ. ಬಾಲ್ಯ ವಿವಾಹ ತಡೆಯಲು ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಹೇಳಿದರು.
ಜಿಲ್ಲಾ ನ್ಯಾಯಾಲಯದ ಪ್ರಧಾನ ಸರ್ಕಾರಿ ಅಭಿಯೋಜಕ ಎಸ್.ಎಂ.ಗೆಜ್ಜಿಹಳ್ಳಿ ಅವರು ಬಾಲ್ಯ ವಿವಾಹ ಮತ್ತು ಬಾಲ ಕಾರ್ಮಿಕ ನಿಷೇಧ ಕಾಯ್ದೆ ಕುರಿತು ಉಪನ್ಯಾಸ ನೀಡಿದರು. ಕಾರ್ಮಿಕ ನಿರೀಕ್ಷಕರಾದ ಟಿ.ಎಸ್.ಲತಾ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಐ.ಎಸ್. ನಂದಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.