ಹಾವೇರಿ: ಕಾರ್ಮಿಕ ಇಲಾಖೆಯಡಿ ನೋಂದಾಯಿತ ಕಟ್ಟಡ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗೆ ಆರೋಗ್ಯ ಸೇವೆ ನೀಡುವ ಸಂಚಾರಿ ಆರೋಗ್ಯ ಕ್ಲಿನಿಕ್ ವಾಹನ ಹಾವೇರಿ ಜಿಲ್ಲೆಗೆ ನೀಡಲಾಗಿದೆ. ಕಾರ್ಮಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಪುಟ್ಟರಾಜು ಹೇಳಿದರು.
ನಗರದ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದ ಆವರಣದಲ್ಲಿ ಮಂಗಳವಾರ ಸಂಚಾರಿ ಆರೋಗ್ಯ ಕ್ಲಿನಿಕ್ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಈ ವಾಹನವು ಪ್ರತಿ ದಿನ ಜಿಲ್ಲೆಯ ಒಂದೊಂದು ತಾಲ್ಲೂಕಿನಲ್ಲಿ ಸಂಚರಿಸಿ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಪ್ರತಿ ದಿನ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರವೆರೆಗೆ ಹಾಗೂ ಮಧ್ಯಾಹ್ನ 2.30 ರಿಂದ ಸಂಜೆಯವರೆಗೆ 5.30ರವರೆಗೆ ತಪಾಸಣೆ ಮತ್ತು ಚಿಕಿತ್ಸೆ ನೀಡಲಿದೆ ಎಂದರು.
ಕಾರ್ಮಿಕ ಅಧಿಕಾರಿ ಸೂರ್ಯಪ್ಪ ಡೊಂಬರಮತ್ತೂರ ಮಾತನಾಡಿ, ನೋಂದಾಯಿತ ಕಟ್ಟಡ ಕಾರ್ಮಿಕರೆಲ್ಲರೂ ಉಚಿತವಾಗಿ ಚಿಕಿತ್ಸೆ ಪಡೆಯಬಹುದಾಗಿದೆ. ವಾಹನದ ಅತ್ಯಾಧುನಿಕ ಸೌಲಭ್ಯಗಳಾದ ಆಧುನಿಕ ಸ್ಟ್ರೆಚರ್, ಬೆಡ್, ಆಕ್ಸಿಜನ್ ಪರಿಕರಗಳು, ವೀಲ್ಚೇರ್, ಪ್ರಯೋಗಾಲಯ ಇತರ ಸಲಕರಣೆಗಳನ್ನು ಹೊಂದಿದೆ. ಒಬ್ಬ ವೈದ್ಯ, ಶುಶ್ರೂಷಕಿ, ಫಾರ್ಮಸಿಸ್ಟ್, ಚಾಲಕ ಹಾಗೂ ಸಹಾಯಕ ಸಿಬ್ಬಂದಿ ಕಾರ್ಯನಿರ್ವಹಿಸುತ್ತಾರೆ. ಪ್ರಾಥಮಿಕ ಆರೋಗ್ಯ ಸೇವಾ ಕೇಂದ್ರದ ವ್ಯಾಪ್ತಿಯಲ್ಲಿರುವಂತಹ ಎಲ್ಲಾ ಸೇವೆಗಳಯ ಲಭ್ಯವಿದೆ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.