ರಾಣೆಬೆನ್ನೂರಿನ ತಾಲ್ಲೂಕಿನಾದ್ಯಂತ ಸತತವಾಗಿ ಸುರಿಯುತ್ತಿರುವ ಮಳೆಯಿಂದ, ಪ್ರಕೃತಿ ವಿಕೋಪದಿಂದ ರೈತರಿಗೆ ಸೂಕ್ತ ಬೆಳೆ ಪರಿಹಾರ ಮತ್ತು ಬೆಳೆ ವಿಮೆ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಸದಸ್ಯರು ನಗರದ ಬಸ್ ನಿಲ್ದಾಣದ ಬಳಿ ಬೃಹತ್ ಪ್ರತಿಭಟನೆ ನಡೆಸಿ, ನಂತರ ತಹಶೀಲ್ದಾರ ಆರ್.ಎಚ್. ಭಾಗವಾನ ಅವರಿಗೆ ಮನವಿ ಸಲ್ಲಿಸಿದರು
ರಾಣೆಬೆನ್ನೂರು: ರೈತರ ಸಂಪೂರ್ಣ ಸಾಲ ಮನ್ನಾ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಸೋಮವಾರ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಹಾಗೂ ತಾಲ್ಲೂಕಿನ ರೈತರು ಮಿನಿ ವಿಧಾನಸೌಧರ ಬಳಿ ಹಳೇ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ನಂತರ ತಹಶೀಲ್ದಾರ್ ಆರ್.ಎಚ್. ಭಾಗವಾನ್ ಅವರಿಗೆ ಮನವಿ ಸಲ್ಲಿಸಿದರು.
2024-25ನೇ ಸಾಲಿನಲ್ಲಿ ಬೆಳೆ ಪರಿಹಾರ ನಷ್ಟ ಸರಿಪಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಯೂರಿಯಾ ಗೊಬ್ಬರವನ್ನು ಸಮರ್ಪಕವಾಗಿ ಪೂರೈಸಿ ಪ್ರತಿವರ್ಷವೂ ರೈತರಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು. ರೈತರ ಹೊಲಗಳಿಗೆ ಸಂಪರ್ಕಿಸುವ ರಸ್ತೆಗಳನ್ನು ಸರಿಪಡಿಸಬೇಕು. ಫಸಲ್ ಬಿಮಾ ಯೋಜನೆಯ ಹಣವನ್ನು ಕೆಲವೊಂದು ರೈತರ ಖಾತೆಗೆ ಜಮಾ ಆಗದೆ ಇರುವುದನ್ನು ಸರಿಪಡಿಸಬೇಕೆಂದು ರೈತರು ಆಗ್ರಹಿಸಿದರು.
ರೈತ ಮುಖಂಡ ಹನುಮಂತಪ್ಪ ಕಬ್ಬಾರ ಮಾತನಾಡಿ, ‘ಅತಿವೃಷ್ಟಿಯಿಂದ ಬೆಳೆಹಾನಿಯಾಗಿರುವ ರೈತರಿಗೆ ತಕ್ಷಣ ಪರಿಹಾರ ನೀಡಬೇಕು. ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಶೀಘ್ರ ಪರಿಹಾರ ನೀಡಬೇಕು. 2023-24ನೇ ಸಾಲಿನ ಹಿಂಗಾರು ಮತ್ತು ಮುಂಗಾರಿನ ಬೆಳೆ ವಿಮೆಯನ್ನು ಶೀಘ್ರವೇ ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿದರು.
ಮಾಜಿ ಸೈನಿಕರಿಗೆ ಶೀಘ್ರವೇ ಭೂಮಿ ಮಂಜೂರು ಮಾಡಬೇಕು. ನಗರದ ನಗರಸಭೆ ವ್ಯಾಪ್ತಿಗೆ ಬರುವ 24/7 ಸಂಪೂರ್ಣವಾಗಿ ಕಳಪೆ ಕಾಮಗಾರಿಯಾಗಿದ್ದು, ಇದರ ಬಗ್ಗೆ ಸಂಪೂರ್ಣ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.
ಕೆರೆಗಳ ಒತ್ತುವರಿಗಳನ್ನು ತೆರವುಗೊಳಿಸಬೇಕು. ಹೂಳೆತ್ತಿ ಕೆರೆ ತುಂಬಿಸುವ ಯೋಜನೆಗಳನ್ನು ಕೈಗೆತ್ತಿಕೊಳ್ಳಬೇಕು. ಇದರಿಂದ ನೀರಿನ ಸಂಗ್ರಹಣೆ ಮಾಡಿದರೆ ರೈತರಿಗೆ ಅನುಕೂಲವಾಗುತ್ತದೆ. ನಂತರ ನದಿಗಳಿಗೆ ಅಣೆಕಟ್ಟುಗಳನ್ನು ಕಟ್ಟಿ ನೀರನ್ನು ಸಂಗ್ರಹಣೆ ಮಾಡಬೇಕು ಎಂದು ಆಗ್ರಹಿಸಿದರು.
ಮಹೇಶ್ ಕೊಟ್ಟೂರ, ಹನುಮಂತಪ್ಪ ದೀವಿಗಿಹಳ್ಳಿ, ರಾಜ್ಯಶೇಖರ್ ದೂದಿಹಳ್ಳಿ, ಮಂಜುನಾಥ್ ಸಂಬೋಜಿ, ರಾಜೇಶ್ ಅಂಗಡಿ, ಕಿರಣ್ ಗುಳೇದ, ಮಂಜುನಾಥ್ ಗುಡ್ಡಣ್ಣನವರ, ನಿಂಗಪ್ಪ ಸತ್ಯಪ್ಪನವರ, ಲಲಿತಾ ಲಮಾಣಿ, ನೀಲಮ್ಮ ಹರನಗಿರಿ, ಕೊಟ್ರಮ್ಮ ಕಾಯಕದ, ಅಮೀನಾ ಬಾನು ಸಿಡೆನೂರು, ಸಿದ್ದಪ್ಪ ಗುಡಿಮಲ್ಲರ, ನಾಗಮ್ಮ ತಳವಾರ, ಮಾದೇವಪ್ಪ ಬಣಕಾರ, ಚಂದ್ರಶೇಖರ್ ಬಣಕಾರ, ಚನ್ನಬಸಪ್ಪ ಅಡಿವೇರ, ಹನುಮಂತಪ್ಪ ಚಿತ್ತಣ್ಣನವರ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.