ಬ್ಯಾಡಗಿ: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಸೋಮವಾರ ಬೃಹತ್ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಿದರು.
ಈ ವೇಳೆ ಹಸಿರು ಸೇನೆಯ ತಾಲ್ಲೂಕು ಘಟದ ಅಧ್ಯಕ್ಷ ಗಂಗಣ್ಣ ಎಲಿ ಮಾತನಾಡಿ, ದೆಹಲಿಯ ಗಡಿಯಲ್ಲಿ ಕಳೆದ ಒಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ಸೌಜನ್ಯಕ್ಕಾದರೂ ರೈತರೊಂದಿಗೆ ಮಾತುಕತೆ ನಡೆಸಿಲ್ಲ ಎಂದರು. ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ರುದ್ರಗೌಡ ಕಾಡನಗೌಡ್ರ ಮಾತನಾಡಿ, 2018–19ರಲ್ಲಿ ತಾಲ್ಲೂಕಿನ ಜಿಲ್ಲೆಯ 1,788 ರೈತರಿಗೆ ₹9 ಕೋಟಿ ಬೆಳೆ ವಿಮೆ ಪರಿಹಾರದ ಹಣ ಸಂದಾಯವಾಗಿಲ್ಲ. ಕೃಷಿ ಇಲಾಖೆಯ ಬೇಜವಾಬ್ದಾರಿತನದಿಂದ ರೈತರಿಗೆ ಅನ್ಯಾಯವಾಗಿದೆ ಎಂದರು.
ಕಾರ್ಯಾಧ್ಯಕ್ಷ ಕಿರಣ ಗಡಿಗೋಳ ಮಾತನಾಡಿ, ಪ್ರಸಕ್ತ ಮುಂಗಾರು ಹಂಗಾಮಿನ ಮೆಕ್ಕೆಜೋಳ ಕೊಯ್ಲಿಗೆ ಬಂದಿದ್ದು, ಶೀಘ್ರ ಖರೀದಿ ಕೇಂದ್ರವನ್ನು ಸ್ಥಾಪಿಸುವಂತೆ ಆಗ್ರಹಿಸಿದರು. ಪಟ್ಟಣದಲ್ಲಿ ಬಸ್ ಸಂಚಾರ ಎಂದಿನಂತೆ ಇತ್ತು. ಅಂಗಡಿ ಮುಂಗಟ್ಟುಗಳು ತೆರೆದಿದ್ದವು. ಚಿಕ್ಕಪ್ಪ ಛತ್ರದ , ಮೌನೇಶ ಕಮ್ಮಾರ, ಶಿವರುದ್ದರಪ್ಪ ಮೂಡೇರ, ಮಂಜು ತೋಟದ, ಬಿ.ಎಸ್.ಪಾಟೀಲ, ಪ್ರಕಾಶ ಸಿದ್ದಪ್ಪನವರ, ಮಲ್ಲೇಶಪ್ಪ ಡಂಬಳ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.