ಹಾವೇರಿ: ‘ರಾಜ್ಯದಲ್ಲಿಯೇ ಅತೀ ಹೆಚ್ಚು ರೈತ ಆತ್ಮಹತ್ಯೆ ಪ್ರಕರಣಗಳು ದಾಖಲಾಗುತ್ತಿರುವ ಹಾವೇರಿ ಜಿಲ್ಲೆಯಲ್ಲಿ, ರೈತರ ಸಮಾಧಿ ಮೇಲೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಸಾಧನಾ ಸಮಾವೇಶ ಮಾಡುತ್ತಿದೆ. ಈ ರಾಜ್ಯ ಸರ್ಕಾರದ ವಿರುದ್ಧ ಫೆ.14ರಂದು ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಲಾಗುವುದು’ ಎಂದು ‘ಸಾಮೂಹಿಕ ನಾಯಕತ್ವದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ’ಯ ತಾಲ್ಲೂಕು ಘಟಕದ ಪದಾಧಿಕಾರಿಗಳು ತಿಳಿಸಿದ್ದಾರೆ.
ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ ಸಂಘದ ದಿಳ್ಳೆಪ್ಪ ಮಣ್ಣೂರ, ಶಿವಬಸಪ್ಪ ಗೋವಿ, ಶಿವಯೋಗಿ ಹೊಸಗೌಡ್ರ, ಸುರೇಶ ಚಲವಾದಿ, ಗುಡ್ಡನಗೌಡ ಪ್ಯಾಟಿಗೌಡ್ರ ಅವರು ರೈತರ ಸಮಸ್ಯೆಗಳನ್ನು ಇತ್ಯರ್ಥಪಡಿಸುವಂತೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
‘ರೈತ ಆತ್ಮಹತ್ಯೆ ಪ್ರಕರಣಗಳು ಹಾವೇರಿ ಜಿಲ್ಲೆಯಲ್ಲಿ ಅತೀ ಹೆಚ್ಚು ನಡೆಯುತ್ತಿವೆ. ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ಆತ್ಮಹತ್ಯೆ ತಡೆಗಟ್ಟುವ ನಿಟ್ಟಿನಲ್ಲಿ ಪೂರಕ ಕಾರ್ಯಕ್ರಮಗಳನ್ನು ಹಾಕಿಕೊಳ್ಳುವಲ್ಲಿ ಸರ್ಕಾರ ವಿಫಲವಾಗಿದೆ. ದೇಶಕ್ಕೆ ಅನ್ನ ನೀಡುವ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿಲ್ಲ. ಬದಲಾಗಿ ಸರ್ಕಾರವೇ ರೈತರನ್ನು ಕೊಲೆ ಮಾಡುತ್ತಿದೆ. ಅತೀವೃಷ್ಟಿ ಹಾಗೂ ಅನಾವೃಷ್ಟಿಯಿಂದ ರೈತರು ಕಂಗಾಲಾಗಿದ್ದರೆ. ಬೆಳೆದಂತಹ ಬೆಳೆಗೂ ಸರಿಯಾದ ದರಗಳು ಸಿಗದೇ ರೈತ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ’ ಎಂದು ಹೇಳಿದರು.
‘ರೈತ ಜೀವಂತವಿದ್ದಾಗ, ಸರಿಯಾಗಿ ಬಿತ್ತನೆ ಬೀಜ, ರಸಗೊಬ್ಬರ, ಬೆಳೆ ವಿಮೆ, ಬೆಳೆ ಪರಿಹಾರ, ವಿದ್ಯುತ್ ಕೊಡದೇ ಸರ್ಕಾರ ಚೆಲ್ಲಾಟವಾಡುತ್ತದೆ. ರೈತ ಸತ್ತ ಮೇಲೂ ಇಲ್ಲಸಲ್ಲದ ಕಾರಣಗಳನ್ನು ಹೇಳಿ, ಪರಿಹಾರ ನೀಡದೇ ಸತಾಯಿಸುತ್ತಿದೆ. ಆತ್ಮಹತ್ಯೆ ಮಾಡಿಕೊಂಡ ರೈತನ ಮನೆಯವರನ್ನು ಕ್ರಮೇಣ ಕೊಲ್ಲುತ್ತಿದೆ’ ಎಂದು ದೂರಿದರು.
‘ಸಾಲದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಬ್ಯಾಡಗಿ ತಾಲ್ಲೂಕಿನ ಹೊಸ ಶಿಡೇನೂರ ರೈತರೊಬ್ಬರಿಗೆ, 3 ವರ್ಷವಾದರೂ ಪರಿಹಾರ ಬಂಡಿಲ್ಲ. ಪರಿಹಾರ ನೀಡಲು ಸಾಧ್ಯವಾಗದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸರ್ಕಾರದಿಂದ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ ಮಾಡುತ್ತಿದ್ದಾರೆ. ಪರಿಹಾರ ಪ್ರಕರಣಗಳನ್ನು ಇತ್ಯರ್ಥಪಡಿಸಬೇಕು’ ಎಂದರು.
‘ಹೊಸ ಶಿಡೇನೂರು ರೈತನ ಕುಟುಂಬಕ್ಕೆ, ಆತ್ಮಹತ್ಯೆ ಪರಿಹಾರಕ್ಕೆ ಅರ್ಜಿ ಸಲ್ಲಿಸಿಲ್ಲವೆಂದು ಅಧಿಕಾರಿಗಳು ಹೇಳುತ್ತಿದ್ದಾರೆ. ರೈತ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ, ಸಂಬಂಧಿಸಿದ ಇಲಾಖೆಗಳಿಗೆ ಅರ್ಜಿ ಕೊಟ್ಟು ಆತ್ಮಹತ್ಯೆ ಮಾಡಿಕೊಳ್ಳಬೇಕಾ ? ಇಂಥ ಉತ್ತರಕ್ಕೆ ಏನು ಹೇಳಬೇಕು. ಇದು ಅಧಿಕಾರಿಗಳು ಬೇಜವಾಬ್ದಾರಿ ಹಾಗೂ ಸರ್ಕಾರದ ನಿಷ್ಕಾಳಜಿ. ಇದೇ ರೀತಿ ಹಲವು ಆತ್ಮಹತ್ಯೆ ರೈತರ ಕುಟುಂಬಗಳಿಗೆ ಇದುವರೆಗೂ ಪರಿಹಾರ ಬಂದಿಲ್ಲ’ ಎಂದು ದೂರಿದರು.
‘ಆತ್ಮಹತ್ಯೆ ಪರಿಹಾರಕ್ಕಾಗಿ ರೈತರ ಕುಟುಂಬ ಅರ್ಜಿ ಸಲ್ಲಿಸಬೇಕು ಎಂಬ ನಿಯಮವನ್ನು ರದ್ದುಪಡಿಸಬೇಕು. ವಿಧಿಸಿರುವ ಕಾಲಮಿತಿಯನ್ನೂ ರದ್ದುಪಡಿಸಬೇಕು. ಸಂಬಂಧಿಸಿದ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದ್ದನ್ನು ಪರಿಗಣಿಸಿ ಅಧಿಕಾರಿಗಳೇ ಪರಿಶೀಲನೆ ನಡೆಸಿ, ಅರ್ಜಿ ವಿಲೇವಾರಿ ಮಾಡಿ ರೈತರ ಕುಟುಂಬಕ್ಕೆ ಪರಿಹಾರ ಕೊಡಿಸಬೇಕು. ಆದರೆ, ಯಾವ ತಹಸೀಲ್ದಾರ್ಗಳು ಈ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತಿಲ್ಲ. ಇದರಿಂದ ರೈತ ಆತ್ಮಹತ್ಯೆಯಂತಹ ಪ್ರಕರಣದಲ್ಲಿ ಪಾರದರ್ಶಕ ಕೆಲಸ ನಡೆಯದೇ ರೈತರು ಪರಿಹಾರದಿಂದ ವಂಚಿತರಾಗುತ್ತಿದ್ದಾರೆ’ ಎಂದು ಆರೋಪಿಸಿದರು.
‘ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ರೈತ ಆತ್ಮಹತ್ಯೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ತಕ್ಷಣ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ, ರಾಜ್ಯ ಸರ್ಕಾರದ ಸಾಧನಾ ಸಮಾವೇಶ ಸ್ಥಳದಲ್ಲಿ ಕಪ್ಪು ಬಟ್ಟೆ ಪ್ರದರ್ಶನ ಮಾಡಿ ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.