ADVERTISEMENT

ಹಾವೇರಿ: ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಜುಲೈ 21ರಂದು

​ಪ್ರಜಾವಾಣಿ ವಾರ್ತೆ
Published 16 ಜುಲೈ 2020, 16:26 IST
Last Updated 16 ಜುಲೈ 2020, 16:26 IST
ರಾಮಣ್ಣ ಕೆಂಚಳ್ಳೇರ
ರಾಮಣ್ಣ ಕೆಂಚಳ್ಳೇರ   

ಹಾವೇರಿ: ‘ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಮತ್ತು ವಿದ್ಯುತ್ ವಲಯ‌ ಖಾಸಗೀಕರಣ ಮಾಡುವ ಕ್ರಮ ವಿರೋಧಿಸಿ ಜುಲೈ 21ರಂದು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಿದ್ದೇವೆ’ ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಆರ್‌.ವಿ.ಕೆಂಚಳ್ಳೇರ ಮತ್ತು ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ತಿಳಿಸಿದ್ದಾರೆ.

ರೈತರಿಗೆ ಮಾರಕವಾಗಿರುವ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ತರುವ ಮುಖಾಂತರ ರೈತರ ಮತ್ತು ಬಡವರ ಹಕ್ಕುಗಳನ್ನು ಕಿತ್ತುಕೊಳ್ಳಲು ಸರ್ಕಾರ ಹೊರಟಿದೆ. ರಾಜ್ಯ ಸರ್ಕಾರ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದು, ಬಂಡವಾಳಶಾಹಿಗಳಿಗೆ ಮಣೆ ಹಾಕಿದೆ. ಕೇಂದ್ರ ಸರ್ಕಾರ ವಿದ್ಯುತ್‌ ವಲಯವನ್ನು ಖಾಸಗಿಯವರಿಗೆ ಕೊಡುವ ಮುಖಾಂತರ ಕೃಷಿಯನ್ನು ನಾಶ ಮಾಡಲು ಹೊರಟಿದೆ ಎಂದು ಆರೋಪಿಸಿದ್ದಾರೆ.

ಮೆಕ್ಕೆಜೋಳ ಬೆಳೆದ ರೈತರಿಗೆ ₹5 ಸಾವಿರ ಪ್ರೋತ್ಸಾಹಧನ ಎಲ್ಲ ರೈತರಿಗೂ ತಲುಪಿಲ್ಲ. ಬೆಳೆ ವಿಮೆಯ ತಾರತಮ್ಯವನ್ನು ಸರಿಪಡಿಸಿಲ್ಲ. ಹಾಲಿನ ಸಹಾಯಧನ ಸಮರ್ಪಕವಾಗಿ ವಿತರಣೆಯಾಗಿಲ್ಲ. ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ಹುಡುಕದೆ ರೈತ ವಿರೋಧ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ ಜುಲೈ 21ರಂದು ಬೆಳಿಗ್ಗೆ 11 ಗಂಟೆಗೆ ಕಾಗಿನೆಲೆ ಕ್ರಾಸ್‌ನಿಂದ ಸಿದ್ದಪ್ಪ ವೃತ್ತದವರೆಗೆ ಪ್ರತಿಭಟನೆ ನಡೆಸಿ, ಸಾಂಕೇತಿಕ ರಸ್ತೆ ತಡೆ ನಡೆಸಲಿದ್ದೇವೆ ಎಂದು ತಿಳಿಸಿದ್ದಾರೆ.

ADVERTISEMENT

ರಸ್ತೆ ಮುಖಾಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಲಿದ್ದೇವೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.