ಹಾವೇರಿ: ‘ಮಕ್ಕಳ ಮೇಲೆ ನಿತ್ಯ ಲೈಂಗಿಕ ದೌರ್ಜನ್ಯದಂತಹ ಪ್ರಕರಣಗಳು ಹೆಚ್ಚಾಗುತ್ತಿರುವುದು ತುಂಬಾ ವಿಷಾದದ ಸಂಗತಿ. ಈ ನಿಟ್ಟಿನಲ್ಲಿ ಮಕ್ಕಳ ಹಕ್ಕುಗಳನ್ನು ರಕ್ಷಿಸುವಲ್ಲಿ ಹಾಗೂ ಲೈಂಗಿಕ ದೌರ್ಜನ್ಯದಂತಹ ಪ್ರಕರಣಗಳನ್ನು ತಡೆಗಟ್ಟುವಲ್ಲಿ ಸರ್ಕಾರವು ಹಲವಾರು ಕಾಯ್ದೆ ಕಾನೂನುಗಳನ್ನು ಜಾರಿಗೆ ತಂದಿದ್ದು, ಇವುಗಳ ಅರಿವು ಅಗತ್ಯ’ ಎಂದು ಸವಣೂರು ತಾ.ಪಂ. ಸದಸ್ಯ ಬಸವರಾಜ ಕೋಳಿವಾಡ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಂಯುಕ್ತಾಶ್ರಯದಲ್ಲಿ ‘ಪೊಕ್ಸೋ ಕಾಯ್ದೆ-2012 ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ-2006’ ಕುರಿತು ಇತ್ತೀಚೆಗೆ ವಿರಕ್ತಮಠದಲ್ಲಿ ಜರುಗಿದ ಸವಣೂರು ತಾಲ್ಲೂಕು ಹತ್ತಿಮತ್ತೂರು ಹೋಬಳಿ ಮಟ್ಟದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಒಂದು ದಿನದ ಸಾಮರ್ಥ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಕಾಯ್ದೆ ಹಾಗೂ ಕಾನೂನುಗಳನ್ನು ತಿಳಿದುಕೊಳ್ಳಲು ಈ ತರಬೇತಿಯು ಅತ್ಯವಶ್ಯಕವಾಗಿದೆ. ಈ ವಿಷಯದ ಬಗ್ಗೆ ತಿಳಿದುಕೊಂಡು ನಿಮ್ಮ ಕಾರ್ಯವ್ಯಾಪ್ತಿಯಲ್ಲಿ ಅರಿವು ಮೂಡಿಸಬೇಕು’ ಎಂದು ಅಂಗನವಾಡಿ ಕಾರ್ಯಕರ್ತೆಯರಿಗೆ ಕರೆ ನೀಡಿದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಣ್ಣಪ್ಪ ಹೆಗಡೆ ಮಾತನಾಡಿ, ‘ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಯಾವುದೇ ಮಕ್ಕಳು ಸಮಸ್ಯೆಗೆ ಒಳಗಾಗಿದ್ದರೇ ತಕ್ಷಣವೇ ಅಧಿಕಾರಿಗಳಿಗೆ ಮಾಹಿತಿ ನೀಡಿ. “ಬೇಟಿ ಬಚಾವೂ ಬೇಟಿ ಪಡಾವೋ”, ಭಾಗ್ಯಲಕ್ಷ್ಮೀ ಯೋಜನೆ, ಬಾಲ ಸಂಜೀವಿನಿ ಯೋಜನೆ ಕುರಿತು ಜಾಗೃತಿ ಮೂಡಿಸಿ. ಮಕ್ಕಳ ರಕ್ಷಣಾ ನಿರ್ದೇಶನಾಲಯದಿಂದ ಮಕ್ಕಳ ಸಮಾಲೋಚನೆಗಾಗಿ 14499 ಉಚಿತ ಟೆಲಿ ಕೌನ್ಸೆಲಿಂಗ್ ಪ್ರಾರಂಭಿಸಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಸೂಚಿಸಿದರು.
ಸಾನ್ನಿಧ್ಯ ವಹಿಸಿದ್ದ ವಿರಕ್ತಮಠದ ನಿಜಗುಣ ಶಿವಯೋಗಿ ಮಾತನಾಡಿ, ಮಕ್ಕಳು ದೇಶದ ಸಂಪತ್ತು. ಅವರ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಎಂದು ಹೇಳಿದರು.
ಮಾಂತೇಶ ಬಸವನಾಯ್ಕರ ಪೊಕ್ಸೋ ಕಾಯ್ದೆ-2012 ಹಾಗೂ ಬಾಲ್ಯ ವಿವಾಹ ಕಾಯ್ದೆ-2006 ಕುರಿತು ಹಾಗೂ ಶ್ರೀಶಕ್ತಿ ತೆರೆದ ತಂಗುದಾಣ ಪುಟ್ಟಪ್ಪ ಹರವಿ ಅವರು ‘ಪೊಕ್ಸೋ ಕಾಯ್ದೆ-2012’ ಕುರಿತು ಮಕ್ಕಳ ಸಹಾಯವಾಣಿ ಮಾರುತಿ ಹರಿಜನ ಅವರು ‘ಬಾಲ್ಯ ವಿವಾಹ ನಿಷೇಧ ಕಾಯ್ದೆ-2006’ರ ಕುರಿತು ಉಪನ್ಯಾಸ ನೀಡಿದರು.
ಮಂಗಳಾ ಅಳಗುಂಡಗಿ ಸ್ವಾಗತಿಸಿದರು. ವಿನಯ್ ಗುಡಗೂರ ಕಾರ್ಯಕ್ರಮ ನಿರೂಪಿಸಿದರು. ವಿರೇಶ ಗಾಣಿಗೇರ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.