ADVERTISEMENT

ನಾಲ್ವರು ಬಾಲಕಾರ್ಮಿಕರು ಪತ್ತೆ

ಎಸಿ ದಿಲೀಷ್‌ ಶಶಿ ನೇತೃತ್ವದಲ್ಲಿ ವಿಶೇಷ ಕಾರ್ಯಾಚರಣೆ

​ಪ್ರಜಾವಾಣಿ ವಾರ್ತೆ
Published 7 ಜನವರಿ 2021, 13:54 IST
Last Updated 7 ಜನವರಿ 2021, 13:54 IST
ಹಾವೇರಿ ನಗರದಲ್ಲಿ ಬಾಲಕಾರ್ಮಿಕರ ಪತ್ತೆಗಾಗಿ ಉಪವಿಭಾಗಾಧಿಕಾರಿ ಡಾ.ದಿಲೀಷ್‌ ಶಶಿ ನೇತೃತ್ವದಲ್ಲಿ ಗುರುವಾರ ವಿಶೇಷ ಕಾರ್ಯಾಚರಣೆ ನಡೆಯಿತು
ಹಾವೇರಿ ನಗರದಲ್ಲಿ ಬಾಲಕಾರ್ಮಿಕರ ಪತ್ತೆಗಾಗಿ ಉಪವಿಭಾಗಾಧಿಕಾರಿ ಡಾ.ದಿಲೀಷ್‌ ಶಶಿ ನೇತೃತ್ವದಲ್ಲಿ ಗುರುವಾರ ವಿಶೇಷ ಕಾರ್ಯಾಚರಣೆ ನಡೆಯಿತು   

ಹಾವೇರಿ:ಉಪವಿಭಾಗಾಧಿಕಾರಿ ಡಾ.ದಿಲೀಷ್ ಶಶಿ ನೇತೃತ್ವದಲ್ಲಿ ಬಾಲಕಾರ್ಮಿಕರ ಪತ್ತೆಗಾಗಿ ಗುರುವಾರ ನಗರದಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಂಡು ನಾಲ್ವರುಬಾಲಕಾರ್ಮಿಕರನ್ನು ಪತ್ತೆ ಮಾಡಲಾಯಿತು.

ಹಾವೇರಿ ನಗರದ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಕೃಷಿ ಉತ್ಪನ್ನ ಮಾರುಕಟ್ಟೆ ಮಾರ್ಗದಲ್ಲಿ ವಿವಿಧ ಅಂಗಡಿಗಳು, ಬಾರ್, ಹೋಟೆಲ್‍ಗಳ ತಪಾಸಣೆ ನಡೆಸಿದ ತಂಡ ಈ ಮಾರ್ಗದಲ್ಲಿ ವಿವಿಧ ಅಂಗಡಿಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಾಲಕರನ್ನು ಪತ್ತೆ ಮಾಡಿ ವಶಕ್ಕೆ ಪಡೆಯಲಾಯಿತು. ಇದೇ ಮಾರ್ಗದಲ್ಲಿ ಕೇಂದ್ರ ಬಸ್ ನಿಲ್ದಾಣದ ಸಮೀಪ ಕಡಲೆಗಿಡ ಮಾರುತ್ತಿದ್ದ ಬಾಲಕನನ್ನು ವಶಕ್ಕೆ ಪಡೆಯಲಾಯಿತು. ಈ ನಾಲ್ವರು ಬಾಲಕರು 15 ವರ್ಷದ ವಯೋಮಿತಿಯವರಾಗಿದ್ದು, ಜಿಲ್ಲೆಯ ಬೇರೆ ಬೇರೆ ಹಳ್ಳಿಗಳಿಂದ ಬಂದು ನಗರದಲ್ಲಿ ಕೆಲಸ ಮಾಡುತ್ತಿದ್ದರು.

ಪತ್ತೆಯಾದ ಬಾಲಕರ ಮಾಹಿತಿ ಪಡೆದ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ಪಾಟೀಲ ಅವರು ಬಾಲಕರ ಊರು, ವಿಳಾಸ, ಪಾಲಕರ ಬಗ್ಗೆ ಮಾಹಿತಿ ಪಡೆದರು. ಎಲ್ಲ ಮಕ್ಕಳು ವ್ಯಾಸಂಗ ಮಾಡುತ್ತಿರುವ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಬಾಲಕರ ಮಾಹಿತಿ ಆಧರಿಸಿ ಸ್ಥಳದಲ್ಲೇ ಶಾಲಾ ಮುಖ್ಯಶಿಕ್ಷಕರಿಗೆ ದೂರವಾಣಿ ಕರೆ ಮಾಡಿ ಬಾಲಕರ ಮನೆಗೆ ತೆರಳಿ ಪಾಲಕರನ್ನು ಮನವೊಲಿಸಿ ಮಕ್ಕಳನ್ನು ಶಾಲೆಗೆ ಕರೆ ತರುವಂತೆ ಸೂಚನೆ ನೀಡಿದರು.

ADVERTISEMENT

ಈ ಮಕ್ಕಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಅಗತ್ಯವಿದ್ದರೆ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶಾವಕಾಶ ಕಲ್ಪಿಸುವುದು ಸೇರಿದಂತೆ ಸರ್ಕಾರದ ಸೌಲಭ್ಯಗಳನ್ನು ಆದ್ಯತೆಯ ಮೇರೆಗೆ ಈ ಮಕ್ಕಳಿಗೆ ದೊರಕಿಸಿಕೊಡುವಂತೆ ಸೂಚನೆ ನೀಡಿದರು.

ಹಾವೇರಿ ವೃತ್ತದ ಕಾರ್ಮಿಕ ನಿರೀಕ್ಷಕಿ ಲತಾ ಟಿ.ಎಸ್. ಅವರು ಪತ್ತೆಯಾದ ಮಕ್ಕಳಿಗೆ ಬುದ್ಧಿವಾದ ಹೇಳಿ ಮನೆಗೆ ಕಳುಹಿಸಲಾಯಿತು ಹಾಗೂ ಬಾಲಕಾರ್ಮಿಕರಾಗಿ ದುಡಿಸಿಕೊಂಡ ಅಂಗಡಿಗಳ ಮಾಲೀಕರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದರು.

ಕಾರ್ಯಾಚರಣೆಯಲ್ಲಿ ತಹಶೀಲ್ದಾರ್‌ ಜಿ.ಎಸ್.ಶಂಕರ, ರಾಣೆಬೆನ್ನೂರ ವೃತ್ತದ ಕಾರ್ಮಿಕ ನಿರೀಕ್ಷಕ ಟಿ.ಜಿ.ಬಾಲಾಜಿ ಹಾಗೂ ಪೊಲೀಸ್ ಅಬಕಾರಿ, ಶಿಶು ಅಭಿವೃದ್ಧಿ ಇಲಾಖಾ ಅಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.