ಹಾವೇರಿ: ‘ಪ್ರತಿಯೊಬ್ಬ ಪ್ರಜೆಯೂ ಸಂವಿಧಾನದ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳನ್ನು ತಿಳಿದು ನಡೆಯಬೇಕು’ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಯಾದವ ವನಮಾಲಾ ಆನಂದರಾವ್ ಹೇಳಿದರು.
ನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ವಕೀಲರ ಸಂಘ ಹಾಗೂ ಅಭಿಯೋಜನಾ ಇಲಾಖೆ ಸಹಯೋಗದಲ್ಲಿ ಶುಕ್ರವಾರ ನಡೆದ ಸಂವಿಧಾನ ದಿನಾಚರಣೆ ಪ್ರಯುಕ್ತ ಕಾನೂನು ಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
‘ಸಂವಿಧಾನದ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ನಾವೆಲ್ಲರೂ ಕಾರ್ಯೋನ್ಮುಖರಾಗಬೇಕು. ದೇಶದ ಸಾರ್ವಭೌಮತ್ವ ಅಖಂಡತೆ, ಏಕತೆ ಎತ್ತಿ ಹಿಡಿಯುವ ಮೂಲಕ ವೈಯಕ್ತಿಕ ಮತ್ತು ಸಾಮೂಹಿಕ ಸಾಧನೆಯ ಮೂಲಕ ಉನ್ನತ ಮಟ್ಟದ ಸಾಧನೆ ಮಾಡಿ ದೇಶದ ಪ್ರಗತಿಗೆ ಶ್ರಮಿಸಬೇಕು’ ಎಂದು ಕರೆ ನೀಡಿದರು.
ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಎಫ್.ಟಿ.ಎಸ್.ಸಿ-01ರ ನ್ಯಾಯಾಧೀಶರಾದ ಕೆ.ಎಸ್.ಜ್ಯೋತಿಶ್ರೀ, ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಈ ರಾಜೀವಗೌಡ, ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಕಿರಣ ಕಿಣಿ, ಹಾವೇರಿ ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಸಿ.ಜೆ.ಎಂ. ನ್ಯಾಯಾಲಯದ ನ್ಯಾಯಾಧೀಶರಾದ ಎಲ್.ಆರ್.ಕುರಣೆ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎ.ಸಿ.ನೀರಲಗಿ, ಕಾರ್ಯದರ್ಶಿಗಳಾದ ಐ.ಎಸ್. ನಂದಿ, ಸರ್ಕಾರಿ ಅಭಿಯೋಜಕ ಸಿದ್ಧಾರೂಡ ಗೆಜ್ಜಿಹಳ್ಳಿ, ಜಿ.ಸಿ.ಗಿರಿಯಪ್ಪನವರ ಭಾಗವಹಿಸಿದ್ದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುಟ್ಟರಾಜು ಸ್ವಾಗತಿಸಿದರು.
ಪ್ರಮಾಣ ವಚನ ಸ್ವೀಕಾರ
ಹಾವೇರಿ ಸಂವಿಧಾನ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಪ್ರಮಾಣ ವಚನ ಸ್ವೀಕರಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಶಿವಾನಂದ ಉಳ್ಳಾಗಡ್ಡಿ ಅವರು ಸಂವಿಧಾನ ದಿನದ ಕುರಿತು ಪ್ರಮಾಣ ವಚನ ಬೋಧಿಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.