ಹಾವೇರಿ: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಆ.8ರಿಂದ ‘ಭ್ರಷ್ಟರೇ, ಪವಿತ್ರವಾದ ರಾಜಕಾರಣವನ್ನು ಬಿಟ್ಟು ತೊಲಗಿ’ ಮತ್ತು ‘ನಾಡಪ್ರೇಮಿಗಳೇ ಪ್ರಾಮಾಣಿಕ ರಾಜಕಾರಣಕ್ಕೆ ಮುಂದಾಗಿ’ ಎನ್ನುವ ರಾಜ್ಯವ್ಯಾಪಿ ಅಭಿಯಾನವನ್ನು ಹಮ್ಮಿಕೊಂಡಿದೆ ಎಂದು ಪಕ್ಷದ ರಾಜ್ಯ ಸಮಿತಿ ಖಜಾಂಚಿ ಅರವಿಂದ ಕೆ.ಬಿ. ತಿಳಿಸಿದರು.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಪಕ್ಷದ ಅಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಅವರ ನೇತೃತ್ವದಲ್ಲಿ ರಾಜ್ಯ ಪದಾಧಿಕಾರಿಗಳ ತಂಡ 31 ಜಿಲ್ಲೆಗಳಲ್ಲಿ 32 ದಿನಗಳ ಕಾಲ ನಡೆಸುವ ನಿರಂತರ ಅಭಿಯಾನ ಇದಾಗಿದ್ದು, ತಂಡವು ಸುಮಾರು 3,500 ಕಿ.ಮೀ. ಸಂಚರಿಸಿ ಜನರಿಗೆ ಜಾಗೃತಿ ಮೂಡಿಸಲಿದೆ’ ಎಂದು ಹೇಳಿದರು.
ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಹತ್ವದ ಸ್ಥಾನ ಇರುವ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಈಸೂರಿನಲ್ಲಿ ಆ.8ರಂದು ಬೆಳಿಗ್ಗೆ 10.30ಕ್ಕೆ ಅಭಿಯಾನಕ್ಕೆ ಸಾಮಾಜಿಕ ಹೋರಾಟಗಾರ ಎಸ್.ಆರ್. ಹಿರೇಮಠ ಅವರು ಹುತಾತ್ಮರ ಸ್ಮಾರಕಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಚಾಲನೆ ನೀಡಲಿದ್ದಾರೆ. ಹಿರಿಯ ಚಿಂತಕ ಡಿ.ಎಸ್.ನಾಗಭೂಷಣ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ’ ಎಂದರು.
ಕೋವಿಡ್ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಈ ಸಭೆ ಸರಳವಾಗಿ ಮತ್ತು ಸಾಂಕೇತಿಕವಾಗಿ ನಡೆಯಲಿದೆ. ಈಸೂರಿನಿಂದ ಆರಂಭಗೊಂಡ ಅಭಿಯಾನ ಆ.9ರಂದು ಹಾವೇರಿ ಜಿಲ್ಲೆ ಹಾನಗಲ್ ತಲುಪಲಿದೆ. ನಂತರ ಬೆಳಗಾವಿ, ವಿಜಯಪುರ, ಕಲಬುರಗಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸಂಚರಿಸಿ, ಸೆ.9ರಂದು ತುಮಕೂರಿನಲ್ಲಿ ಮುಕ್ತಾಯಗೊಳ್ಳಲಿದೆ ಎಂದು ಮಾಹಿತಿ ನೀಡಿದರು.
ರಾಜಕಾರಣವನ್ನು ಭ್ರಷ್ಟಾಚಾರದಿಂದ ಶುದ್ಧಗೊಳಿಸುವ ಮತ್ತು ಪ್ರಾಮಾಣಿಕ ರಾಜಕಾರಣವನ್ನು ಪ್ರೋತ್ಸಾಹಿಸುವ ಜನರು ಅಭಿಯಾನದಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ಮಲ್ಲಿಕಾರ್ಜುನ ಜಾಲಿ, ಸುಧೀರ ತೇಲಕರ, ಮಂಜು ಹಾವನೂರ, ರುದ್ರಗೌಡ, ಇರ್ಫಾನ್ ಅಲಿ ದೇವಿಹೊಸೂರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.