ADVERTISEMENT

ಹಾವೇರಿಯ ಅಂಗನವಾಡಿ ಕಾರ್ಯಕರ್ತೆ ಸಾವಿಗೆ ಸರ್ಕಾರವೇ ಹೊಣೆ: ಹೊನ್ನಪ್ಪ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2020, 13:04 IST
Last Updated 18 ಆಗಸ್ಟ್ 2020, 13:04 IST
ಹೊನ್ನಪ್ಪ ಮರೆಮ್ಮನವರ 
ಹೊನ್ನಪ್ಪ ಮರೆಮ್ಮನವರ    

ಹಾವೇರಿ: ‘ತಾಲ್ಲೂಕಿನ ದಿಡಗೂರ ಗ್ರಾಮದ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಇದಕ್ಕೆ ಸುರಕ್ಷತಾ ಸಾಧನಗಳನ್ನು ಒದಗಿಸದ ಸರ್ಕಾರದ ನಿರ್ಲಕ್ಷ್ಯವೇ ಕಾರಣ’ ಎಂದು ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್‌ ಜಿಲ್ಲಾ ಸಮಿತಿ ಅಧ್ಯಕ್ಷ ಹೊನ್ನಪ್ಪ ಮರೆಮ್ಮನವರ ಆರೋಪಿಸಿದ್ದಾರೆ.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಸಮಯದಲ್ಲಿ ಗರ್ಭಿಣಿ, ಬಾಣಂತಿ ಮತ್ತು ಮಕ್ಕಳಿಗೆ ಆಹಾರ ಧಾನ್ಯಗಳನ್ನು ಮನೆ–ಮನೆಗೆ ತೆರಳಿ ವಿತರಿಸುವುದು, ಮಕ್ಕಳ ತೂಕ ತಪಾಸಣೆಗೆ ಅಂಗನವಾಡಿಗೆ ಕರೆತರುವುದು ಮುಂತಾದ ಕೆಲಸಗಳನ್ನು ಅಂಗನವಾಡಿ ಕಾರ್ಯಕರ್ತೆಯರು ನಿರ್ವಹಿಸಿದ್ದಾರೆ. ಆದರೆ, ಮಾಸ್ಕ್‌, ಸ್ಯಾನಿಟೈಸರ್‌ ಮುಂತಾದ ಸುರಕ್ಷತಾ ಸಾಧನಗಳನ್ನು ಒದಗಿಸದೆ ಅಧಿಕಾರಿಗಳು ಜೀವದ ಜತೆ ಚೆಲ್ಲಾಟವಾಡಿದ್ದಾರೆ’ ಎಂದು ದೂರಿದರು.

ಸರ್ಕಾರ ಘೋಷಿಸಿದ ಜೀವವಿಮೆಯನ್ನು ಕುಟುಂಬಸ್ಥರಿಗೆ ನೀಡಬೇಕು. ನಿಯಮ ಪಾಲಿಸದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಸುರಕ್ಷತಾ ಸಾಮಗ್ರಿ ವಿತರಿಸುವವರೆಗೆ ಅಂಗನವಾಡಿ ಕಾರ್ಯಕರ್ತೆಯರು ಆಹಾರಧಾನ್ಯ ವಿತರಣೆ ಮಾಡುವುದಿಲ್ಲ ಎಂದು ಎಚ್ಚರಿಸಿದರು.

ADVERTISEMENT

ಎಐಟಿಯುಸಿ ಸಂಘಟನಾ ಕಾರ್ಯದರ್ಶಿ ಗುರುನಾಥ ಲಕಮಾಪುರ, ಪ್ರಧಾನ ಕಾರ್ಯದರ್ಶಿ ಜೆ.ಡಿ. ಪೂಜಾರ, ಜಿಲ್ಲಾ ಸಂಚಾಲಕಿ ಲಲಿತಾ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.