ಶಿಗ್ಗಾವಿ: ‘ಸರ್ಕಾರಿ ಶಾಲೆಗಳು ಸುಧಾರಣೆಯಾಗಬೇಕು ಎಂದು ಸಭೆ, ಸಮಾರಂಭದಲ್ಲಿ ಭಾಷಣ ಮಾಡಿ ಚಪ್ಪಾಳೆ ಪಡೆದರೆ ಸಾಲದು ಅದಕ್ಕೆ ಕಡ್ಡಾಯ ಕಾಯ್ದೆ ಜಾರಿಗೆ ತರುವುದು ಅವಶ್ಯವಾಗಿದೆ’ ಎಂದು ಪಡಿತರ ವಿತರಕರ ಸಂಘದ ರಾಷ್ಟ್ರೀಯ ಘಟಕದ ಉಪಾಧ್ಯಕ್ಷ ಅಬ್ದುಲರಜಾಕ್ ತಹಶೀಲ್ದಾರ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟನೆ ನೀಡಿರುವ ಅವರು, ಚುನಾವಣೆಗೆ ಸ್ಪರ್ಧೆ ಮಾಡುವ ಅಭ್ಯರ್ಥಿಗಳ ಮಕ್ಕಳು ಕಡ್ಡಾಯವಾಗಿ ಸರ್ಕಾರಿ ಶಾಲೆಯಲ್ಲಿ ಓದಿರಬೇಕು. ಸರ್ಕಾರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳಿಗೆ ನೌಕರಿ, ಇತರ ಸೌಲಭ್ಯ ಹೆಚ್ಚಿಸಬೇಕು. ಸರ್ಕಾರಿ ಶಾಲೆ, ಕಾಲೇಜುಗಳನ್ನು ಹೆಚ್ಚಾಗಿ ತೆರೆಯುವ ಮೂಲಕ ಅವುಗಳಿಗೆ ಸೌಲಭ್ಯ ಒದಗಿಸಬೇಕು. ಶಿಕ್ಷಕರ ನೇಮಕಾತಿಯಲ್ಲಿ ಅರ್ಹತೆ ಜತೆಗೆ ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಸರ್ಕಾರಿ ಶಾಲೆಗಳಲ್ಲಿ ಓದಿಸುವಂತೆ ನಿಯಮ ಜಾರಿಗೆ ತರಬೇಕು’ ಎಂದರು.
‘ಶಿಕ್ಷಣ ಪ್ರೇಮಿಗಳಿಗೆ, ಶಿಕ್ಷಣದ ಬಗ್ಗೆ ಆಸಕ್ತಿ ಹೊಂದಿದವರಿಗೆ ಸರ್ಕಾರ ಶಾಲೆಗಳನ್ನು ದತ್ತು ನೀಡುವ ಜತೆಗೆ ಮೇಲ್ವಿಚಾರಣೆ ಮಾಡುವಂತೆ ಪ್ರೇರಣೆ ನೀಡಬೇಕು. ಸರ್ಕಾರಿ ಶಾಲೆಯಲ್ಲಿ ಮಕ್ಕಳನ್ನು ಓದಿಸುವ ಸರ್ಕಾರಿ ನೌಕರರಿಗೆ, ವೇತನ ಪರಿಷ್ಕರಣೆ, ಬಡ್ತಿ ಸೇರಿದಂತೆ ವಿಶೇಷ ಸೌಲಭ್ಯ ನೀಡುವಾಗ ಹೆಚ್ಚಿನ ಆದ್ಯತೆ ನೀಡಬೇಕು. ಹೀಗೆ ಹಲವು ಕಾನೂನು ಕ್ರಮ ಜಾರಿಗೆ ತಂದರೆ ಮಾತ್ರ ಸರ್ಕಾರಿ ಶಾಲೆಗಳು ಉಳಿಯಲು ಸಾಧ್ಯ‘ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.