ಹಾವೇರಿ: ದೀಪಾವಳಿ ಹಬ್ಬದ ಸಮಯದಲ್ಲಿ ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಜನದಟ್ಟಣೆ ಹೆಚ್ಚಾಗುವುದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಅಧಿಕೃತ ಪರವಾನಗಿದಾರರು ತಮ್ಮ ಅಂಗಡಿಗಳಲ್ಲಿ ಪಟಾಕಿ ಮಾರಾಟ ಮತ್ತು ಸಂಗ್ರಹಣೆ ಮಾಡುವುದನ್ನು ನ.17ರವರೆಗೆ ನಿಷೇಧಿಸಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಆದೇಶ ಹೊರಡಿಸಿದ್ದಾರೆ.
ತಾತ್ಕಾಲಿಕ ಶೆಡ್: ಹಾವೇರಿ ನಗರದ ಮುನ್ಸಿಪಲ್ ಹೈಸ್ಕೂಲ್ ಮೈದಾನ, ಬ್ಯಾಡಗಿ ಪಟ್ಟಣದಲ್ಲಿ ಇಂದಿರಾ ಕ್ಯಾಂಟಿನ್ ನಿರ್ಮಿಸಲು ಕಾಯ್ದಿಟ್ಟ ಜಾಗದಲ್ಲಿ, ರಾಣೆಬೆನ್ನೂರ ನಗರದ ತಾಲ್ಲೂಕು ಕ್ರೀಡಾಂಗಣ, ಹಿರೇಕೆರೂರು ಪಟ್ಟಣದ ಸಾರ್ವಜನಿಕ ಸ್ಥಳ ಸರ್ವಜ್ಞ ಕಲಾಭವನ ಹತ್ತಿರ, ಶಿಗ್ಗಾವಿ ಸಂತೆ ಮೈದಾನ, ಸವಣೂರ ಭರಮದೇವರಗೌಡ್ರ ಹಾಗೂ ಹಾನಗಲ್ ಕುಂಬಾರಗುಂಡಿ ಬಯಲು ಜಾಗದಲ್ಲಿ ನಿಯಮಾನುಸಾರ ತಾತ್ಕಾಲಿಕ ಶೆಡ್ಗಳನ್ನು ನಿರ್ಮಿಸಿಕೊಂಡು ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಂಡು ಪಟಾಕಿ ಸಂಗ್ರಹಣೆ ಹಾಗೂ ಮಾರಾಟ ಮಾಡಲು ಆದೇಶ ಮಾಡಲಾಗಿದೆ.
ಮಾರ್ಗಸೂಚಿ: ಕೋವಿಡ್ -19 ಹಿನ್ನೆಲೆಯಲ್ಲಿ ಸರ್ವೋಚ್ಛ ನ್ಯಾಯಾಲದ ನಿರ್ದೇಶನ ಪಾಲನೆ ಮಾಡಬೇಕು. ಹಸಿರು ಪಟಾಕಿಗಳನ್ನು ಮಾತ್ರ ಮಾತ್ರ ಮಾರಾಟ ಮಾಡಬೇಕು. ಇತರೆ ಪಟಾಕಿಗಳನ್ನು ಮಾರಾಟ ಮಾಡುವಂತಿಲ್ಲ. ಅಧಿಕೃತವಾಗಿ ಪರವಾನಗಿ ಪಡೆದ ಮಾರಾಟಗಾರರು ಮಾತ್ರ ಹಸಿರು ಪಟಾಕಿ ಮಾರಾಟ ಮಾಡಬೇಕು. ನ.17ರವರೆಗೆ ಮಾರಾಟ ಮಳಿಗೆಗಳನ್ನು ತೆರೆಯಬೇಕು. ನಿಗದಿತ ಸ್ಥಳದಲ್ಲಿ ಮಾತ್ರ ಮಾರಬೇಕು ಎಂದು ಸೂಚನೆ ನೀಡಿದ್ದಾರೆ.
ಪರವಾನಗಿ ಪ್ರತಿಯನ್ನು ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸಬೇಕು ಹಗೂ ಪರವಾನಿಗೆ ಪಡೆದವರು ಕಡ್ಡಾಯವಾಗಿ ಮಳಿಗೆಯಲ್ಲಿ ಹಾಜರಿರಬೇಕು. ಮಳಿಗೆಗೆಳ ಸುತ್ತಮುತ್ತ ದಿನನಿತ್ಯ ಸ್ಯಾನಿಟೈಸೇಷನ್ ಮಾಡಬೇಕು ಹಾಗೂ ಪಟಾಕಿ ಖರೀದಿಗೆ ಬರುವ ಸಾರ್ವಜನಿಕರಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆಯನ್ನು ಕಲ್ಪಿಸುವ ಜೊತೆಗೆ ಕನಿಷ್ಠ ಆರು ಅಡಿ ಅಂತರವನ್ನು ಗುರುತಿಸಬೇಕು. ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಕಡ್ಡಾಯವಗಿ ಮಾಸ್ಕ್ ಧರಿಸಬೇಕು ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.