ADVERTISEMENT

ಚುನಾವಣೆ ನೀತಿಸಂಹಿತೆ ಉಲ್ಲಂಘನೆ: ಸಿದ್ದರಾಮಯ್ಯ ವಿರುದ್ಧ ದೂರು

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2021, 13:08 IST
Last Updated 20 ಅಕ್ಟೋಬರ್ 2021, 13:08 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಹಾವೇರಿ:ಸಿ.ಎಂ. ಉದಾಸಿ ವಿರುದ್ಧ ನಿರಾಧಾರ ಆರೋಪ ಮಾಡುವ ಮೂಲಕ ನೀತಿಸಂಹಿತೆ ಉಲ್ಲಂಘಿಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದುಬಿಜೆಪಿ ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕ ಎಸ್‌.ಎಸ್‌. ಮಿಟ್ಟಲಕೊಡ ಅವರು ಹಾನಗಲ್‌ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.

ಅ.16ರಂದು ಹಾನಗಲ್‌ ತಾಲ್ಲೂಕಿನ ಮಲಗುಂದ ಗ್ರಾಮದಲ್ಲಿ ನಡೆದ ಕಾಂಗ್ರೆಸ್‌ ಚುನಾವಣಾ ವೇದಿಕೆಯ ಮೇಲೆ ಸಿದ್ದರಾಮಯ್ಯ ಅವರು ಮಾತನಾಡುತ್ತಾ, ಸಿ.ಎಂ.ಉದಾಸಿ ಅವರು ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಸಂಗೂರ ಸಕ್ಕರೆ ಕಾರ್ಖಾನೆಯಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಆರೋಪ ಮಾಡುವ ಮೂಲಕ ಮತದಾರರನ್ನು ತಪ್ಪು ದಾರಿಗೆ ಎಳೆದಿದ್ದಾರೆ. ಅಗಲಿದ ನಾಯಕನಿಗೆ ಅಗೌರವ ತಂದಿದ್ದಾರೆ.ವಕೀಲರೂ ಆಗಿರುವ ಸಿದ್ದರಾಮಯ್ಯ ಅವರಿಗೆ ನೀತಿಸಂಹಿತೆಯ ಅರಿವು ಇದ್ದರೂ ಉದ್ದೇಶಪೂರ್ವಕವಾಗಿ ಸುಳ್ಳು ಆರೋಪ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಭ್ರಷ್ಟಾಚಾರದ ಬಗ್ಗೆ ಮಾತನಾಡದೆ, ತನಿಖೆಯನ್ನೂ ಮಾಡದೆ ಕೇವಲ ಚುನಾವಣಾ ಲಾಭಕ್ಕಾಗಿ ಹಾಗೂ ಬಿಜೆಪಿ ಅಭ್ಯರ್ಥಿಗೆ ಮುಜಗರ ಮಾಡುವ ಉದ್ದೇಶದಿಂದ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಎಂದು ದೂರಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.