
ಹಾನಗಲ್: ‘ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಐದು ಗ್ಯಾರಂಟಿ ಭರವಸೆ ಜೊತೆಗೆ ತಾಲ್ಲೂಕಿನಲ್ಲಿ ಮನೆ ಹಕ್ಕುಪತ್ರ ವಿತರಿಸುವುದಾಗಿ 6ನೇ ಗ್ಯಾರಂಟಿ ಘೋಷಣೆ ಮಾಡಿದ್ದೆವು. ಇದೀಗ ನುಡಿದಂತೆ ನಡೆದು ಕುಟುಂಬಗಳಿಗೆ ಮನೆ ಮಾಲಿಕತ್ವ ದೊರಕಿಸಲಾಗುತ್ತಿದೆ’ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ಇಲ್ಲಿನ ಜನಸಂಪರ್ಕ ಕಚೇರಿಯಲ್ಲಿ ಭಾನುವಾರ ನಡೆದ ತಾಲ್ಲೂಕಿನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ತಾಲ್ಲೂಕಿನ ಸುಮಾರು 12 ಸಾವಿರಕ್ಕೂ ಹೆಚ್ಚು ಕುಟುಂಬಗಳು ಯಾವುದೇ ದಾಖಲೆಗಳಿಲ್ಲದೇ ಸರ್ಕಾರಿ ಮತ್ತು ಖಾಸಗಿ ಜಮೀನುಗಳಲ್ಲಿ ಮನೆ ನಿರ್ಮಿಸಿಕೊಂಡು ಅತಂತ್ರವಾಗಿ ವಾಸಿಸುತ್ತಿವೆ. ಇಂಥ ಕುಟುಂಬಗಳಿಗೆ ಶಾಶ್ವತ ಮನೆ ಮಾಲಿಕತ್ವದ ಭರವಸೆ ನೀಡಲಾಗಿತ್ತು. ಇದೀಗ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರ ಸಹಕಾರದಿಂದ ಈ ಕಾರ್ಯ ಜಾರಿಯಾಗುತ್ತಿದೆ’ ಎಂದರು.
ಹಕ್ಕುಪತ್ರ ವಿತರಣೆ ಕಾರ್ಯದಲ್ಲಿ ವಿಜಯನಗರ ಜಿಲ್ಲೆ ಮೊದಲ ಸ್ಥಾನದಲ್ಲಿದ್ದು, ಹಾವೇರಿ ಜಿಲ್ಲೆ 2 ನೇ ಸ್ಥಾನದಲ್ಲಿದೆ. ಹಾನಗಲ್ ತಾಲ್ಲೂಕು ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದ್ದು, ಅತೀ ಹೆಚ್ಚು ಸಂಖ್ಯೆಯ ಕುಟುಂಬಗಳಿಗೆ ಅನುಕೂಲವಾಗುತ್ತಿರುವುದು ಹೆಚ್ಚು ಸಂತೋಷಕ್ಕೆ ಕಾರಣವಾಗಿದೆ’ ಎಂದರು.
ಫೆ.14 ರಂದು ಹಾವೇರಿಯಲ್ಲಿ ನಡೆಯಲಿರುವ ಸಾಧನಾ ಸಮಾವೇಶದಲ್ಲಿ ತಾಲ್ಲೂಕಿನಿಂದ ಹೆಚ್ಚು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸೋಣ’ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಮರಗಡಿ, ಮಂಜು ಗೊರಣ್ಣನವರ ಸೇರಿದಂತೆ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.