ಅಶೋಕ ದ್ಯಾಮಪ್ಪ ಗೊಂದಿ
ಹಾವೇರಿ: ಗೋದಾಮು ನಿರ್ಮಾಣ ಕಾಮಗಾರಿಯ ಬಿಲ್ ಮಂಜೂರು ಮಾಡಲು ಲಂಚ ಪಡೆಯುತ್ತಿದ್ದ ಆರೋಪದಡಿ ಸವಣೂರು ತಾಲ್ಲೂಕಿನ ತೆಗ್ಗಿಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಅಶೋಕ ದ್ಯಾಮಪ್ಪ ಗೊಂದಿ ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
‘ಹುಬ್ಬಳ್ಳಿ ಹೊಸ ಬಸ್ ನಿಲ್ದಾಣದ ಬಳಿಯ ಹೋಟೆಲ್ನಲ್ಲಿ ₹ 50 ಸಾವಿರ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿಯೇ ದಾಳಿ ಮಾಡಿ ಪಿಡಿಒ ಅಶೋಕ ದ್ಯಾಮಪ್ಪ ಗೊಂದಿನನ್ನು ಬಂಧಿಸಲಾಗಿದೆ’ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದರು.
‘ತೆಗ್ಗಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಫಕ್ಕೀರನಂದಿಹಳ್ಳಿ ಗ್ರಾಮದಲ್ಲಿ ಗೋದಾಮು ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿತ್ತು. ಕಾಮಗಾರಿ ಮೊತ್ತ ₹ 1.60 ಲಕ್ಷವನ್ನು ಮಂಜೂರು ಮಾಡುವಂತೆ ಗುತ್ತಿಗೆದಾರರು, ಪಿಡಿಒ ಅವರನ್ನು ಕೋರಿದ್ದರು. ಬಿಲ್ ಮಂಜೂರು ಮಾಡಲು ಪಿಡಿಒ ಅವರು ₹ 80 ಸಾವಿರ ಲಂಚಕ್ಕೆ ಬೇಡಿಕೆ ಇರಿಸಿದ್ದರು. ನಂತರ, ಚೌಕಾಶಿ ಮಾಡಿ ₹ 50 ಸಾವಿರ ಲಂಚ ನೀಡುವಂತೆ ಪಟ್ಟು ಹಿಡಿದಿದ್ದರು. ನೊಂದ ಗುತ್ತಿಗೆದಾರ, ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.’
‘ಗುತ್ತಿಗೆದಾರರನ್ನು ಹುಬ್ಬಳ್ಳಿಗೆ ಕರೆಸಿಕೊಂಡಿದ್ದ ಪಿಡಿಒ, ₹ 50 ಸಾವಿರ ಪಡೆಯುತ್ತಿದ್ದರು. ಇದೇ ಸಂದರ್ಭದಲ್ಲಿ ದಾಳಿ ಮಾಡಿ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯ ಆಸ್ತಿ ಬಗ್ಗೆಯೂ ಮಾಹಿತಿ ಕಲೆಹಾಕಲಾಗುತ್ತಿದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.