
ಹಾವೇರಿ: ‘ಸಮಾಜದ ಪ್ರತಿಯೊಬ್ಬರು ಶಿಕ್ಷಣವಂತರಾಗಬೇಕು. ಮನೆಯೇ ಮೊದಲ ಪಾಠಶಾಲೆ. ಮನೆಯ ತಾಯಂದಿರು, ಮಕ್ಕಳಿಗೆ ಅಕ್ಷರ ಜ್ಞಾನದ ಮಹತ್ವ ತಿಳಿಸಬೇಕು. ನಿರಂತರವಾಗಿ ಶಾಲೆಗೆ ಹಾಜರಾಗಿ ಗುಣಮಟ್ಟದ ಶಿಕ್ಷಣವನ್ನು ಪಡೆಯುವಂತೆ ತಿಳಿವಳಿಕೆ ನೀಡಬೇಕು’ ಎಂದು ಹಾವೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ಪಾಟೀಲ ಹೇಳಿದರು.
ತಾಲ್ಲೂಕಿನ ತಿಮ್ಮಾಪೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಆಯೋಜಿಸಿದ್ದ ಕಬ್ಬೂರು ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಉದ್ಘಾಟಿಸಿ ಅವರು ಮಾತನಾಡಿದರು.
ಸಂಪನ್ಮೂಲ ವ್ಯಕ್ತಿ ಶಿಲ್ಪಾ ಉದ್ಯಮನವರ ನೇತೃತ್ವದಲ್ಲಿ ತಯಾರಿಸಿದ ಅಕ್ಷರ ತೇರು ಮೆರವಣಿಗೆ ಗ್ರಾಮದ ಬೀದಿಗಳಲ್ಲಿ ಡೊಳ್ಳು ಹಾಗೂ ಜಾನಪದ ಕಲಾ ತಂಡಗಳ ಮೂಲಕ ಜರುಗಿತು. ಶಾಲೆಯ ಮಕ್ಕಳೊಂದಿಗೆ ವಿಜೃಂಭಣೆಯಿಂದ ಮೆರವಣಿಗೆ ಜರುಗಿತು.
ಎಸ್ಡಿಎಂಸಿ ಅಧ್ಯಕ್ಷ ಎಸ್.ಎಂ. ಹರದೂರ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಮುಖ್ಯ ಶಿಕ್ಷಕ ಯು.ಬಿ. ಲಮಾಣಿ, ಗ್ರಾಮ ಪಂಚಾಯಿತಿ ಅಧ್ಯಕ್ಷ, ಎಸ್ಡಿಎಂಸಿ ಪದಾಧಿಕಾರಿಗಳು ಹಾಗೂ ಶಿಕ್ಷಣ ಸಂಯೋಜಕರು ಸಂಪನ್ಮೂಲ ವ್ಯಕ್ತಿಗಳು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.