
ಹಾವೇರಿ: ‘ಶಿಗ್ಗಾವಿ ತಾಲ್ಲೂಕಿನ ಬಂಕಾಪುರದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಮೂಲ ಸೌಕರ್ಯಗಳ ಕೊರತೆಯಿದೆ. ಅದನ್ನು ಪ್ರಶ್ನಿಸಿದರೆ, ಸಿಬ್ಬಂದಿ ಕಿರುಕುಳ ನೀಡುತ್ತಿದ್ದಾರೆ’ ಎಂದು ಆರೋಪಿಸಿ ಹಾಸ್ಟೆಲ್ನ ವಿದ್ಯಾರ್ಥಿಗಳು ಶನಿವಾರ ದಿಢೀರ್ ಪ್ರತಿಭಟನೆ ನಡೆಸಿದರು.
ಹಾಸ್ಟೆಲ್ ಎದುರು ಸೇರಿದ್ದ ವಿದ್ಯಾರ್ಥಿಗಳು, ತಮ್ಮ ಸಮಸ್ಯೆಗೆ ಪರಿಹಾರ ನೀಡುವಂತೆ ಒತ್ತಾಯಿಸಿದರು. ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಹಾವೇರಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ಹಮ್ಮಿಕೊಂಡಿದ್ದರು.
‘ಬೇರೆ ಊರಿನಿಂದ ಬಂದು, ಹಾಸ್ಟೆಲ್ನಲ್ಲಿ ಇದ್ದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದೇವೆ. ಹಾಸ್ಟೆಲ್ನಲ್ಲಿ ಮೂಲ ಸೌಕರ್ಯವಿಲ್ಲ. ನಾವೆಲ್ಲರೂ ನರಳುವ ಸ್ಥಿತಿಯಿದೆ. ವಸತಿ ನಿಲಯದಲ್ಲಿ ಸ್ವಚ್ಛತೆ ಸಮಸ್ಯೆ ವಿಪರೀತವಾಗಿದೆ. ಅಡುಗೆಗೆ ಬಳಸುವ ಪದಾರ್ಥಗಳಲ್ಲಿ ವಿಪರೀತ ಹುಳುಗಳಿವೆ. ಅದರಲ್ಲೇ ಅಡುಗೆ ಮಾಡಿ ನೀಡಲಾಗುತ್ತಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ಆರೋಗ್ಯ ಸಮಸ್ಯೆ ಉಂಟಾಗುತ್ತಿದೆ’ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡರು.
‘ಹಾಸ್ಟೆಲ್ನ ಹಲವು ಬಾಗಿಲುಗಳು ಮುರಿದಿವೆ. ಶೌಚಾಲಯದ ಅವ್ಯವಸ್ಥೆ ಹೆಚ್ಚಾಗಿದೆ. ಗುಣಮಟ್ಟದ ಆಹಾರ ಸಹ ಸಿಗುತ್ತಿಲ್ಲ. ಪುಸ್ತಕ, ನೀರಿನ ಬಕೆಟ್, ತಟ್ಟೆ, ಲೋಟ, ಶುಚಿ ಕಿಟ್, ಪ್ರಥಮ ಚಿಕಿತ್ಸಾ ಕಿಟ್, ಆಟದ ಸಾಮಗ್ರಿಗಳು, ಬೆಡ್ಶಿಟ್ಗಳನ್ನೂ ನೀಡುತ್ತಿಲ್ಲ. ಸಮಸ್ಯೆಗಳ ಬಗ್ಗೆ ಹಲವು ಬಾರಿ ವಾರ್ಡನ್ಗೆ ತಿಳಿಸಿದರೂ ಸ್ಪಂದನೆ ಸಿಕ್ಕಿಲ್ಲ’ ಎಂದು ದೂರಿದರು.
‘ಹಾಸ್ಟೆಲ್ ನಿರ್ವಹಣಗೆಯಲ್ಲಿ ಲೋಪ ಆಗುತ್ತಿದೆ. ನಮ್ಮಂಥ ಬಡ ಮಕ್ಕಳ ಹೆಸರಿನಲ್ಲಿ ಅಧಿಕಾರಿಗಳು ಭ್ರಷ್ಟಾಚಾರ ಮಾಡುತ್ತಿದ್ದಾರೆ. ಹುಳು ಬಿದ್ದ ಸಾಮಗ್ರಿಯಿಂದ ತಯಾರಿಸಿದ ಅಡುಗೆ ತಿಂದು ಏನಾದರೂ ತೊಂದರೆಯಾದರೆ, ಇಲಾಖೆ ಅಧಿಕಾರಿಗಳೇ ಹೊಣೆ. ಇಲಾಖೆಯ ಹಿರಿಯ ಅಧಿಕಾರಿಗಳು, ಹಾಸ್ಟೆಲ್ಗೆ ಭೇಟಿ ನೀಡಿ ಪರಿಶೀಲಿಸಬೇಕು. ತಪ್ಪಿತಸ್ಥ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಹಾಸ್ಟೆಲ್ನಲ್ಲಿ ಮೂಲ ಸೌಕರ್ಯ ಒದಗಿಸಿ, ಗುಣಮಟ್ಟದ ಊಟ ಕೊಡಿಸಬೇಕು’ ಎಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.