ADVERTISEMENT

ಹಾವೇರಿ: ಪ್ರತಿ ಪರೀಕ್ಷಾರ್ಥಿಗೂ ತಪಾಸಣೆ ಕಡ್ಡಾಯ

ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌.ಯೋಗೇಶ್ವರ ಸೂಚನೆ

​ಪ್ರಜಾವಾಣಿ ವಾರ್ತೆ
Published 12 ಜೂನ್ 2020, 12:49 IST
Last Updated 12 ಜೂನ್ 2020, 12:49 IST
ಎಸ್‌.ಯೋಗೇಶ್ವರ, ಹೆಚ್ಚುವರಿ ಜಿಲ್ಲಾಧಿಕಾರಿ 
ಎಸ್‌.ಯೋಗೇಶ್ವರ, ಹೆಚ್ಚುವರಿ ಜಿಲ್ಲಾಧಿಕಾರಿ    

ಹಾವೇರಿ: ‘ಜೂನ್ 18ರಂದು ನಡೆಯುವ ದ್ವಿತೀಯ ಪಿ.ಯು.ಸಿ ಇಂಗ್ಲಿಷ್‌ ವಿಷಯದ ಪರೀಕ್ಷೆಯಿಂದ ಯಾವುದೇ ವಿದ್ಯಾರ್ಥಿ ಮಾಹಿತಿಯ ಕೊರತೆ ಮತ್ತು ಸಾರಿಗೆ ವ್ಯವಸ್ಥೆಯ ಅನಾನುಕೂಲತೆಯಿಂದ ಪರೀಕ್ಷೆ ಬರೆಯಲಾಗದೇ ಮನೆಯಲ್ಲಿ ಉಳಿಯಬಾರದು. ಆಯಾ ಕಾಲೇಜುಗಳ ಪ್ರತಿಯೊಬ್ಬ ವಿದ್ಯಾರ್ಥಿಯನ್ನು ಸಂಪರ್ಕಿಸಿ ಪರೀಕ್ಷೆ ಬರೆಯಲು ವ್ಯವಸ್ಥೆ ಕೈಗೊಳ್ಳಬೇಕು’ ಎಂದು ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಕರಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಯೋಗೇಶ್ವರ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ದ್ವಿತೀಯ ಪಿ.ಯು.ಸಿ ಇಂಗ್ಲಿಷ್ ವಿಷಯದ ಪರೀಕ್ಷಾ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆವಹಿಸಿ ಕೇಂದ್ರವಾರು ಕೈಗೊಂಡಿರುವ ಸಿದ್ಧತೆಗಳ ಪರಿಶೀಲನೆ ನಡೆಸಿದ ಅವರು ಸಾಮಾಜಿಕ ಅಂತರದ ಜೊತೆಗೆ ಪ್ರತಿ ವಿದ್ಯಾರ್ಥಿಗೂ ಮಾಸ್ಕ್ ಹಾಗೂ ಸ್ಕ್ರೀನಿಂಗ್ ಕಡ್ಡಾಯಗೊಳಿಸಬೇಕು ಎಂದು ಸೂಚಿಸಿದರು.

ಕೊಠಡಿ ಸ್ಯಾನಿಟೈಸ್‌ ಮಾಡಿ:

ADVERTISEMENT

ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ಎಸ್.ಒ.ಪಿ ಮಾನದಂಡದಂತೆ ಪರೀಕ್ಷೆ ನಡೆಸಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಒಂದು ಕೊಠಡಿಯಲ್ಲಿ ಕೇವಲ 24 ವಿದ್ಯಾರ್ಥಿಗಳಿಗೆ ಮಾತ್ರ ಆಸನ ವ್ಯವಸ್ಥೆ ಮಾಡಬೇಕು, ಕೊಠಡಿ ಪ್ರವೇಶಕ್ಕೂ ಮುನ್ನ ಪ್ರತಿಯೊಬ್ಬರಿಗೂ ಜ್ವರ ತಪಾಸಣೆ ನಡೆಸಬೇಕು, ಸ್ಯಾನಿಟೈಸರ್‌ನಿಂದ ಕೈತೊಳೆಯಬೇಕು, ಪ್ರತಿ ವಿದ್ಯಾರ್ಥಿಯು ಮಾಸ್ಕ್ ಧರಿಸಿ ಪರೀಕ್ಷೆ ಬರೆಯಬೇಕು, ಜ್ವರದ ಲಕ್ಷಣ ಇರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಬೇಕು, ಎಲ್ಲ ಕೊಠಡಿಗಳನ್ನು ಸ್ಯಾನಿಟೈಜೇಶನ್ ಮಾಡಬೇಕು ಎಂದು ಸೂಚನೆ ನೀಡಿದರು.

ಸ್ಕ್ರೀನಿಂಗ್ ಕಾರ್ಯಕ್ಕಾಗಿ ಪರೀಕ್ಷಾ ಕೇಂದ್ರಕ್ಕೆ ಬೆಳಿಗ್ಗೆ 9 ಗಂಟೆಗೆ ವಿದ್ಯಾರ್ಥಿಗಳು ಹಾಜರಾಗಲು ಸೂಚನೆ ನೀಡಬೇಕು, ಸ್ಕ್ರೀನಿಂಗ್, ಅಂತರ, ಸ್ಯಾನಿಟೈಜೇಶನ್, ಮಾಸ್ಕ್ ವಿತರಣೆಗೆ ವಿವಿಧ ಉಪನ್ಯಾಸಕರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಬೇಕು, ಎಲ್ಲರಿಗೂ ಗುರುತಿನ ಚೀಟಿ ನೀಡಬೇಕು, ಅಂಥವರಿಗೆ ಮಾತ್ರ ಪರೀಕ್ಷಾ ಆವರಣದಲ್ಲಿ ಅವಕಾಶ ಕಲ್ಪಿಸಬೇಕೆಂದು ಸೂಚನೆ ನೀಡಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ನಿರಂಜನ ಮಾಹಿತಿ ನೀಡಿ, ‘ದ್ವಿತೀಯ ಪಿ.ಯು.ಸಿ ಇಂಗ್ಲಿಷ್‌ ವಿಷಯದ ಪರೀಕ್ಷೆ ಜೂನ್ 18ರಂದು ಬೆಳಿಗ್ಗೆ 10.15ರಿಂದ 1.30ರವರೆಗೆ ನಡೆಯಲಿದೆ. ಜಿಲ್ಲೆಯಲ್ಲಿ 129 ಪದವಿ ಪೂರ್ವ ಕಾಲೇಜುಗಳಿದ್ದು, ಹೊರ ಜಿಲ್ಲೆಯ 902 ವಿದ್ಯಾರ್ಥಿಗಳು ಸೇರಿದಂತೆ 13,955 ವಿದ್ಯಾರ್ಥಿಗಳು ದ್ವಿತೀಯ ಪಿ.ಯು.ಸಿ ಇಂಗ್ಲಿಷ್ ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ 23 ಪರೀಕ್ಷಾ ಕೇಂದ್ರಗಳು ತೆರೆಯಲಾಗಿದೆ ಎಂದು ವಿವರಿಸಿದರು.

ಹೆಚ್ಚುವರಿ ಪೋಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಪರೀಕ್ಷಾ ಕಾರ್ಯಕ್ಕೆ ಪೊಲೀಸ್‌ ಬಂದೋಬಸ್ತ್ ಕುರಿತಂತೆ ಚರ್ಚಿಸಿದರು. ಸಭೆಯಲ್ಲಿ ವಿವಿಧ ಕಾಲೇಜ ಪ್ರಾಚಾರ್ಯರು, ಪರೀಕ್ಷಾ ಕೇಂದ್ರದ ಅಧಿಕ್ಷಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.