ಹಾವೇರಿ: ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು (ಪಿಎಂಎಫ್ಬಿವೈ) ಅತ್ಯುತ್ತಮ ರೀತಿಯಲ್ಲಿ ಅನುಷ್ಠಾನಗೊಳಿಸಿದ್ದಕ್ಕಾಗಿ ಹಾವೇರಿ ಜಿಲ್ಲೆಗೆ ರಾಷ್ಟ್ರೀಯ ಪ್ರಶಸ್ತಿ ಲಭ್ಯವಾಗಿದ್ದು, ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ ಅವರು ಶುಕ್ರವಾರ ಪ್ರಶಸ್ತಿ ಸ್ವೀಕರಿಸಿದ್ದರು.
2023–24ನೇ ಸಾಲಿನ ಬೆಳೆ ಸಬ್ಸಿಡಿ ವಿಮಾ ಯೋಜನೆಯಾದ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯ ಅತ್ಯುತ್ತಮ ಅನುಷ್ಠಾನ ಹಾಗೂ ಪರಿಣಾಮಕಾರಿ ಆವಿಷ್ಕಾರ ಮತ್ತು ಉಪಕ್ರಮಗಳನ್ನು ಅಳವಡಿಸಿಕೊಂಡಿರುವುದನ್ನು ಗುರುತಿಸಿ ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಪಿಎಂಎಫ್ಬಿವೈ ರೈತರನ್ನು ರಕ್ಷಿಸುವ ಗುರಿಯನ್ನು ಹೊಂದಿರುವ ಬೆಳೆ ಸಬ್ಸಿಡಿ ವಿಮಾ ಯೋಜನೆಯಾಗಿದೆ. ಈ ಯೋಜನೆಯು 2016ರಲ್ಲಿ ಕರ್ನಾಟಕದಲ್ಲಿ ಜಾರಿಗೊಳಿಸಲಾಗಿದೆ. ಕೃಷಿ ಸಚಿವಾಲಯದ ಅಡಿಯಲ್ಲಿ ಕೃಷಿ, ಸಹಕಾರ ಮತ್ತು ರೈತರ ಕಲ್ಯಾಣ ಇಲಾಖೆಯು ವಿವಿಧ ವಿಮಾ ಕಂಪನಿಗಳ ಜೊತೆ ಯೋಜನೆ ಜಾರಿಗೊಳಿಸಲಾಗುತ್ತಿದೆ.
ಕೇರಳದಲ್ಲಿ ಶುಕ್ರವಾರ ಜರುಗಿದ ಸಮಾರಂಭದಲ್ಲಿ ಹಾವೇರಿ ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ್ ದಾನಮ್ಮನವರ ಹಾಗೂ ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಲ್ಲಿಕಾರ್ಜುನ ಪ್ರಶಸ್ತಿ ಸ್ವೀಕರಿಸಿದರು.
ಜಿಲ್ಲಾಧಿಕಾರಿ ವಿಜಯ ಮಹಾಂತೇಶ, ‘ಜಿಲ್ಲೆಯ ಪ್ರತಿಯೊಬ್ಬ ಅಧಿಕಾರಿ ಹಾಗೂ ಸಿಬ್ಬಂದಿ ಕೆಲಸದ ಶ್ರಮದಿಂದ ಪ್ರಶಸ್ತಿ ಬಂದಿದೆ’ ಎಂದರು.
‘ಕೃಷಿ ಇಲಾಖೆ, ತೋಟಗಾರಿಕೆ, ಅಂಕಿ–ಸಂಖ್ಯಾ ವಿಭಾಗ, ಆರ್ಡಿಪಿಆರ್ ಇಲಾಖೆ, ಜಿಲ್ಲಾ ಉಸ್ತುವಾರಿ ಸಚಿವರು, ಸಂಸದ, ಶಾಸಕರು, ರೈತರ ಸಹಕಾರದಿಂದ ಯೋಜನೆ ಅನುಷ್ಠಾನ ಅತ್ಯುತ್ತಮವಾಗಿದೆ. ಜಿಲ್ಲಾಡಳಿತದ ಪರವಾಗಿ ಪ್ರಶಸ್ತಿ ಸ್ವೀಕರಿಸಿದ್ದೇವೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.