
ಹಾವೇರಿ: 'ಇಂದು ಎಲ್ಲ ಕಡೆಯೂ ಉದ್ಯೋಗ ಕೊರತೆ ಕಾಡುತ್ತಿದೆ. ಗ್ರಾಮೀಣ ಭಾಗದ ಅಭ್ಯರ್ಥಿಗಳು ಉದ್ಯೋಗದ ಕಂಪನಿಗಳಿಗೆ ಸಂದರ್ಶನ ನೀಡಲು ಶಹರಕ್ಕೆ ಹೋಗಲು ಭಯಪಡುತ್ತಿದ್ದಾರೆ. ಅಂಥ ಅಭ್ಯರ್ಥಿಗಳಿಗೆ ಉದ್ಯೋಗ ಕೊಡಿಸಲು ನನ್ನ ಕ್ಷೇತ್ರ ಸೊರಬದಲ್ಲೂ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗುವುದು' ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.
ಜಿಲ್ಲೆಯ ರಾಣೆಬೆನ್ನೂರು ನಗರದಲ್ಲಿ ಶನಿವಾರ ಹಮ್ಮಿಕೊಂಡಿರುವ 'ಜಿಲ್ಲಾ ಮಟ್ಟದ ಉದ್ಯೋಗ ಮೇಳ' ಉದ್ಘಾಟಿಸಿ ಅವರು ಮಾತನಾಡಿದರು.
'ಹಾವೇರಿ ಜಿಲ್ಲೆಯಲ್ಲಿ ಒಳ್ಳೆಯ ರೀತಿಯಲ್ಲಿ ಉದ್ಯೋಗ ಮೇಳ ಮಾಡಿದ್ದಾರೆ. ಇದರ ಬಗ್ಗೆ ಕೇಳಿದವರು, ನಮ್ಮ ಕ್ಷೇತ್ರದಲ್ಲಿ ಯಾವಾಗ ಉದ್ಯೋಗ ಮೇಳ ಮಾಡುತ್ತೀರಾ? ಎಂದು ಕೇಳುತ್ತಿದ್ದಾರೆ. ಹೀಗಾಗಿ, ಇದೇ ಡಿಸೆಂಬರ್ನಲ್ಲಿ ನನ್ನ ಕ್ಷೇತ್ರದಲ್ಲೂ ಉದ್ಯೋಗ ಮೇಳ ಆಯೋಜಿಸಲು ಸಿದ್ಧತೆ ನಡೆಸುವೆ' ಎಂದರು.
'ಮಕ್ಕಳ ದಿನಾಚರಣೆ ಸಂದರ್ಭದಲ್ಲಿ ದೇಶದಲ್ಲೇ ಇದೇ ಮೊದಲ ಬಾರಿಗೆ ಪೋಷಕರು-ಶಿಕ್ಷಕರ ಸಭೆ ನಡೆಸಲಾಯಿತು. ರಾಜ್ಯದ 46 ಸಾವಿರ ಶಾಲೆಗಳಲ್ಲಿ ಈ ಸಭೆ ನಡೆದು, ಹೊಸ ಇತಿಹಾಸ ಸೃಷ್ಟಿಯಾಗಿದೆ' ಎಂದರು.
'ಮುಂದಿನ ವರ್ಷದಿಂದ ಶಾಲಾ ಮಕ್ಕಳಿಗೂ ಉಚಿತವಾಗಿ ನೋಟ್ಬುಕ್ ನೀಡಲಾಗುವುದು. ಪಿಯುಸಿ ವಿದ್ಯಾರ್ಥಿಗಳಿಗೂ ಉಚಿತವಾಗಿ ಪಠ್ಯಪುಸ್ತಕ ಹಾಗೂ ನೋಟ್ಬುಕ್ ನೀಡಲಾಗುವುದು. ಶಿಕ್ಷಣಕ್ಕೆ ಬಜೆಟ್ನಲ್ಲಿ ಹೆಚ್ಚು ಹಣ ನೀಡುವಂತೆಯೂ ಮುಖ್ಯಮಂತ್ರಿಯವರನ್ನು ಕೋರಲಾಗಿದೆ' ಎಂದರು.
'ಇಲಾಖೆಯಲ್ಲಿ ಒಳ್ಳೆಯ ಕೆಲಸಗಳು ಆಗುತ್ತಿದ್ದೇವೆ. ಎಲ್ಲದ್ದಕ್ಕೂ ಬಿಜೆಪಿಯವರು ಟೀಕೆ ಮಾಡುತ್ತಾರೆ. ಅದಕ್ಕೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ನಮ್ಮ ಯೋಜನೆಗಳಿಂದ ಲಾಭ ಪಡೆದ ವಿದ್ಯಾರ್ಥಿಗಳು, ಶಿಕ್ಷಣದಲ್ಲಿ ಪ್ರಗತಿ ಸಾಧಿಸಿ ಟೀಕೆಗಳಿಗೆ ಉತ್ತರ ನೀಡುತ್ತಿದ್ದಾರೆ' ಎಂದರು.
ಹಾವೇರಿ ಜಿಲ್ಲಾಡಳಿತ ಹಾಗೂ ಕುಶಲಾಭಿವೃದ್ಧಿ ಉದ್ಯಮಶೀಲತೆ ಜೀವನೋಪಾಯ ಇಲಾಖೆ ವತಿಯಿಂದ ಹಮ್ಮಿಕೊಂಡಿರುವ ಉದ್ಯೋಗ ಮೇಳದಲ್ಲಿ 50ಕ್ಕೂ ಹೆಚ್ಚು ಕಂಪನಿಗಳು ಪಾಲ್ಗೊಂಡಿವೆ. ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗವಹಿಸಿ, ಸಂದರ್ಶನಕ್ಕೆ ಹಾಜರಾಗುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.