ಹಾವೇರಿ: ಮನೆ ಮನೆಗೆ ತೆರಳಿ ಜನರ ಆರೋಗ್ಯ ತಪಾಸಣೆ ಹಾಗೂ ಔಷಧೋಪಚಾರ ನಿರ್ವಹಣೆ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಗೃಹ ಆರೋಗ್ಯ ಯೋಜನೆ’ಗೆ ಹಾವೇರಿ ಜಿಲ್ಲೆಯಲ್ಲಿಯೂ ಚಾಲನೆ ನೀಡಲಾಗಿದೆ.
ಇಲ್ಲಿಯ ದೇವಗಿರಿ ರಸ್ತೆಯಲ್ಲಿರುವ ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (ಹಿಮ್ಸ್) ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಯೋಜನೆಯ ಆಶಾ ಕೈಪಿಡಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಬಿಡುಗಡೆಗೊಳಿಸಿದರು.
ಜನರ ಮನೆ ಬಾಗಿಲಿಗೆ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಯೋಜನೆ ಘೋಷಿಸಿದ್ದರು. 2024ರ ಅಕ್ಟೋಬರ್ 24ರಂದು ಬೆಂಗಳೂರಿನಲ್ಲಿ ಯೋಜನೆಗೆ ಚಾಲನೆ ನೀಡಿ, ಕೋಲಾರ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಿದ್ದರು. ಅದರ ಯಶಸ್ಸಿನ ನಂತರ, ರಾಜ್ಯದ ಎಲ್ಲ ಜಿಲ್ಲೆಗಳಿಗೂ ಈ ಯೋಜನೆ ವಿಸ್ತರಿಸಲಾಗಿದೆ.
‘30 ವರ್ಷ ವಯೋಮಿತಿ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ವ್ಯಕ್ತಿಗಳ ಆರೋಗ್ಯ ತಪಾಸಣೆ ಮತ್ತು ನಿರ್ವಹಣೆ ನಡೆಸಲಾಗುವುದು. ಮಧುಮೇಹ, ರಕ್ತದೊತ್ತಡ ಮತ್ತು ಮೂರು ಸಾಮಾನ್ಯ ಕ್ಯಾನ್ಸರ್ಗಳ (ಬಾಯಿ, ಸ್ತನ ಮತ್ತು ಗರ್ಭಕಂಠ) ತಪಾಸಣೆಯನ್ನೂ ಮಾಡಲಾಗುವುದು’ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದರು.
‘ಆರೋಗ್ಯ ತಪಾಸಣೆ ನಂತರ, ಏನಾದರೂ ಸಮಸ್ಯೆ ಕಂಡುಬಂದರೆ ಆಯುಷ್ಮಾನ್ ಆರೋಗ್ಯ ಮಂದಿರಕ್ಕೆ ಆಹ್ವಾನಿಸಲಾಗುವುದು. ಅಲ್ಲಿಯೂ ಪುನಃ ತಪಾಸಣೆ, ನಿರ್ವಹಣೆ ಮತ್ತು ಉಚಿತವಾಗಿ ಔಷಧಿಗಳನ್ನು ಒದಗಿಸಲಾಗುವುದು. ತಪಾಸಣೆ ಸಂದರ್ಭದಲ್ಲಿ ಆರೋಗ್ಯ ಸಮಸ್ಯೆಗಳ ಬಗ್ಗೆ ಜನರಲ್ಲಿ ಜಾಗೃತಿ ಸಹ ಮೂಡಿಸಲಾಗುತ್ತಿದೆ’ ಎಂದು ಹೇಳಿದರು.
‘ಆಶಾ ಕಾರ್ಯಕರ್ತೆಯರು ಮನೆಗಳಿಗೆ ಭೇಟಿ ನೀಡಿ ಆರೋಗ್ಯದ ಅರಿವು ಮೂಡಿಸಲಿದ್ದಾರೆ. ಏನಾದರೂ ಸಮಸ್ಯೆಗಳು ಕಂಡುಬಂದರೆ, ಅಂಥವರನ್ನು ಆಯುಷ್ಮಾನ್ ಆರೋಗ್ಯ ಮಂದಿರಕ್ಕೆ ಕರೆತರಲಿದ್ದಾರೆ. ವೈದ್ಯಕೀಯ ಅಧಿಕಾರಿಗಳು, ರೋಗನಿರ್ಣಯ, ಚಿಕಿತ್ಸೆ ಮತ್ತು ನಿರ್ವಹಣೆ ಸೇವೆಗಳನ್ನು ಒದಗಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.