ಹಾವೇರಿ: ರಾಜ್ಯ ಸರ್ಕಾರದ ನಿರ್ದೇಶನದಂತೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಿದ್ಧತೆ ಮಾಡಿಕೊಂಡಿದ್ದು, ಸೆ. 22ರಿಂದ ಅಕ್ಟೋಬರ್ 7ರವರೆಗೂ ‘ಮನೆ ಮನೆ ಸಮೀಕ್ಷೆ’ ನಡೆಯಲಿದೆ.
‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಎನ್ನುವುದು ರಾಜ್ಯದ ಎಲ್ಲ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ತಿಳಿದುಕೊಂಡು ರಾಜ್ಯದ ನೀತಿ ನಿರೂಪಣೆಯನ್ನು ಕೈಗೊಳ್ಳಲು ಆಧಾರವಾಗಿರುತ್ತದೆ. ಸಮೀಕ್ಷೆ ಕಾರ್ಯವು ಈ ನಾಡಿನ ಸೇವೆಯ ಭಾಗವಾಗಿದೆ. ಇದಕ್ಕೆ ಜನರು ಸಹಕರಿಸಬೇಕು’ ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ.
‘ಪ್ರತಿಯೊಂದು ಮನೆಗೂ ಸಮೀಕ್ಷೆದಾರರು ಬರಲಿದ್ದಾರೆ. ಸಮೀಕ್ಷೆಯಲ್ಲಿ ಸುಮಾರು 60 ಪ್ರಶ್ನೆಗಳಿದ್ದು, ಪಡಿತರ ಚೀಟಿ ಮತ್ತು ಆಧಾರ್ ಸಂಖ್ಯೆಯ ಆಧಾರದಲ್ಲಿ ಮಾಹಿತಿ ಪಡೆಯಲಿದ್ದಾರೆ/ ಸಮೀಕ್ಷೆದಾರರು ಮನೆಗೆ ಭೇಟಿ ನೀಡಿದಾಗ ಜನರು ತಮ್ಮ ಪಡಿತರ ಚೀಟಿ, ಆಧಾರ್ ಕಾರ್ಡ್ ಅಥವಾ ಆಧಾರ್ ಸಂಖ್ಯೆ, ಅಂಗವಿಕಲರಾಗಿದ್ದರೆ ಯುಐಡಿ ಕಾರ್ಡ್ ಅಥವಾ ಅಂಗವಿಕಲರ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ ನೀಡಬೇಕು’ ಎಂದಿದ್ದಾರೆ.
‘ಕುಟುಂಬದ ಎಲ್ಲ ಸದಸ್ಯರು, ಆಧಾರ್ ಕಾರ್ಡ್ಗೆ ತಮ್ಮ ಮೊಬೈಲ್ ಸಂಖ್ಯೆ ಲಿಂಕ್ ಆಗಿರುವುದರಿಂದ ಖಚಿತಪಡಿಸಿಕೊಳ್ಳಬೇಕು. ಸಮೀಕ್ಷೆ ಸಮಯದಲ್ಲಿ ಇ–ಕೆವೈಸಿ ಮಾಡುವಾಗ ಒಟಿಪಿ ಅಗತ್ಯವಿರುತ್ತದೆ.
‘ಪ್ರತಿ ಸದಸ್ಯರ ವಿದ್ಯಾರ್ಹತೆ, ಕೌಶಲ ತರಬೇತಿಯ ಅಗತ್ಯತೆ, ಆದಾಯ, ಕುಟುಂಬದ ಸ್ಥಿರ ಮತ್ತು ಚರಾಸ್ತಿ ವಿವರಗಳು, ಧರ್ಮ, ಜಾತಿ, ಉಪಜಾತಿ ಹಾಗೂ ಕುಲಕಸುಬು ಮುಂತಾದ ವಿಷಯಗಳು ಸೇರಿದಂತೆ ಎಲ್ಲ ಪ್ರಶ್ನೆಗಳಿಗೂ ಕುಟುಂಬದ ಸದಸ್ಯರು ಸರಿಯಾದ ಮಾಹಿತಿ ನೀಡಬೇಕು’ ಎಂದು ಹೇಳಿದ್ದಾರೆ.
‘ಸಮೀಕ್ಷೆ ಕುರಿತ ಮಾಹಿತಿಗಾಗಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸಹಾಯವಾಣಿ: 8050770004 ಸಂಪರ್ಕಿಸಬಹುದು’ ಎಮದು ತಿಳಿಸಿದ್ದಾರೆ.
3.38 ಲಕ್ಷ ಮನೆ: ವಿದ್ಯುತ್ ಸಂಪರ್ಕ ಪಡೆದಿರುವ ಮನೆಗಳ ಮೀಟರ್ ಆಧರಿಸಿ ಸಮೀಕ್ಷೆ ನಡೆಸಲಾಗುತ್ತಿದೆ. ಮೀಟರ್ ಇರುವ ಜಾಗದಲ್ಲಿ ಈಗಾಗಲೇ ಸ್ಟಿಕ್ಕರ್ ಅಂಟಿಸಲಾಗಿದೆ. ಹಾವೇರಿ ಜಿಲ್ಲೆಯಲ್ಲಿ 3.38 ಲಕ್ಷ ಮನೆಗಳಿವೆ. ಇದರಲ್ಲಿ 3.20 ಲಕ್ಷ ಮನೆಗಳಿಗೆ ಮೀಟರ್ಗಳಿವೆ. ಉಳಿದ ಮನೆಗಳಿಗೆ ಮೀಟರ್ಗಳಿಲ್ಲ. ಎಲ್ಲ ಮನೆಗಳನ್ನು ಗುರುತಿಸಿ ಸಮೀಕ್ಷೆ ನಡೆಸಲು ಆಯೋಗ ತಯಾರಿ ಮಾಡಿಕೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.