
ಹಾವೇರಿ: ಇಲ್ಲಿಯ ಜಿಲ್ಲಾಸ್ಪತ್ರೆ ಅಧೀನದಲ್ಲಿರುವ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಹಸುಗೂಸು ಮೃತಪಟ್ಟ ಪ್ರಕರಣದ ವಿಚಾರಣೆಗಾಗಿ ಆರು ಜನ ಪರಿಣಿತರ ಸಮಿತಿ ರಚಿಸಲಾಗಿದ್ದು, ಸಮಿತಿಯ ಸದಸ್ಯರು ಮಾಹಿತಿ ಕಲೆಹಾಕುತ್ತಿದ್ದಾರೆ.
ನ.18ರಂದು ಬೆಳಿಗ್ಗೆ ಆಸ್ಪತ್ರೆಗೆ ಬಂದಿದ್ದ ರಾಣೆಬೆನ್ನೂರು ತಾಲ್ಲೂಕಿನ ಕಾಕೋಳ ಗ್ರಾಮದ ರೂಪಾ (30) ಅವರಿಗೆ ಆಸ್ಪತ್ರೆಯ ಶೌಚಾಲಯ ಹಾಗೂ ಕಾರಿಡಾರ್ ನಡುವಿನ ಜಾಗದಲ್ಲಿ ದಿಢೀರ್ ಹೆರಿಗೆಯಾಗಿತ್ತು. ಅದೇ ಸ್ಥಳದಲ್ಲಿಯೇ ನೆಲಕ್ಕೆ ಬಿದ್ದು ತಲೆಗೆ ತೀವ್ರ ಪೆಟ್ಟಾಗಿ ಹಸುಗೂಸು ಮೃತಪಟ್ಟಿರುವುದಾಗಿ ಸಂಬಂಧಿಕರು ದೂರುತ್ತಿದ್ದಾರೆ.
‘ಆಸ್ಪತ್ರೆಯಲ್ಲಿ ಸೂಕ್ತ ಸಮಯಕ್ಕೆ ಬೆಡ್ ನೀಡಲಿಲ್ಲ. ಗರ್ಭಿಣಿ ಜೊತೆಗಿದ್ದ ಸಂಬಂಧಿಕರನ್ನು ಸಿಬ್ಬಂದಿ ಕೊಠಡಿಯಿಂದ ಹೊರಗೆ ಕಳುಹಿಸಿದ್ದರು. ವೈದ್ಯರು ಹಾಗೂ ಶುಶ್ರೂಷಕಿಯರ ನಿರ್ಲಕ್ಷ್ಯವೇ ಹಸುಗೂಸು ಮೃತಪಡಲು ಕಾರಣ’ ಎಂದು ಮಹಿಳೆಯ ಸಂಬಂಧಿಕರು ಆರೋಪಿಸಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಈಗಾಗಲೇ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು, ವಿಚಾರಣೆ ಆರಂಭಿಸಿದೆ.
ಇದರ ಬೆನ್ನಲ್ಲೇ, ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಸಹ ವಿಚಾರಣಾ ಸಮಿತಿ ರಚಿಸಿದ್ದಾರೆ. ‘ನೆಲಕ್ಕೆ ಬಿದ್ದು ಹಸುಗೂಸು ಮೃತಪಟ್ಟಿರುವ ಆರೋಪದ ಬಗ್ಗೆ ಸೂಕ್ತ ವಿಚಾರಣೆ ನಡೆಸಿ ವರದಿ ಸಲ್ಲಿಸಿ’ ಎಂದು ಸಮಿತಿಗೆ ಸೂಚನೆ ನೀಡಿದ್ದಾರೆ.
ಉಪ ವಿಭಾಗಾಧಿಕಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ, ಹಿಮ್ಸ್ (ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ) ಪ್ರಾಂಶುಪಾಲ ಸೇರಿದಂತೆ ಆರು ಜನ ಸಮಿತಿಯಲ್ಲಿದ್ದಾರೆ. ಸಮಿತಿಯ ಸದಸ್ಯರು ಆಸ್ಪತ್ರೆಗೆ ಭೇಟಿ ನೀಡಿ, ಮಾಹಿತಿ ಕಲೆಹಾಕುತ್ತಿದ್ದಾರೆ. ಮಹಿಳೆ, ಅವರ ಸಂಬಂಧಿಕರು, ವೈದ್ಯರು ಹಾಗೂ ಇತರೆ ಸಿಬ್ಬಂದಿಯನ್ನು ವಿಚಾರಣೆ ನಡೆಸಿ ವರದಿ ಸಿದ್ಧಪಡಿಸಲಿದ್ದಾರೆ.
‘ದಿಢೀರ್ ಹೆರಿಗೆಯಿಂದ ಹಸುಗೂಸು ಮೃತಪಟ್ಟಿದೆ ಎನ್ನಲಾದ ಪ್ರಕರಣದ ಬಗ್ಗೆ ವಿಚಾರಣೆ ನಡೆಸಲು ಸಮಿತಿ ರಚಿಸಲಾಗಿದೆ. ಸಮಿತಿ ನೀಡುವ ವರದಿ ಆಧರಿಸಿ ಮುಂದಿನ ಕ್ರಮ ಜರುಗಿಸಲಾಗುವುದು’ ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.
ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ: ಹಾವೇರಿ ಜಿಲ್ಲಾ ಆಸ್ಪತ್ರೆ ಹಾಗೂ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ಅವರು ಗುರುವಾರ ಭೇಟಿ ನೀಡಿದರು.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು, ಬಾಣಂತಿಯರು, ಅವರ ಸಂಬಂಧಿಕರನ್ನು ಮಾತನಾಡಿಸಿದರು. ಬಾಣಂತಿಯರ ಮಕ್ಕಳ ಆರೋಗ್ಯವನ್ನು ವಿಚಾರಿಸಿದರು.
ಪರಿಶೀಲನೆ ಬಳಿಕ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗೆ ಸೂಚನೆ ನೀಡಿದ ವಿಜಯ ಮಹಾಂತೇಶ, ‘ರೋಗಿಗಳೊಂದಿಗೆ ಹಾಗೂ ಆಸ್ಪತ್ರೆಗೆ ಬರುವ ಸಾರ್ವಜನಿಕರೊಂದಿಗೆ ಸೌಜನ್ಯಯುತವಾಗಿ ವರ್ತಿಸಬೇಕು. ಅವರ ಸಮಸ್ಯೆಯನ್ನು ತಾಳ್ಮೆಯಿಂದ ಆಲಿಸಿ, ಸೂಕ್ತ ಚಿಕಿತ್ಸೆ ನೀಡಬೇಕು. ಆಸ್ಪತ್ರೆಯಲ್ಲಿ ಸ್ವಚ್ಚತೆಗೆ ಮೊದಲ ಆದ್ಯತೆ ನೀಡಬೇಕು’ ಎಂದರು.
‘ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಸಿಬ್ಬಂದಿ, ಸರಿಯಾದ ಸಮಯಕ್ಕೆ ಕೆಲಸಕ್ಕೆ ಹಾಜರಾಗಬೇಕು. ಹೊರ ರೋಗಿಗಳ ವಿಭಾಗದಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜಿಸಬೇಕು. ರೋಗಿಗಳಿಗೆ ಔಷಧಿಗಳನ್ನು ಹೊರಗಡೆ ಬರೆದು ಕೊಡಬಾರದು’ ಎಂದು ಹೇಳಿದರು.
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಪಿ.ಆರ್. ಹಾವನೂರ ಹಾಜರಿದ್ದರು.
ಯುಡಿಆರ್ ದಾಖಲು: ಆಸ್ಪತ್ರೆಯಲ್ಲಿ ಹಸುಗೂಸು ಮೃತಪಟ್ಟಿರುವ ಬಗ್ಗೆ ಹಾವೇರಿ ಶಹರ ಠಾಣೆಯಲ್ಲಿ ಯುಡಿಆರ್ (ಅಸಹಜ ಸಾವು) ದಾಖಲಾಗಿದೆ.
‘ಹಸುಗೂಸು ಮೃತಪಟ್ಟ ಬಗ್ಗೆ ಸಂತ್ರಸ್ತೆ ರೂಪಾ ಹಾಗೂ ಸಂಬಂಧಿಕರ ಹೇಳಿಕೆ ಪಡೆದು ಯುಡಿಆರ್ ದಾಖಲಿಸಿಕೊಳ್ಳಲಾಗಿದೆ. ಇದು ವೈದ್ಯಕೀಯ ವಿಷಯಕ್ಕೆ ಸಂಬಂಧಪಟ್ಟ ಪ್ರಕರಣ. ಹೀಗಾಗಿ, ವೈದ್ಯಕೀಯ ಮಂಡಳಿಯ ಅಭಿಪ್ರಾಯ ಪಡೆದು ಮುಂದಿನ ಕ್ರಮ ಜರುಗಿಸಲಾಗುವುದು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.
‘ಸೇವೆಯಿಂದ ಅಮಾನತುಗೊಳಿಸಲು ಆಗ್ರಹ’
‘ಹಸುಗೂಸು ಮೃತಪಡಲು ಕಾರಣವಾದ ವೈದ್ಯರು ಹಾಗೂ ಶುಶ್ರೂಷಕರನ್ನು ಸೇವೆಯಿಂದ ಅಮಾನತು ಮಾಡಬೇಕು’ ಎಂದು ಕರ್ನಾಟಕ ರಕ್ಷಣಾ ವೇದಿಕೆಯ (ಪ್ರವೀಣಕುಮಾರ ಶೆಟ್ಟಿ ಬಣ) ಜಿಲ್ಲಾ ಘಟಕದ ಪದಾಧಿಕಾರಿಗಳು ಆಗ್ರಹಿಸಿದ್ದಾರೆ. ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಕ ಪಿ.ಆರ್. ಹಾವನೂರು ಅವರಿಗೆ ಗುರುವಾರ ಮನವಿ ಸಲ್ಲಿಸಿರುವ ಪದಾಧಿಕಾರಿಗಳು ‘ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ನಿರ್ಲಕ್ಷ್ಯ ವಹಿಸಿರುವ ವೈದ್ಯರು ಹಾಗೂ ಶುಶ್ರೂಷಕರಿಗೆ ಕಠಿಣ ಎಚ್ಚರಿಕೆ ರವಾನಿಸಬೇಕು. ಮುಂಬರುವ ದಿನಗಳಲ್ಲಿ ಇಂಥ ಘಟನೆಗಳು ಆಗದಂತೆ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.