
ಹಾವೇರಿ: ಮೆಕ್ಕೆಜೋಳಕ್ಕೆ ಪ್ರತಿ ಕ್ವಿಂಟಲ್ಗೆ ಕನಿಷ್ಠ ₹ 3,000 ನೀಡಬೇಕೆಂದು ಪಟ್ಟು ಹಿಡಿದಿರುವ ರೈತರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಬುಧವಾರ ಮೂರನೇ ದಿನ ಪೂರೈಸಿತು.
‘ಮೆಕ್ಕೆಜೋಳವನ್ನು ಖರೀದಿಸಲು ತ್ವರಿತವಾಗಿ ಕೇಂದ್ರ ತೆರೆಯಬೇಕು’ ಎಂದು ಸಹ ರೈತರು ಒತ್ತಾಯಿಸುತ್ತಿದ್ದಾರೆ. ಹಾವೇರಿ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರದಿಂದ ಧರಣಿ ಶುರು ಮಾಡಿರುವ ರೈತರು, ಅದೇ ಸ್ಥಳದಲ್ಲಿಯೇ ಅಡುಗೆ ಮಾಡಿ ಧರಣಿ ಮುಂದುವರಿಸಿದ್ದಾರೆ.
ಮಂಗಳವಾರ ರಾತ್ರಿಯೂ ಹಲವು ರೈತರು ಪೆಂಡಾಲ್ನಲ್ಲಿಯೇ ಮಲಗಿ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
‘ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ’ಯ ಜಿಲ್ಲಾ ಘಟಕದಿಂದ ಹಮ್ಮಿಕೊಂಡಿರುವ ಧರಣಿಯಲ್ಲಿ ಜಿಲ್ಲೆಯ ಪ್ರತಿ ತಾಲ್ಲೂಕಿನಿಂದಲೂ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ. ಜಿಲ್ಲೆಯ ಹಲವು ಮಠಗಳ ಸ್ವಾಮೀಜಿಗಳು, ವಿವಿಧ ಸಂಘಟನೆಯ ಮುಖಂಡರು ಧರಣಿಗೆ ಬೆಂಬಲ ಸೂಚಿಸುತ್ತಿದ್ದಾರೆ.
ಧರಣಿ ಸ್ಥಳದಲ್ಲಿ ಬುಧವಾರ ಭಜನಾ ಪದಗಳನ್ನು ಪ್ರಸ್ತುತಪಡಿಸುವ ಮೂಲಕ ರೈತರು, ತಮ್ಮ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿದರು. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಧರಣಿಯಲ್ಲಿ ಪಾಲ್ಗೊಂಡಿದ್ದು ಕಂಡುಬಂತು.
‘ಅತಿವೃಷ್ಟಿಯಿಂದ ಬೆಳೆ ಕಳೆದುಕೊಂಡ ರೈತರಿಗೆ ಪ್ರತಿ ಎಕರೆಗೆ ₹25,000 ಪರಿಹಾರ ನೀಡಬೇಕು. ವರದಾ ಹಾಗೂ ಬೇಡ್ತಿ ನದಿ ಜೋಡಣೆ ಮಾಡಬೇಕು. ಹೆಸ್ಕಾಂನವರು, ವಿದ್ಯುತ್ ಕಂಬ ಹಾಗೂ ತಂತಿಯನ್ನು ರೈತರೇ ಖರೀದಿಸುವಂತೆ ನಿಯಮ ಮಾಡಿದೆ. ಈ ನಿಯಮ ರದ್ದುಪಡಿಸಬೇಕು. ಹೆಸ್ಕಾಂ ಕಂಪನಿಯವರು ವಿಧಿಸುತ್ತಿರುವ ಶುಲ್ಕ ದುಬಾರಿಯಾಗಿದ್ದು, ಅದನ್ನು ಕೈ ಬಿಡಬೇಕು. ಬೆಳೆ ವಿಮೆಯಲ್ಲಾದ ತಾರತಮ್ಯ ಸರಿಪಡಿಸಬೇಕು’ ಎಂದು ರೈತರು ಒತ್ತಾಯಿಸಿದರು.
ಪ್ರತಿಕ್ರಿಯೆ ನೀಡದ ಸರ್ಕಾರ: ‘ಜಗತ್ತಿಗೆ ಅನ್ನ ನೀಡುವ ರೈತರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮೂರು ದಿನಗಳಿಂದ ಧರಣಿ ನಡೆಸಲಾಗುತ್ತಿದೆ. ರಾಜ್ಯ ಸರ್ಕಾರ ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ’ ಎಂದು ರೈತರು ಆಕ್ರೋಶ ಹೊರಹಾಕಿದರು.
‘ರೈತರ ವಿಚಾರದಲ್ಲಿ ಪ್ರತಿ ಬಾರಿಯೂ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ. ಮೆಕ್ಕೆಜೋಳಕ್ಕೆ ಸೂಕ್ತ ಬೆಲೆ ಸಿಗದಿದ್ದರಿಂದ, ರೈತರು ಕಂಗಾಲಾಗಿದ್ದಾರೆ. ಪ್ರಸಕ್ತ ಮುಂಗಾರಿನಲ್ಲಿ ಬೆಳೆ ಹಾನಿಯಾಗಿ, ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಷ್ಟೆಲ್ಲ ಸಮಸ್ಯೆಗಳಿದ್ದರೂ ಸರ್ಕಾರ ಮೌನವಾಗಿರುವುದು, ರೈತ ವಿರೋಧಿ ನಡೆಯಾಗಿದೆ’ ಎಂದು ದೂರಿದರು.
‘ಎರಡೂ ಸರ್ಕಾರಗಳು ಬೆಲೆ ನೀಡಲಿ’ ‘ಮೆಕ್ಕೆಜೋಳ ಖರೀದಿಸಲು ಎಫ್ಆರ್ಪಿ ಪ್ರಕಾರ ಕೇಂದ್ರ ಸರ್ಕಾರದಿಂದ ₹2400 ನೀಡಬೇಕು. ರಾಜ್ಯ ಸರ್ಕಾರವು ತನ್ನ ಪಾಲಿನಿಂದ ₹ 600 ನೀಡಬೇಕು. ಎರಡೂ ಸರ್ಕಾರಗಳು ಸೇರಿ ಮೆಕ್ಕೆಜೋಳಕ್ಕೆ ಪ್ರತಿ ಕ್ವಿಂಟಲ್ಗೆ ₹ 3000 ನೀಡಬೇಕು’ ಎಂದು ‘ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ’ಯ ಜಿಲ್ಲಾ ಘಟಕದ ಅಧ್ಯಕ್ಷ ರಾಮಣ್ಣ ಕೆಂಚಳ್ಳೇರ ಆಗ್ರಹಿಸಿದರು. ‘ಇಂದಿನ ದಿನಮಾನಗಳಲ್ಲಿ ರೈತರು ಸಾಕಷ್ಟು ಕಷ್ಟದಲ್ಲಿದ್ದಾರೆ. ರೈತರಿಗೆ ಸರ್ಕಾರದಿಂದ ಸೌಲಭ್ಯಗಳು ಸಮರ್ಪಕವಾಗಿ ಸಿಗುತ್ತಿಲ್ಲ. ರೈತರು ಏನೇ ಪಡೆಯಬೇಕಾದರೂ ಹೋರಾಟ ಮಾಡುವುದು ಅನಿವಾರ್ಯವಾಗುತ್ತಿದೆ. ಈಗ ಜಿಲ್ಲಾಧಿಕಾರಿ ಕಚೇರಿ ಎದುರು ಹೋರಾಟ ನಡೆಸುತ್ತಿದ್ದೇವೆ. ನಮ್ಮ ಹೋರಾಟಕ್ಕೆ ಸ್ಪಂದನೆ ಸಿಗದಿದ್ದರೆ ಗಂಭೀರ ಸ್ವರೂಪದ ಹೋರಾಟ ಶುರುವಾಗಲಿದೆ. ರೈತರಿಗಾಗಿ ಜೈಲಿಗೆ ಹೋಗಲು ಸಹ ನಾವು ಸಿದ್ಧರಿದ್ದೇವೆ’ ಎಂದರು.