ADVERTISEMENT

ರಾಜ್ಯದ ಸಾಲ ಹೆಚ್ಚಳ, ಸರ್ಕಾರ ದಿವಾಳಿ: ಎನ್.ರವಿಕುಮಾರ್ ಆರೋಪ

​ಪ್ರಜಾವಾಣಿ ವಾರ್ತೆ
Published 21 ಮೇ 2025, 15:24 IST
Last Updated 21 ಮೇ 2025, 15:24 IST
ಎನ್‌. ರವಿಕುಮಾರ
ಎನ್‌. ರವಿಕುಮಾರ   

ಹಾವೇರಿ: ‘ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಸಾಲದ ಪ್ರಮಾಣ ಹೆಚ್ಚಳವಾಗಿದೆ. ದಿನ ಕಳೆದಂತೆ ರಾಜ್ಯ ಸರ್ಕಾರವೂ ದಿವಾಳಿಯಾಗುತ್ತಿದೆ’ ಎಂದು ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ದೂರಿದರು.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಾಲ ಮಾಡಿರುವ ರಾಜ್ಯ ಸರ್ಕಾರ, ಹೊಸಪೇಟೆಯಲ್ಲಿ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ ಮಾಡಿತು’ ಎಂದು ಪ್ರಶ್ನಿಸಿದರು.

‘ಬಜೆಟ್‌ನಲ್ಲಿ ಎಸ್.ಸಿ., ಎಸ್.ಟಿ. ಸಮುದಾಯಕ್ಕೆ ಮೀಸಲಿಟ್ಟಿದ್ದ ₹38,800 ಕೋಟಿಯನ್ನು ಗ್ಯಾರಂಟಿ ಯೋಜನೆಗೆ ಬಳಸಿದ್ದಾರೆ. ಜಮೀನು, ಟ್ರ್ಯಾಕ್ಟರ್, ಟ್ಯಾಕ್ಸಿ, ಇತರೆ ಸಾಲ, ಸಬ್ಸಿಡಿ ನೀಡಲು ಬಳಸಬೇಕಿತ್ತು. ಎಸ್‌ಸಿಪಿ–ಟಿಎಸ್‌ಪಿ ಹಣವೂ ದುರ್ಬಳಕೆ ಆಗಿದೆ’ ಎಂದರು.

ADVERTISEMENT

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಶಿಷ್ಟರ ಹಣ ದುರ್ಬಳಕೆ ಮಾಡುತ್ತಿದ್ದಾರೆ. ಇದು ಸಂವಿಧಾನ ವಿರೋಧಿ ನಡೆ, ಸಾಮಾಜಿಕ ದ್ರೋಹ. ಗ್ಯಾರಂಟಿಗೆ ಖರ್ಚು ಮಾಡಿರುವ ಅವರ ಹಣವನ್ನು ವಾಪಸ್‌ ನೀಡಬೇಕು’ ಎಂದು ಒತ್ತಾಯಿಸಿದರು.

‘ಕಾಂಗ್ರೆಸ್ ಹೈಕಮಾಂಡ್ ಪಾಲಿಗೆ ರಾಜ್ಯ ಕಾಂಗ್ರೆಸ್ ಎಟಿಎಂ ಆಗಿದೆ. ರಾಹುಲ್ ಗಾಂಧಿ, ಸುರ್ಜೆವಾಲಾ ಅವರು ಸೂಟ್‌ಕೇಸ್‌ನಲ್ಲಿ ಹಣ ತುಂಬಿಕೊಂಡು ಹೋಗುತ್ತಿದ್ದಾರೆ. ವಾಲ್ಮೀಕಿ ನಿಗಮದ ₹ 140 ಕೋಟಿ ಹಣವನ್ನು ತೆಲಂಗಾಣದ ಚುನಾವಣೆಗೆ ಬಳಸಿದ್ದು ಸಾಬೀತಾಗಿದೆ. ಜನವಿರೋಧಿಯಾದ ಈ ಸರ್ಕಾರ ಆದಷ್ಟು ಬೇಗ ತೊಲಗುತ್ತದೆ’ ಎಂದರು.

ಮುಖಂಡ ಬಿ.ಸಿ. ಪಾಟೀಲ ಮಾತನಾಡಿ, ‘ಜನನ ಪ್ರಮಾಣ ಪತ್ರದ ಶುಲ್ಕ ₹5ರಿಂದ ₹50ಕ್ಕೆ ಏರಿಕೆ ಆಗಿದೆ. ಅಗತ್ಯ ವಸ್ತುಗಳ ಬೆಲೆಯೂ ಏರಿಕೆಯಾಗಿದ್ದು, ಈ ರಾಜ್ಯ ಸರ್ಕಾರ ಜನರನ್ನು ಸುಲಿಗೆ ಮಾಡುತ್ತಿದೆ’ ಎಂದು ದೂರಿದರು.

‘ಹಿಂದೂ ವಿರೋಧಿ ನಡೆ’

‘ರಾಜ್ಯದಲ್ಲಿ ಕಾನೂನು–ಸುವ್ಯವಸ್ಥೆ ಹಾಳಾಗಿದೆ. ಲೈಂಗಿಕ ಕಿರುಕುಳ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿವೆ. ಹಿಂದೂ ವಿರೋಧಿ ನಡೆ ಅನುಸರಿಸುತ್ತಿರುವ ರಾಜ್ಯ ಸರ್ಕಾರ ಅಲ್ಪಸಂಖ್ಯಾತರ ಪರವಾಗಿದೆ. ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದವರಿಗೆ ಈ ಸರ್ಕಾರ ಏನು ಮಾಡಲಿಲ್ಲ. ವಕ್ಪ್ ಹೆಸರಿನಲ್ಲಿ ಸಾವಿರಾರು ಎಕರೆ ಭೂಮಿ ಒತ್ತುವರಿಯಾದರೂ ಕ್ರಮ ತೆಗೆದುಕೊಂಡಿಲ್ಲ’ ಎಂದು ಎನ್. ರವಿಕುಮಾರ್ ದೂರಿದರು. ‘ಸರ್ಕಾರದ ಗುತ್ತಿಗೆಯಲ್ಲಿಯೂ ಮುಸ್ಲಿಮರಿಗೆ ಶೇ 4ರಷ್ಟು ಮೀಸಲಾತಿ ನೀಡಲಾಗಿದೆ. ಶೇ 60ರಷ್ಟು ಕಮಿಷನ್ ಪಡೆಯಲಾಗುತ್ತಿದೆ. ಉನ್ನತ ವ್ಯಾಸಂಗಕ್ಕೆ ಅನುಕೂಲ ಮಾಡಿಕೊಡಬೇಕಾದ ಸರ್ಕಾರ ಹೊಸ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿದೆ. ಮೈಸೂರು ಹಾಗೂ ಕರ್ನಾಟಕ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಿಗೆ ಪಿಂಚಣಿ ಕೊಡುತ್ತಿಲ್ಲ’ ಎಂದು ಆರೋಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.