ADVERTISEMENT

ಪ್ರಧಾನಮಂತ್ರಿ ಧನ–ಧಾನ್ಯ ಕೃಷಿ ಯೋಜನೆ: ರಾಜ್ಯದ ಆರು ಜಿಲ್ಲೆಗಳಲ್ಲಿ ಜಾರಿ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2025, 6:02 IST
Last Updated 12 ಅಕ್ಟೋಬರ್ 2025, 6:02 IST
ಹಾವೇರಿ ಜಿಲ್ಲೆಯ ಹನುಮನಮಟ್ಟಿ ಕೃಷಿ ಜ್ಞಾನ ಕೇಂದ್ರದಲ್ಲಿ ಶನಿವಾರ ಆಯೋಜಿಸಿದ್ದ ‘ಪ್ರಧಾನಮಂತ್ರಿ ಧನ-ಧಾನ್ಯ ಕೃಷಿ ಯೋಜನೆಗಳ ಉದ್ಘಾಟನೆ ಸಮಾರಂಭ’ದ ನೇರ ಪ್ರಸಾರದಲ್ಲಿ ಪಾಲ್ಗೊಂಡಿದ್ದ ಸಂಸದ ಬಸವರಾಜ ಬೊಮ್ಮಾಯಿ 
ಹಾವೇರಿ ಜಿಲ್ಲೆಯ ಹನುಮನಮಟ್ಟಿ ಕೃಷಿ ಜ್ಞಾನ ಕೇಂದ್ರದಲ್ಲಿ ಶನಿವಾರ ಆಯೋಜಿಸಿದ್ದ ‘ಪ್ರಧಾನಮಂತ್ರಿ ಧನ-ಧಾನ್ಯ ಕೃಷಿ ಯೋಜನೆಗಳ ಉದ್ಘಾಟನೆ ಸಮಾರಂಭ’ದ ನೇರ ಪ್ರಸಾರದಲ್ಲಿ ಪಾಲ್ಗೊಂಡಿದ್ದ ಸಂಸದ ಬಸವರಾಜ ಬೊಮ್ಮಾಯಿ    

ಹಾವೇರಿ: ಕೃಷಿ ಕ್ಷೇತ್ರದಲ್ಲಿ ರೈತರು ಎದುರಿಸುತ್ತಿರುವ ಹಲವು ಸವಾಲುಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ರೂಪಿಸಿರುವ ‘ಪ್ರಧಾನ ಮಂತ್ರಿ ಧನ–ಧಾನ್ಯ ಕೃಷಿ ಯೋಜನೆ’ಯನ್ನು ದೇಶದಾದ್ಯಂತ ಜಾರಿಗೊಳಿಸಲಾಗಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಆನ್‌ಲೈನ್ ಮೂಲಕ ಯೋಜನೆಗೆ ಶನಿವಾರ ಚಾಲನೆ ನೀಡಿದರು.

ಭಾರತದ ಕೃಷಿ ಕ್ಷೇತ್ರವು ಉತ್ತಮ ಸಾಮರ್ಥ್ಯ ಹೊಂದಿದ್ದರೂ ಕಡಿಮೆ ಉತ್ಪಾದಕತೆ, ಅಸಮರ್ಪಕ ನೀರಿನ ಬಳಕೆ, ನೀರಾವರಿ ಸೌಲಭ್ಯದ ಕೊರತೆ, ಸೀಮಿತ ಸಾಲ ಸೌಲಭ್ಯ ಮತ್ತು ಕೊಯ್ಲೋತ್ತರ ತಂತ್ರಜ್ಞಾನದ ಕೊರತೆ ಕಂಡುಬರುತ್ತಿದೆ. ಈ ಎಲ್ಲ ಸವಾಲುಗಳಿಗೆ ಉತ್ತರ ಕಂಡುಕೊಳ್ಳುವ ಉದ್ದೇಶದಿಂದ ಕೇಂದ್ರ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯಿಂದ ಈ ಹೊಸ ಯೋಜನೆ ರೂಪಿಸಲಾಗಿದೆ.

ಕಡಿಮೆ ಉತ್ಪಾದಕತೆ, ಮಧ್ಯಮ ಬೆಳೆ ಸಾಂದ್ರತೆ ಮತ್ತು ಸಾಲದ ವ್ಯತ್ಯಾಸವಿರುವ ದೇಶದ 100 ಜಿಲ್ಲೆಗಳಲ್ಲಿ ಮೊದಲ ಹಂತದಲ್ಲಿ ಯೋಜನೆ ಜಾರಿಗೊಳಿಸಲಾಗುತ್ತಿದೆ. ರಾಜ್ಯದ ಹಾವೇರಿ, ತುಮಕೂರು, ಚಿತ್ರದುರ್ಗ, ಕೊಪ್ಪಳ, ಗದಗ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳನ್ನು ಯೋಜನೆ ಜಾರಿಗಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ.

ADVERTISEMENT

ಯೋಜನೆಯ ಗುರಿಗಳು: ಕೃಷಿ ಉತ್ಪಾದಕತೆ ಹೆಚ್ಚಿಸುವುದು, ಬೆಳೆ ವೈವಿಧ್ಯತೆ ಮತ್ತು ಸುಸ್ಥಿರ ಕೃಷಿ, ಗ್ರಾಮ ಪಂಚಾಯಿತಿ ಮತ್ತು ವಲಯ ಮಟ್ಟದಲ್ಲಿ ಕೊಯ್ಲೋತ್ತರ ಸಂಗ್ರಹಣೆ ಹಾಗೂ ನೀರಾವರಿ ಸೌಲಭ್ಯದ ಸುಧಾರಣೆ, ಅಲ್ಫಾವಧಿ ಮತ್ತು ದೀರ್ಘಾವಧಿ ಸಾಲ ಸೌಲಭ್ಯ ಒದಗಿಸುವುದು ಈ ಯೋಜನೆಯ ಗುರಿಗಳಾಗಿವೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದರು.

ಕೇಂದ್ರ ಸರ್ಕಾರದ 11 ಇಲಾಖೆಗಳ ಯೋಜನೆಗಳನ್ನು ಒಂದೇ ವೇದಿಕೆಯಡಿ ಒಗ್ಗೂಡಿಸಲು ತೀರ್ಮಾನಿಸಲಾಗಿದೆ. ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ, ಕೃಷಿ ಸಂಶೋಧನೆ ಮತ್ತು ಶಿಕ್ಷಣ ಇಲಾಖೆ, ಮೀನುಗಾರಿಕೆ ಇಲಾಖೆ, ಪಶು ಸಂಗೋಪನಾ ಮತ್ತು ಪಶುಪಾಲನಾ ಇಲಾಖೆ, ಸಹಕಾರ ಸಚಿವಾಲಯ, ಜಲ ಸಂಪನ್ಮೂಲ, ನದಿ ಅಭಿವೃದ್ಧಿ ಮತ್ತು ಗಂಗಾ ಪುನರ್ಜೀವನ, ಆಹಾರ ಸಂಸ್ಕರಣೆ ಕೈಗಾರಿಕಾ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ, ಭೂ ಸಂಪನ್ಮೂಲ ಇಲಾಖೆ, ಕುಶಲಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯ ಹಾಗೂ ಸಣ್ಣ, ಅತೀ ಸಣ್ಣ ಮತ್ತು ಮಧ್ಯಮ ಉದ್ದಿಮೆಗಳ ಸಚಿವಾಲಯಗಳು ಒಂದೇ ವೇದಿಕೆಯಡಿ ಬರಲಿವೆ. ಈ ಇಲಾಖೆಯಡಿ ಜಿಲ್ಲಾಮಟ್ಟದಲ್ಲಿ ಸಮಿತಿ ರಚಿಸಲಾಗುತ್ತಿದೆ ಎಂದು ಹೇಳಿದರು.

ಜಿಲ್ಲಾ ಮಟ್ಟದ ಸಮಿತಿಗೆ ಜಿಲ್ಲಾಧಿಕಾರಿ ಅಧ್ಯಕ್ಷರಾಗಲಿದ್ದು, ಸಂಬಂಧಪಟ್ಟ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಸದಸ್ಯರಾಗಿರುತ್ತಾರೆ. ಸಮಿತಿಯಿಂದ ಆರಂಭದಲ್ಲಿ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ. ನಂತರ, ಬೆಳೆ ವೈವಿಧ್ಯತೆ ಮತ್ತು ಮಣ್ಣು ಸಂರಕ್ಷಣೆ, ಕೊಯ್ಲೋತ್ತರ ತಂತ್ರಜ್ಞಾನದ ಅಳವಡಿಕೆ, ಸುಸ್ಥಿರ ನೈಸರ್ಗಿಕ ಮತ್ತು ಸಾವಯವ ಕೃಷಿಯನ್ನು ಅಳವಡಿಸಿಕೊಂಡು ರೈತರ ಆದಾಯ ಮತ್ತು ಜೀವನೋಪಾಯ ಸುಧಾರಿಸಲು ಇಲಾಖೆಗಳು ಒತ್ತು ನೀಡಲಿವೆ ಎಂದು ತಿಳಿಸಿದರು.

‘ಕೃಷಿ ಕ್ಷೇತ್ರಕ್ಕೆ ಅಧಿಕ ಸಾಲ’

ಹಾವೇರಿ: ‘ದೇಶದ ರೈತರ ಸ್ಥಿತಿಗತಿ ಮನಗಂಡು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ‘ಪ್ರಧಾನಮಂತ್ರಿ ಧನ–ಧಾನ್ಯ ಕೃಷಿ ಯೋಜನೆ’ ಜಾರಿಗೊಳಿಸಿದ್ದಾರೆ. ಇದು ರೈತಪರವಾಗಿ ಯೋಜನೆ. ಮುಂಬರುವ ದಿನಗಳಲ್ಲಿ ಕೃಷಿ ಕ್ಷೇತ್ರಕ್ಕೆ ಸಿಬಿಲ್ ಸ್ಕೋರ್ ರಹಿತವಾಗಿ ಅಧಿಕ ಸಾಲ ಕೊಡಿಸಲಾಗುವುದು’ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಜಿಲ್ಲೆಯ ಹನುಮನಮಟ್ಟಿ ಕೃಷಿ ಜ್ಞಾನ ಕೇಂದ್ರದಲ್ಲಿ ಶನಿವಾರ ಆಯೋಜಿಸಿದ್ದ ‘ಪ್ರಧಾನಮಂತ್ರಿ ಧನ-–ಧಾನ್ಯ ಕೃಷಿ ಯೋಜನೆಗಳ ಉದ್ಘಾಟನೆ ಸಮಾರಂಭ’ದ ನೇರ ಪ್ರಸಾರದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ‘ದೇಶದ ಸಮಗ್ರ ಅಭಿವೃದ್ಧಿಗೆ ಕೃಷಿ ಕ್ಷೇತ್ರದ ಪಾತ್ರ ಪ್ರಮುಖವಾಗಿದೆ’ ಎಂದರು.

‘ಈ ಮೊದಲು ಕೃಷಿಗೆ ಶೇ. 14ರಷ್ಟು ವೆಚ್ಚ ಮಾಡಲಾಗುತ್ತಿತ್ತು. ಈ ಯೋಜನೆಯಿಂದ ಶೇ 28ರಷ್ಟು ವೆಚ್ಚ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಈ ಯೋಜನೆ ಅನುಷ್ಠಾನ ಸಮರ್ಪಕವಾಗಿ ಆಗಬೇಕು. ರೈತರಿಗೆ ಯೋಜನೆ ಮಾಹಿತಿಯ ಬಗ್ಗೆ ತರಬೇತಿ ನೀಡಬೇಕು’ ಎಂದರು.

‘ದೇಶದಲ್ಲಿ 130 ರಿಂದ 140 ಕೋಟಿ ಜನಸಂಖ್ಯೆಯಿದೆ. ಬೇರೆ ದೇಶಗಳಿಗಿಂತ ಭಾರತದಲ್ಲಿ ಹೆಚ್ಚಿನ ಸಂಖ್ಯೆ ಇದ್ದರೂ ಆರ್ಥಿಕ ಸಾಮಾಜಿಕ ಹಾಗೂ ಕಾನೂನು ವ್ಯವಸ್ಥೆ ಸುಭದ್ರವಾಗಿದೆ. ರೈತರಿಗೆ ಆರ್ಥಿಕ ಸಾಮಾಜಿಕ ಶೈಕ್ಷಣಿಕ ಸುಭದ್ರತೆ ಕೊಡಬೇಕಾಗಿದೆ. ಈ ನಿಟ್ಟಿನಲ್ಲಿ ನಾನು ಸಿ.ಎಂ.ಆಗಿದ್ದಾಗ ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ಯೋಜನೆ ಜಾರಿಗೆ ಮಾಡಿದ್ದೆ’ ಎಂದು ಹೇಳಿದರು.

ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಮಾತನಾಡಿ ‘ಕೃಷಿ ಕ್ಷೇತ್ರ ಹೆಚ್ಚು ಉದ್ಯೋಗ ಕೊಡುವ ಕ್ಷೇತ್ರ. ದೇಶದ ಜನಸಂಖ್ಯೆಯಲ್ಲಿ 70 ರಿಂದ 80 ಕೋಟಿ ಜನರು ಕೃಷಿಯಲ್ಲಿ ತೊಡಗಿಕೊಂಡಿದ್ದಾರೆ. ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಕೃಷಿಯೇ ಪ್ರಧಾನವಾಗಿದೆ. ಶೇ. 20ರಷ್ಟು ಕೃಷಿಯಿಂದ ಜಿಡಿಪಿ ಬರುತ್ತದೆ. ರೈತರ ಜೀವನ ಮಟ್ಟದ ಸುಧಾರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ಯೋಜನೆಗಳನ್ನು ಜಾರಿಗೆ ತಂದಿವೆ’ ಎಂದರು.

ಧಾರವಾಡ ಕೃಷಿ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯ ವೀರನಗೌಡ ಪೊಲೀಸಗೌಡ್ರ ಗ್ರಾ.ಪಂ. ಅಧ್ಯಕ್ಷೆ ಗೀತಾ ಮಡಿವಾಳರ ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕ ಮಲ್ಲಿಕಾರ್ಜುನ ಉಪ ನಿರ್ದೇಶಕರಾದ ಕರಿ ಯಲ್ಲಪ್ಪ ಶಿವಕುಮಾರ ಮಲ್ಲಾಡದ ಎಲ್ಲ ತಾಲ್ಲೂಕಿನ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.