ADVERTISEMENT

‘1.11 ಲಕ್ಷ ಹಕ್ಕು ಪತ್ರ: ಜಿಲ್ಲೆಗೊಬ್ಬ ನೋಡಲ್ ಅಧಿಕಾರಿ’

ಜಿಲ್ಲೆಯಲ್ಲಿ ಫೆ. 13ರಂದು ಸಾಧನಾ ಸಮಾವೇಶ: ಬೆಂಗಳೂರಿನಲ್ಲಿ ಪೂರ್ವಭಾವಿ ಸಭೆ

​ಪ್ರಜಾವಾಣಿ ವಾರ್ತೆ
Published 31 ಜನವರಿ 2026, 9:28 IST
Last Updated 31 ಜನವರಿ 2026, 9:28 IST
ಹಾವೇರಿಯಲ್ಲಿ ಫೆ. 13ರಂದು ನಡೆಯುವ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶದ ಪೂರ್ವಭಾವಿ ಸಭೆಯು ಬೆಂಗಳೂರಿನ ವಿಕಾಸಸೌಧದಲ್ಲಿ ಶುಕ್ರವಾರ ನಡೆಯಿತು
ಹಾವೇರಿಯಲ್ಲಿ ಫೆ. 13ರಂದು ನಡೆಯುವ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶದ ಪೂರ್ವಭಾವಿ ಸಭೆಯು ಬೆಂಗಳೂರಿನ ವಿಕಾಸಸೌಧದಲ್ಲಿ ಶುಕ್ರವಾರ ನಡೆಯಿತು   

ಹಾವೇರಿ: ನಗರದಲ್ಲಿ ಫೆ. 13ರಂದು ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ ಹಮ್ಮಿಕೊಳ್ಳಲು ಸಿದ್ಧತೆ ನಡೆಯುತ್ತಿದೆ. ಅಂದು ಸಮಾರಂಭದಲ್ಲಿ 1.11 ಲಕ್ಷ ಮಂದಿಗೆ ಹಕ್ಕು ಪತ್ರ ವಿತರಿಸಲಾಗುತ್ತಿದ್ದು, ಇದರ ತಯಾರಿಯ ಜವಾಬ್ದಾರಿ ನಿರ್ವಹಿಸಲು ಜಿಲ್ಲೆಗೊಬ್ಬ ನೋಡಲ್ ಅಧಿಕಾರಿಯನ್ನು ನೇಮಿಸಲಾಗಿದೆ.

ಸಾಧನಾ ಸಮಾವೇಶದ ಸಿದ್ಧತೆ ಕೆಲಸಗಳನ್ನು ಪರಿಶೀಲಿಸಲು ಸಚಿವರ ನೇತೃತ್ವದಲ್ಲಿ ಬೆಂಗಳೂರಿನ ವಿಕಾಸಸೌಧದಲ್ಲಿ ಶುಕ್ರವಾರ ಪೂರ್ವಭಾವಿ ಸಭೆ ನಡೆಸಲಾಯಿತು.

ಕಂದಾಯ ಹಕ್ಕು ಪತ್ರ, ದರಖಾಸ್ತು ಪೋಡಿ, ಪೋಡಿ ಮುಕ್ತ ಗ್ರಾಮ, ಪೌತಿ ಖಾತೆ ಸೇರಿದಂತೆ ಹಲವು ಸವಲತ್ತುಗಳ ವಿತರಣೆಗೆ ಇದುವರೆಗೆ ಆಗಿರುವ ಸಿದ್ದತೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಕಂದಾಯ ಸಚಿವ ಕೃಷ್ಣಬೈರೇಗೌಡ, ‘ಅರ್ಹರಿಗೆ ಹಕ್ಕು ಪತ್ರ ವಿತರಿಸಬೇಕು. ಹಕ್ಕುಪತ್ರ ವಿತರಣೆಯಲ್ಲಿ ಯಾವುದೇ ಲೋಪವಾಗಬಾರದು. ಹಕ್ಕುಪತ್ರ ನಿರ್ವಹಣೆಗಾಗಿ ಪ್ರತಿ ಜಿಲ್ಲೆಗೊಬ್ಬರಂತೆ ನೋಡಲ್‌ ಅಧಿಕಾರಿಗಳನ್ನು ನೇಮಕ ಮಾಡಬೇಕು’ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ADVERTISEMENT

‘ಹಾವೇರಿ ಸುತ್ತಮುತ್ತಲಿನ ಜಿಲ್ಲೆಗಳು ಮಾತ್ರವಲ್ಲದೇ, ರಾಜ್ಯದ ಎಲ್ಲ ಜಿಲ್ಲೆಗಳಿಂದಲೂ ಫಲಾನುಭವಿಗಳು ಸಮಾವೇಶಕ್ಕೆ ಬರಲಿದ್ದಾರೆ. ಎಲ್ಲರಿಗೂ ಹಕ್ಕು ಪತ್ರವನ್ನು ವ್ಯವಸ್ಥಿತವಾಗಿ ವಿತರಣೆ ಮಾಡಲು ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಹೇಳಿದರು.

‘ರಾಜ್ಯ ಸರ್ಕಾರ ಸಾವಿರ ದಿನಗಳ ಆಡಳಿತವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಸಂದರ್ಭದಲ್ಲಿ ಫೆ. 13ರಂದು ಹಾವೇರಿಯಲ್ಲಿ ಸಾಧನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶವನ್ನು ಎಲ್ಲರೂ ಸೇರಿ ಸ್ಮರಣೀಯವಾಗಿಸಬೇಕು. ರಾಷ್ಟ್ರೀಯ ನಾಯಕರನ್ನೂ ಸರ್ಕಾರದ ಸಾಧನಾ ಸಮಾವೇಶಕ್ಕೆ ಆಹ್ವಾನಿಸಬೇಕು’ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಮಾತನಾಡಿ, ‘ಈ ಹಿಂದೆ ವಿಜಯನಗರದಲ್ಲಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜನೆ ಮಾಡಲಾಗಿತ್ತು. ನಿರೀಕ್ಷೆ ಮೀರಿ ರಾಜ್ಯದ ವಿವಿಧ ಭಾಗಗಳಿಂದ ಜನ ಆಗಮಿಸಿದ್ದರು. ಕಾರ್ಯಕ್ರಮ ನಗರ ಪ್ರದೇಶದಲ್ಲಿ ಆಯೋಜನೆ ಮಾಡಿದ್ದರಿಂದ, ಅನೇಕ ಜನರಿಗೆ ಸಮಾವೇಶದ ಸ್ಥಳಕ್ಕೆ ಆಗಮಿಸಲು ಸಮಸ್ಯೆಯಾಯಿತು. ಹಾವೇರಿಯಲ್ಲಿ ಹೊರವಲಯದಲ್ಲಿ ಕಾರ್ಯಕ್ರಮ ಆಯೋಜನೆ ಮಾಡುತ್ತಿರುವುದರಿಂದ, ಅಂತಹ ಸಮಸ್ಯೆಯಾಗುವುದಿಲ್ಲ. ನಗರ ಪ್ರದೇಶದ ಚಟವಟಿಕೆ ಮೇಲೂ ಯಾವುದೇ ಪರಿಣಾಮ ಬೀರುವುದಿಲ್ಲ’ ಎಂದರು.

‘ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಸೇರಿದಂತೆ ಹಲವು ಸಚಿವರು ಭಾಗವಹಿಸಿದ್ದ ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಹಿಮ್ಸ್) ಉದ್ಘಾಟನಾ ಕಾರ್ಯಕ್ರಮ ತುಂಬಾ ಅಚ್ಚುಕಟ್ಟಾಗಿ ನಡೆಯಿತು. ಅದೇ ಅಚ್ಚುಕಟ್ಟು ಮತ್ತು ಶಿಸ್ತಿನಿಂದ ಸಾವಿರ ದಿನಗಳ ಸಾಧನಾ ಸಮಾವೇಶ ನಡೆಸಲು ಅಧಿಕಾರಿಗಳು ಸಿದ್ದತೆ ಮಾಡಿಕೊಳ್ಳಬೇಕು’ ಎಂದು ಹೇಳಿದರು.

ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಮಾತನಾಡಿ, ‘ಹಾವೇರಿ ಹೊರವಲಯದಲ್ಲಿರುವ ಅಜ್ಜಯ್ಯ ಸ್ವಾಮಿ ದೇವಸ್ಥಾನ ಎದುರಿನ ಖುಲ್ಲಾ ಜಾಗದಲ್ಲಿ ಸಮಾವೇಶಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇದೇ ಸ್ಥಳದಲ್ಲಿ ಸಾಹಿತ್ಯ ಸಮ್ಮೇಳನ ಆಯೋಜನೆ ಮಾಡಲಾಗಿತ್ತು. ಈಗಾಗಲೇ ವೇದಿಕೆ ನಿರ್ಮಾಣ ಬಹುತೇಕ ಅಂತಿಮ ಹಂತಕ್ಕೆ ಬಂದಿದೆ. ವೇದಿಕೆ ಪಕ್ಕದಲ್ಲೇ ಅತೀ ಗಣ್ಯರು ಮತ್ತು ಗಣ್ಯರ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ’ ಎಂದರು.

ಜಿಲ್ಲೆಯ ಶಾಸಕರಾದ ರುದ್ರಪ್ಪ ಲಮಾಣಿ, ಬಸವರಾಜ ಶಿವಣ್ಣನವರ, ಯು.ಬಿ. ಬಣಕಾರ, ಶ್ರೀನಿವಾಸ ಮಾನೆ, ಪ್ರಕಾಶ ಕೋಳಿವಾಡ, ಯಾಸೀರ ಅಹ್ಮದ್ ಖಾನ್ ಪಠಾಣ, ಕಂದಾಯ ಇಲಾಖೆ ಆಯುಕ್ತೆ ಮೀನಾ ನಾಗರಾಜ್‌ ಹಾಗೂ ಇತರರು ಸಭೆಯಲ್ಲಿದ್ದರು.

‘ನಾಲ್ಕು ಹೆಲಿಪ್ಯಾಡ್ ನಿರ್ಮಾಣ’ ‘ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲು ಹಲವರು ಹೆಲಿಕಾಪ್ಟರ್ ಮೂಲಕ ಬರಲಿದ್ದಾರೆ. ಇದಕ್ಕಾಗಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಹಿಮ್ಸ್) ಆವರಣದಲ್ಲಿ ನಾಲ್ಕು ಕಡೆ ಹೆಲಿಪ್ಯಾಡ್ ನಿರ್ಮಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಅವರು ಸಭೆಗೆ ಮಾಹಿತಿ ನೀಡಿದರು. ‘ಹುಬ್ಬಳ್ಳಿ ಕಡೆಯಿಂದ ಬರುವವರ ಬೈಕ್‌ ಮತ್ತು ಇತರ ವಾಹನಗಳಿಗೆ ಪ್ರತ್ಯೇಕ ಹಾಗೂ ದಾವಣಗೆರೆ ಕಡೆಯಿಂದ ಬರುವವವರಿಗೆ ಪ್ರತ್ಯೇಕವಾಗಿ ಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.