ರಾಣೆಬೆನ್ನೂರು: ರೈತರು ಕೃಷಿಯ ಜತೆಗೆ ಹೈನುಗಾರಿಕೆಯನ್ನು ಉಪಕಸಬು ಮಾಡಿಕೊಂಡು ಆರ್ಥಿಕ ಅಭಿವೃದ್ಧಿ ಹೊಂದಬೇಕು. ವೈಜ್ಞಾನಿಕ ರೀತಿಯಲ್ಲಿ ಹೈನುಗಾರಿಕೆ ನಿರ್ವಹಣೆ ಮೂಲಕ ಲಾಭದಾಯಕ ಉದ್ಯೋಗವನ್ನಾಗಿ ಮಾಡಿಕೊಳ್ಳಬಹುದು’ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.
ತಾಲ್ಲೂಕಿನ ಹುಲಿಕಟ್ಟಿ ಗ್ರಾಮದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಸೇವಾ ಇಲಾಖೆಯಿಂದ ಗುರುವಾರ ಹಮ್ಮಿಕೊಂಡಿದ್ದ ಹಾಲು ಕರೆಯುವ ಸ್ಪರ್ಧೆ ಹಾಗೂ ಕರುಗಳ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದರು.
ಹಾಲು ಕೊಡುವ ಜಾನುವಾರುಗಳಿಗೆ ಪಶು ಆಹಾರ ಸೇರಿದಂತೆ ಉತ್ತಮ ಆಹಾರವನ್ನು ನೀಡಿ, ಸರಿಯಾಗಿ ಪೋಷಣೆ ಮಾಡಬೇಕು. ಉತ್ತಮ ರಾಸುಗಳನ್ನು ವೈಜ್ಞಾನಿಕವಾಗಿ ನಿರ್ವಹಣೆ ಮಾಡುವ ಮೂಲಕ ಆರ್ಥಿಕವಾಗಿ ಸಬಲರಾಗಬೇಕು. ಜಾನುವಾರುಗಳಿಗೆ ಕಾಲಕಾಲಕ್ಕೆ ಚಿಕಿತ್ಸೆ ಕೊಡಿಸಬೇಕು. ಕರುಗಳ ಪೋಷಣೆ ಅಲಕ್ಷ್ಯ ಮಾಡದೇ ಪೋಷಕಾಂಶ, ಆಹಾರ ನೀಡಿದಾಗ ಉತ್ತಮ ಲಾಭ ಗಳಿಸಲು ಸಾಧ್ಯ ಎಂದರು.
ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ಎಸ್.ವಿ.ಸಂತಿ ಮಾತನಾಡಿ, ರೈತರಿಗೆ ಜಾನುವಾರು ಸಾಕಾಣಿಗೆ ಮತ್ತಷ್ಟು ಉತ್ತೇಜನ ಸಿಗಲಿ, ಸ್ಪರ್ಧಾತ್ಮಕ ಭಾವನೆ ಬೆಳೆಯಲಿ ಎಂಬ ಉದ್ದೇಶದಿಂದ ಹಾಲು ಕರೆಯುವ ಸ್ಪರ್ಧೆ ಹಾಗೂ ಕರುಗಳ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಹೇಳಿದರು.
ಹಾಲು ಕರೆಯುವ ಸ್ಪರ್ಧೆಯಲ್ಲಿ ಪಾಲ್ಗೊಂಡು ಹೆಚ್ಚು ಹಾಲು ಕೊಡುವ ರಾಸುಗಳಿಗೆ ಬಹುಮಾನ ನೀಡಲಾಯಿತು.
ಸಹಾಯಕ ನಿರ್ದೇಶಕ ಡಾ.ನೀಲಕಂಠ ಅಂಗಡಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸವಿತಾ ಮಂಜುನಾಥ ಬಜಾರಿ, ಉಪಾಧ್ಯಕ್ಷೆ ಶಶಿಕಲಾ ಜಗದೀಶಗೌಡ ಕೋಟೆಗೌಡ್ರ, ಮುಖ್ಯ ಪಶುವೈಧ್ಯಾಧಿಕಾರಿ ಡಾ.ರಾಘವೇಂದ್ರ ಕಿತ್ತೂರ, ಪಶುವೈದ್ಯರು, ಸಿಬ್ಬಂದಿ ಹಾಗೂ ಗ್ರಾಮಸ್ಥರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.