ಹಾವೇರಿ: ಶಿಕ್ಷಣ ಸೇರಿದಂತೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ಬೆಳೆಯಲು ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಸರಿಯಾಗಿ ಬಳಕೆ ಮಾಡಿಕೊಂಡು ಸಾಧನೆ ಮಾಡುವಂತೆ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಸಲಹೆ ನೀಡಿದರು.
ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಸೋಮವಾರ ತಾಲ್ಲೂಕಿನ ಕೆರಿಮತ್ತಿಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಡಿ.ದೇವರಾಜ ಅರಸು ಸ್ನಾತಕೋತ್ತರ ಮಹಿಳಾ ವಿದ್ಯಾರ್ಥಿಗಳ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.
ಈ ಸುಸಜ್ಜಿತ ವಿದ್ಯಾರ್ಥಿ ನಿಲಯ ಕಟ್ಟಡಕ್ಕೆ ₹3.50 ಕೋಟಿ ವೆಚ್ಚ ಮಾಡಲಾಗಿದೆ. ಕಟ್ಟಡದ ಸೌಂದರ್ಯ ಕಾಪಾಡುವ ಜೊತೆಗೆ ಸುರಕ್ಷತೆಗೆ ಆದ್ಯತೆ ನೀಡುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಸರ್ಕಾರ ಮಹಿಳೆಯರ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದೆ ಹಾಗೂ ಮಹಿಳೆಯರ ಶ್ರೇಯೋಭಿವೃದ್ಧಿಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಏಕನಾಥ ಭಾನುವಳ್ಳಿ ಮಾತನಾಡಿ, ‘ಎಲ್ಲ ಮಹಿಳೆಯರಿಗೂ ಸಮಾನ ಸ್ಥಾನಮಾನ ಸಿಗಬೇಕು. ಈ ಹಿಂದೆ ವಿದ್ಯಾರ್ಥಿ ನಿಲಯಗಳು ಬಾಡಿಗೆ ಕಟ್ಟದಲ್ಲಿ ನಡೆಸಲಾಗುತ್ತಿದ್ದು, ಹಾಗಾಗಿ ಮೂಲಸೌಕರ್ಯಗಳ ಕೊರತೆ ಕಾಡುತ್ತಿತ್ತು. ಇಂದು ಸ್ವಂತ ಕಟ್ಟಡದ ಜತೆಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗಿದೆ ಎಂದರು.
ಜಿ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ಶಿವಾನಂದ ಕನ್ನಪ್ಪಳವರ, ಆಲದಕಟ್ಟಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನಿಂಗಪ್ಪ ನಿಂಬಕ್ಕನವರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಎಚ್.ಎ.ಜಮಖಾನೆ, ಪಿ.ಜಿ. ಸೆಂಟರ್ ಪ್ರಭಾರ ಆಡಳಿತಾಧಿಕಾರಿ ಪ್ರಶಾಂತ್ ಎಚ್.ವೈ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.