
ಹಾವೇರಿ: ‘ಇಲ್ಲಿಯ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ಗಳಲ್ಲಿ ಅವ್ಯವಸ್ಥೆ ಹೆಚ್ಚಾಗಿದ್ದು, ವಿದ್ಯಾರ್ಥಿಗಳು ನಿತ್ಯವೂ ನರಕಯಾತನೆ ಅನುಭವಿಸುತ್ತಿದ್ದಾರೆ’ ಎಂದು ಆರೋಪಿಸಿ ಹಾಸ್ಟೆಲ್ ವಿದ್ಯಾರ್ಥಿಗಳು ಗುರುವಾರ ದಿಢೀರ್ ಪ್ರತಿಭಟನೆ ನಡೆಸಿದರು.
ನಗರದ ಹಳೇ ಪಿ.ಬಿ.ರಸ್ತೆ ಬಳಿ ಇರುವ ಹಾಸ್ಟೆಲ್ ಎದುರು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಅಲ್ಲಿಂದ ವಾಲ್ಮೀಕಿ ವೃತ್ತದಲ್ಲಿರುವ ಲೋಕಾಯುಕ್ತ ಕಚೇರಿಯವರೆಗೂ ಮೆರವಣಿಗೆ ನಡೆಸಿದರು. ಎಸ್ಎಫ್ಐ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
‘ಹಾಸ್ಟೆಲ್ಗಳಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಸೌಲಭ್ಯ ಸಿಗುತ್ತಿಲ್ಲ. ಹೊಸ ಬೆಡ್ಗಳು, ಬಕೆಟ್ಗಳು ಹಾಗೂ ಇತರೆ ಸಾಮಗ್ರಿಗಳು ಬಂದು ನಾಲ್ಕು ತಿಂಗಳಾಗಿದೆ. ಅದನ್ನು ಇದುವರೆಗೂ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಿಲ್ಲ. ಹಾಸ್ಟೆಲ್ನಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾಗಳಿಲ್ಲ. ಗ್ರಂಥಾಲಯ, ಕಂಪ್ಯೂಟರ್ ಕಚೇರಿಗೂ ಬೀಗ ಹಾಕಲಾಗಿದೆ. ವಿದ್ಯಾರ್ಥಿಗಳ ಬಳಕೆಗೆ ನೀಡಲು ಹಿಂದೇಟು ಹಾಕುತ್ತಿದ್ದಾರೆ’ ಎಂದು ವಿದ್ಯಾರ್ಥಿಗಳು ದೂರಿದರು.
‘ಹಾಸ್ಟೆಲ್ನಲ್ಲಿರುವ ಅವ್ಯವಸ್ಥೆಯನ್ನು ಸರಿಪಡಿಸಬೇಕು. ವಿದ್ಯಾರ್ಥಿಗಳಿಗೆ ಬಂದಿರುವ ಎಲ್ಲ ವಸ್ತುಗಳನ್ನು ತ್ವರಿತವಾಗಿ ವಿತರಿಸಬೇಕು. ಕಂಪ್ಯೂಟರ್ ಹಾಗೂ ಗ್ರಂಥಾಲಯದ ಕೊಠಡಿಗೆ ಹಾಕಿರುವ ಬೀಗವನ್ನು ತೆರೆದು ವಿದ್ಯಾರ್ಥಿಗಳ ಬಳಕೆಗೆ ನೀಡಬೇಕು’ ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.