ADVERTISEMENT

ಮನೆ ಹಾನಿ: ಶೀಘ್ರ ವರದಿ ನೀಡಿ

ಅತಿವೃಷ್ಟಿ–ಪ್ರವಾಹ: ಚರಂಡಿ, ಕಾಲುವೆ ಸ್ವಚ್ಛತೆಗೆ ಸಚಿವ ಬೊಮ್ಮಾಯಿ ಸೂಚನೆ

​ಪ್ರಜಾವಾಣಿ ವಾರ್ತೆ
Published 23 ಜೂನ್ 2021, 16:27 IST
Last Updated 23 ಜೂನ್ 2021, 16:27 IST
ಹಾವೇರಿಯ ಗಾಂಧಿಪುರದ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಬುಧವಾರ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಉಚಿತ ‘ಟ್ಯಾಬ್ಲೆಟ್‌ ಪಿಸಿ’ಯನ್ನು ಸಚಿವ ಬಸವರಾಜ ಬೊಮ್ಮಾಯಿ ವಿತರಣೆ ಮಾಡಿದರು 
ಹಾವೇರಿಯ ಗಾಂಧಿಪುರದ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಬುಧವಾರ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಉಚಿತ ‘ಟ್ಯಾಬ್ಲೆಟ್‌ ಪಿಸಿ’ಯನ್ನು ಸಚಿವ ಬಸವರಾಜ ಬೊಮ್ಮಾಯಿ ವಿತರಣೆ ಮಾಡಿದರು    

ಹಾವೇರಿ: ಮಳೆ ಹಾಗೂ ಪ್ರವಾಹದ ನೀರು ಗ್ರಾಮದಿಂದ ಸರಾಗವಾಗಿ ಹರಿದು ಹೋಗುವಂತೆ ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ಮುಖ್ಯ ಕಾಲುವೆಗಳ ನಿರ್ಮಾಣ, ಚರಂಡಿ ದುರಸ್ತಿ ಕಾಮಗಾರಿ ಕೈಗೊಳ್ಳುವಂತೆ ಪಂಚಾಯತ್ ರಾಜ್ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ಮುಂಗಾರು ಬಿತ್ತನೆ ಸ್ಥಿತಿಗತಿಗಳ ಕುರಿತ ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದರು. ಉದ್ಯೋಗ ಖಾತ್ರಿಯಲ್ಲಿ ಮಾನವ ದಿನಗಳ ಸೃಜನೆಯ ಜೊತೆಗೆ ನೈಸರ್ಗಿಕ ಸಂಪನ್ಮೂಲಗಳ ಸೃಜನೆ ಆಗಬೇಕು ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಸೂಚನೆ ನೀಡಿದರು.

ಮಳೆಗಾಲ ಮುಗಿಯುವ ಮುನ್ನ ಬರುವ ನವೆಂಬರ್‌ ಹಾಗೂ ಡಿಸೆಂಬರ್‌ ತಿಂಗಳೊಳಗೆ ಈ ವರ್ಷದ ಯೋಜನೆಯಲ್ಲಿ ಮಂಜೂರಾದ ಕುಡಿಯುವ ನೀರು, ಬಹುಗ್ರಾಮ ಯೋಜನೆ ಸೇರಿದಂತೆ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಹಾಗೂ ಜಿಲ್ಲಾ ಪಂಚಾಯಿತಿ, ಲೋಕೋಪಯೋಗಿ ಇಲಾಖೆಯ ರಸ್ತೆ ಕಾಮಗಾರಿಗಳು ಪೂರ್ಣಗೊಳಿಸಬೇಕು ಎಂದರು.

ADVERTISEMENT

ಮಳೆಯಿಂದ ಹಾನಿಯಾದ ಮನೆಗಳಿಗೆ 24 ತಾಸಿನಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಿ ಫೋಟೋಸಹಿತ ವರದಿಯನ್ನು ನೀಡಬೇಕು. ಎಂಜಿನಿಯರ್‌, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಲೆಕ್ಕಾಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಬೇಕು ಎಂದರು.

ಗೊಬ್ಬರ ದಾಸ್ತಾನಿಗೆ ಸೂಚನೆ

ಜಿಲ್ಲೆಯಲ್ಲಿ ಮಳೆಯ ಪ್ರಮಾಣ, ಬಿತ್ತನೆ ಬೀಜ ಮತ್ತು ಗೊಬ್ಬರ ಅವಶ್ಯಕತೆ ಕುರಿತು ಮಾಹಿತಿ ಪಡೆದುಕೊಂಡ ಸಚಿವರು, ಆಗಸ್ಟ್ ಮಾಹೆವರೆಗೆ ಬೇಕಾದ 50 ಸಾವಿರ ಮೆಟ್ರಿಕ್ ಟನ್ ಯೂರಿಯಾ ಗೊಬ್ಬರವನ್ನು ತರಿಸಿ ದಾಸ್ತಾನು ಮಾಡಿಕೊಳ್ಳಲು ಸೂಚನೆ ನೀಡಿದರು. ಈ ಕುರಿತಂತೆ ಕೃಷಿ ಆಯುಕ್ತರಿಗೆ ತಕ್ಷಣ ಪತ್ರ ಬರೆಯಿರಿ. ವಿತರಕರಿಗೆ ಮಾತನಾಡಿ ದಾಸ್ತಾನು ತರಿಸಿಕೊಳ್ಳಿ. ಸಂಬಂಧಿಸಿದವರ ಜೊತೆ ಮಾತನಾಡುವುದಾಗಿ ಸೂಚನೆ ನೀಡಿದರು.

ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ

ಹಾವೇರಿ: ವಿದ್ಯಾರ್ಥಿಗಳು ಆಧುನಿಕ ತಂತ್ರಜ್ಞಾನದ ಬಳಕೆ ಮಾಡಿಕೊಂಡು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು ಎಂದು ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಗಾಂಧಿಪುರದ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ‘ಸ್ಮಾರ್ಟ್ ಕರ್ನಾಟಕ’ 2021-22 ಯೋಜನೆಯ ಡಿಜಟಲ್ ಕಲಿಕೆಯ ಅಂಗವಾಗಿ ಸ್ಥಾಪಿಸಲಾದ ನೂತನ ಸ್ಮಾರ್ಟ್ ಕ್ಲಾಸ್ ಕೊಠಡಿ ಉದ್ಘಾಟಿಸಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಉಚಿತ ‘ಟ್ಯಾಬ್ಲೆಟ್‌ ಪಿಸಿ’ ವಿತರಣೆ ಮಾಡಿ ಅವರು ಮಾತನಾಡಿದರು.

ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಟ್ಯಾಬ್ ನೀಡಲಾಗುವುದು ಹಾಗೂ 2,500 ಸ್ಮಾರ್ಟ್ ಕ್ಲಾಸ್ ನೀಡಲಾಗಿದೆ. ಮುಂಬರುವ ದಿನಗಳಲ್ಲಿ 5000 ಸ್ಮಾರ್ಟ್ ಕ್ಲಾಸ್ ನೀಡಲಾಗುವುದು. ಮುಂದಿನ ಎರಡು ವರ್ಷದಲ್ಲಿ ಸಂಪೂರ್ಣ ಡಿಜಿಟಲೀಕಣ ಶಿಕ್ಷಣವನ್ನು ನೀಡುವ ಉದ್ದೇಶವನ್ನು ಹೊಂದಲಾಗಿದೆ ಎಂದು ಹೇಳಿದರು.

ಶ್ಯಾಮಪ್ರಸಾದ್ ಮುಖರ್ಜಿ ಅವರ ಪುಣ್ಯತಿಥಿ ನಿಮಿತ್ತಕಾಲೇಜು ಆವರಣದಲ್ಲಿ ಸಸಿ ನೆಟ್ಟು ನೀರುಣಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.