ADVERTISEMENT

ತಾರತಮ್ಯ ಅಳಿಯಲಿ, ಸಮಾನತೆ ಬೆಳೆಯಲಿ: ಎಡಿಸಿ ಯೋಗೇಶ್ವರ ಅಭಿಮತ

ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ಫೋನ್‌ ವಿತರಣೆ: ಎಡಿಸಿ ಯೋಗೇಶ್ವರ ಅಭಿಮತ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2020, 14:43 IST
Last Updated 12 ಅಕ್ಟೋಬರ್ 2020, 14:43 IST
ಅಂತರರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಅಂಗವಾಗಿ ಹಾವೇರಿಯಲ್ಲಿ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ‘ಬೇಟಿ ಬಚಾವೋ ಬೇಟಿ ಪಢಾವೋ’ ಕಾರ್ಯಕ್ರಮ ಉದ್ಘಾಟಿಸಲಾಯಿತು 
ಅಂತರರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಅಂಗವಾಗಿ ಹಾವೇರಿಯಲ್ಲಿ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ‘ಬೇಟಿ ಬಚಾವೋ ಬೇಟಿ ಪಢಾವೋ’ ಕಾರ್ಯಕ್ರಮ ಉದ್ಘಾಟಿಸಲಾಯಿತು    

ಹಾವೇರಿ: ‘ಲಿಂಗ ತಾರತಮ್ಯ ಮಾಡದೇ ಹೆಣ್ಣು ಮಕ್ಕಳನ್ನು ಗಂಡು ಮಕ್ಕಳಂತೆ ಸಮಾನತೆಯಿಂದ ಕಾಣಬೇಕು. ಹೆಣ್ಣು ಜನಿಸಿದರೆ ಶಾಪ, ಗಂಡು ಜನಿಸಿದರೆ ಮೋಕ್ಷ ಎನ್ನುವ ಭಾವನೆ ಸಮಾಜದಲ್ಲಿ ತಲೆದೋರಿದೆ.ಇಂತಹ ವಾತಾವರಣ ದೂರವಾಗಬೇಕಾಗಿದೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಯೋಗೇಶ್ವರ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಅಂತರರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಅಂಗವಾಗಿ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ‘ಬೇಟಿಬಚಾವೋ ಬೇಟಿ ಪಢಾವೋ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪೋಷಣ ಅಭಿಯಾನ ಯೋಜನೆಯಡಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ವಿತರಿಸಿ ಅವರು ಮಾತನಾಡಿದರು.

ಸುಕನ್ಯಾ ಸಮೃಧ್ಧಿ ಯೋಜನೆ, ಭಾಗ್ಯಲಕ್ಷ್ಮೀ ಯೋಜನೆ, ಕಡಿಮೆ ಬಡ್ಡಿದರದಲ್ಲಿ ಬ್ಯಾಂಕಿನಲ್ಲಿ ಸಾಲ ಸೌಲಭ್ಯ, ಹೀಗೆ ಮಹಿಳೆಯರಿಗೆ ಸರ್ಕಾರದಿಂದ ಸಾಕಷ್ಟು ಬಗೆಯಲ್ಲಿ ಅನುಕೂಲ ಕಲ್ಪಿಸಿ ಹೆಣ್ಣು ಮಕ್ಕಳಿಗೆ ಹೆಚ್ಚಿನ ಆದ್ಯತೆ ನೀಡಿ ಸಮಾಜದಲ್ಲಿ ಗೌರವ ಒದಗಿಸಲಾಗುತ್ತಿದೆ ಎಂದರು.

ADVERTISEMENT

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಪರಶುರಾಮ ವೈ. ಶೆಟ್ಟಪ್ಪನವರ ಮಾತನಾಡಿ, ‘ಜಿಲ್ಲೆಯಲ್ಲಿ ಹೆಣ್ಣು ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಹಲವು ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದು ಹೇಳಿದರು.

ಸನ್ಮಾನ: ಬಾಲ್ಯ ವಿವಾಹ ತಡೆಯಲು ಶ್ರಮಿಸಿದ ಜಿಲ್ಲೆಯ ಪ್ರತಿ ತಾಲೂಕಿನ ಆಯ್ದ ಮೂರು ಅಂಗನವಾಡಿಗಳಿಗೆ ತಲಾ ₹5 ಸಾವಿರ ಚೆಕ್ ವಿತರಿಸಿ ಸನ್ಮಾನಿಸಲಾಯಿತು. ಕೊರೊನಾ ವಾರಿಯರ್ಸ್ ಆಗಿ ಸೇವೆ ಸಲ್ಲಿಸಿದ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸನ್ಮಾನಿಸಲಾಯಿತು.

ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ 15 ವಿದ್ಯಾರ್ಥಿನಿಯರಿಗೆ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ 15 ವಿದ್ಯಾರ್ಥಿನಿಯರಿಗೆ ತಲಾ ₹5 ಸಾವಿರ ಮೊತ್ತದ ಚೆಕ್ ಹಾಗೂ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು. ಸಮಾರಂಭದಲ್ಲಿ ಡಿಡಿಪಿಐ ಅಂದಾನಪ್ಪ ವಡಗೇರಿ, ಡಿಡಿಪಿಯು ನಾಗರಾಜ ಎನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ಅಣ್ಣಪ್ಪ ಹೆಗಡೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.