ಹಾವೇರಿ: ಕೋವಿಡ್ ಲಾಕ್ಡೌನ್ನಿಂದ ಆರ್ಥಿಕವಾಗಿ ಸಂಕಷ್ಟದಲ್ಲಿದ್ದೇವೆ. ಹಾಗಾಗಿ ಈ ಬಾರಿ ಶಾಲಾ ಶುಲ್ಕವನ್ನು ಕಡಿಮೆ ಮಾಡಬೇಕು ಎಂದು ವಿದ್ಯಾರ್ಥಿಗಳ ಪೋಷಕರು ನಗರದ ಸೇಂಟ್ ಆ್ಯನ್ಸ್ ಶಾಲೆ ಮುಖ್ಯ ಶಿಕ್ಷಕರಿಗೆ ಶನಿವಾರ ಮನವಿ ಸಲ್ಲಿಸಿದರು.
ಕಳೆದ ವರ್ಷದಷ್ಟೇ ಶಾಲಾ ಶುಲ್ಕ ಕಟ್ಟಲು ಹೇಳುತ್ತಿದ್ದಾರೆ. ಶುಲ್ಕ ಕಟ್ಟದೇ ಇದ್ದ ವಿದ್ಯಾರ್ಥಿಗಳಿಗೆ ಆನ್ಲೈನ್ ಅಭ್ಯಾಸ ನಡೆಸುವುದಿಲ್ಲ ಹಾಗೂ ಪರೀಕ್ಷೆಗಳಿಗೆ ಅವಕಾಶ ಕಲ್ಪಿಸುವುದಿಲ್ಲ ಎಂದು ಸಂದೇಶ ಕಳುಹಿಸುತ್ತಿದ್ದಾರೆ. ಕೊರೊನಾದಿಂದ ಇಡೀ ಜಗತ್ತೇ ಆರ್ಥಿಕ ಸಂಕಷ್ಟದಲ್ಲಿ ಮುಳುಗಿದೆ. ಇಂಥ ಸಂದರ್ಭದಲ್ಲಿ ಬಡ ಮತ್ತು ಮಧ್ಯಮ ವರ್ಗದ ಜನರು ದುಬಾರಿ ಶುಲ್ಕ ಕಟ್ಟಲು ಸಾಧ್ಯವಾಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಶಾಲೆಯನ್ನು ತೆರೆಯದಿದ್ದರೂ ಪೂರ್ಣ ಪ್ರಮಾಣದ ಶುಲ್ಕವನ್ನು ಕಟ್ಟಲು ಒತ್ತಾಯಿಸುತ್ತಿರುವುದು ನ್ಯಾಯ ಸಮ್ಮತವೇ? ನಿಮ್ಮ ಸಂಸ್ಥೆಯ ಬಗ್ಗೆ ಜನಸಾಮಾನ್ಯರಿಗೆ ಗೌರವವಿದೆ. ಪ್ರೀತಿ ಮತ್ತು ಸೇವೆ ಅನ್ನುವ ಉದ್ದೇಶ ಹೊಂದಿದ್ದೇವೆ ಎಂದು ಹೇಳುವ ನೀವು ಶುಲ್ಕವನ್ನು ಕಡಿಮೆಗೊಳಿಸಿ, ಪೋಷಕರ ಸಂಕಷ್ಟಕ್ಕೆ ಸ್ಪಂದಿಸಿ ಎಂದು ಪೋಷಕರು ಮನವಿ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.