ಹಾವೇರಿ: ಶಾಸಕ ನೆಹರು ಓಲೇಕಾರ ಅವರಿಗೆ ನೂತನ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿ, ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ನಗರದ ಪ್ರವಾಸಿ ಮಂದಿರದಿಂದ ಹೊಸಮನಿ ಸಿದ್ದಪ್ಪ ವೃತ್ತದವರೆಗೆ ಶನಿವಾರ ಕಾಲ್ನಡಿಗೆ ಜಾಥಾ ನಡೆಸಿದರು.
ಬ್ಯಾಡಗಿ ಮತ್ತು ಹಾವೇರಿ ವಿಧಾನಸಭಾ ಕ್ಷೇತ್ರಗಳಿಂದ ಒಟ್ಟು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿ ಹಾಗೂ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಆಯೋಗದ ಅಧ್ಯಕ್ಷರಾಗಿ ಉತ್ತಮ ಕೆಲಸ ಮಾಡಿರುವ ನೆಹರು ಓಲೇಕಾರ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.
‘ನೆಹರು ಓಲೇಕಾರ ಅವರಿಗೆ ಸಚಿವ ಸ್ಥಾನ ನೀಡುವುದಾಗಿ ಬಿ.ಎಸ್.ಯಡಿಯೂರಪ್ಪ ಅವರು ಮಾತು ನೀಡಿದ್ದರು. ಅದರಂತೆ ಈಗ ಓಲೇಕಾರ ಅವರಿಗೆ ಸಚಿವ ಸ್ಥಾನ ನೀಡಬೇಕು. ಹಾವೇರಿ ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಇದುವರೆಗೆ ಹಾವೇರಿ ತಾಲ್ಲೂಕಿಗೆ ಮಂತ್ರಿ ಸ್ಥಾನ ಸಿಕ್ಕಿಲ್ಲ’ ಎಂದುಬಿಜೆಪಿ ಹಾವೇರಿ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ಕಳಸೂರ ಹೇಳಿದರು.
‘ಜಿಲ್ಲೆಗೆ ಮೆಡಿಕಲ್ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಬಡವರಿಗೆ ಸೂರು, ಬಸ್ ನಿಲ್ದಾಣ, ಸಾರ್ವಜನಿಕ ಜಿಲ್ಲಾ ಗ್ರಂಥಾಲಯ, ಮೊರಾರ್ಜಿ ಶಾಲೆ ಸೇರಿದಂತೆ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳ ನಿಯೋಗ ಬೆಂಗಳೂರಿಗೆ ತೆರಳಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿ ಮನವೊಲಿಸುತ್ತೇವೆ’ ಎಂದು ಬಿಜೆಪಿ ಮುಖಂಡ ಕೆ.ಸಿ.ಕೋರಿ ಹೇಳಿದರು.
ಬಿಜೆಪಿ ಮುಖಂಡರಾದ ಬಾಬುಸಾಬ್ ಮೋಮಿನಗಾರ, ಶಿವಯೋಗಿ ಹುಲಿಕಂತಿಮಠ, ಗಿರೀಶ ತುಪ್ಪದ, ಜಗದೀಶ ಮಲಗೋಡ,ಶಿವಕುಮಾರ ಸಂಗೂರ, ನಜೀರ್ ಹುಸೇನ್ ನದಾಫ, ಪ್ರಶಾಂತ, ಮಂಜುನಾಥ ಇಟಗಿ, ಸಂಗಮೇಶ, ಬಸವರಾಜ ಡೊಂಕನವರ, ಫಕ್ಕೀರಗೌಡ ಕುಂದೂರ, ಅಡಿವಯ್ಯ ಯಲುವಿಗಿಮಠ, ತಿಪ್ಪಣ್ಣ ಸುಬ್ಬಣ್ಣನವರ, ಲಲಿತಾ ಗುಂಡೇನಹಳ್ಳಿ, ರತ್ನಾ ಭೀಮಕ್ಕನವರ, ರೋಹಿಣಿ ಪಾಟೀಲ, ಚನ್ನಮ್ಮ ಬ್ಯಾಡಗಿ, ಪುಷ್ಪಲತಾ ಚಕ್ರಸಾಲಿ ಮುಂತಾದವರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.