ಹಾವೇರಿ: 6ನೇ ವೇತನ ಆಯೋಗ ಅನ್ವಯ, ಸೇವಾ ಭದ್ರತೆ ಸೇರಿದಂತೆ ಹಲವಾರು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರವನ್ನು ಬೆಂಬಲಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಕುಮಾರ ಶೆಟ್ಟಿ ಬಣ) ಕಾರ್ಯಕರ್ತರು ಜಿಲ್ಲಾಡಳಿತ ಭವನದ ಮುಂಭಾಗ ಮುಂದೆ ಪ್ರತಿಭಟನೆ ನಡೆಸಿದರು.
ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ ಓಲೇಕಾರ ಮಾತನಾಡಿ, ‘ಸಾರಿಗೆ ನೌಕರರು ಸೇರಿದಂತೆ ವಿವಿಧ ಇಲಾಖೆಯ ಕಾರ್ಮಿಕರ ಬದುಕಿನ ಮೇಲೆ ಸರ್ಕಾರ ಬರೆ ಎಳೆಯುತ್ತಿರುವುದು ಸರಿಯಲ್ಲ. ಸರ್ಕಾರ ಹಾಗೂ ಸಾರಿಗೆ ನೌಕರರ ಪ್ರತಿಷ್ಠೆಯಿಂದ ಪ್ರಯಾಣಿಕರು ತೊಂದರೆ ಅನುಭವಿಸಬೇಕಾಗಿದೆ. ಸರ್ಕಾರ ತನ್ನ ಮೊಂಡುತನ ಬಿಟ್ಟು ಬೇಡಿಕೆ ಈಡೇರಿಸಲು ಮುಂದಾಗಬೇಕು’ ಎಂದು ಒತ್ತಾಯಿಸಿದರು.
‘ಸರ್ಕಾರ ಸಾರಿಗೆ ನೌಕರರ ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸಿ ಪ್ರಯಾಣಿಕರ ಹಿತ ಕಾಯಬೇಕು. ಇಲ್ಲವಾದರೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ರಾಜ್ಯದಾದ್ಯಂತಪ್ರತಿಭಟನೆ ನಡೆಸುವ ಮೂಲಕ ಸಾರಿಗೆ ನೌಕರರ ಹೋರಾಟಕ್ಕೆ ಬೆಂಬಲವಾಗಿ ನಿಲ್ಲಬೇಕಾಗುತ್ತದೆ’ ಎಂದು ಎಚ್ಚರಿಸಿದರು.
ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ನೂರ್ ಅಹಮದ್ ಲಕ್ಷ್ಮೇಶ್ವರ, ಜಿಲ್ಲಾ ಘಟಕದ ಉಪಾಧ್ಯಕ್ಷ ಮಹದೇವಪ್ಪ ಹೆಡಿಗ್ಗೊಂಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಸಿ.ಬಿ. ದೊಡ್ಡಗೌಡ್ರ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಸಂತೋಷಿ ಮಾತಾ ಬಡಿಗೇರ, ವಿಶ್ವನಾಥ ಹಿರೇಮಠ, ಮೌಲಾಸಾಬ ನದಾಫ, ರಾಜೀವ್ ಮೇಗಳಮನಿ, ಮಾಲತೇಶ ಅಚ್ಚಿಕಟ್ಟಿ, ವಿನೋದಾ ಸಾದಬೆ, ಅನಸೂಯ ಸಿದ್ದಪ್ಪಳವರ, ಲಕ್ಷ್ಮೀ ಕದರಮಂಡಲಗಿ ಇತರರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.