
ರಾಣೆಬೆನ್ನೂರು: ತುಂಗಾ ಮೇಲ್ದಂಡೆ ಯೋಜನೆ ಕಾಲುವೆ ದುರಸ್ತಿ, ನಗರದ ಹೊಸ ಕೇಂದ್ರ ಬಸ್ ನಿಲ್ದಾಣ, ದೊಡ್ಡಪೇಟೆ ಮಾರುಕಟ್ಟೆ ಅಭಿವೃದ್ಧಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರವೇ ಸ್ವಾಭಿಮಾನಿ ಸೇನೆಯ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಆರ್.ಎಸ್. ಭಗವಾನ ಅವರಿಗೆ ಮನವಿ ಸಲ್ಲಿಸಿದರು.
ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ರಾಮು ತಳವಾರ ಮಾತನಾಡಿ, ‘ತಾಲ್ಲೂಕಿನ ಗುಡ್ಡದ ಆನ್ವೇರಿ ಗ್ರಾಮದ ಶಾಲಾ ವಿದ್ಯಾರ್ಥಿ ಹಾಗೂ ಸಾರ್ವಜನಿಕರಿಗೆ ಬಸ್ ಸೌಕರ್ಯ ಕಲ್ಪಿಸುವುದು. ಹುಲ್ಲತ್ತಿ ತಾಂಡಾ ಹಾಗೂ ಗಂಗಾಪುರ ಗ್ರಾಮಗಳಿಗೆ ಸಾರ್ವಜನಿಕ ಬಸ್ ನಿಲ್ದಾಣ ನಿರ್ಮಾಣ, ಹನುಮಾಪುರ ಗ್ರಾಮಕ್ಕೆ ಸಮರ್ಪಕ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸಬೇಕು’ ಎಂದು ಆಗ್ರಹಿಸಿದರು.
ನಗರದ ಪ್ರಮುಖ ರಸ್ತೆ ದುರಸ್ತಿ, ಹೊಸ ಬಸ್ ನಿಲ್ದಾಣ ನಿರ್ಮಾಣ, ಸಾರ್ವಜನಿಕ ಶೌಚಾಲಯ, ಕುಡಿಯುವ ನೀರು ಸೇರಿದಂತೆ ಅಗತ್ಯ ಸೇವೆಗಳ ಕುರಿತು ಮಾರ್ಗ ಸೂಚಿ ರಚಿಸಿ ಕಾಮಗಾರಿ ಆರಂಭಿಸಬೇಕು’ ಎಂದು ಒತ್ತಾಯಿಸಿದರು.
ತಾಲ್ಲೂಕು ಘಟಕದ ಅಧ್ಯಕ್ಷ ನಾಗರಾಜ ಯರಬಾಳ ಮಾತನಾಡಿ, ‘ತುಂಗಾ ಮೇಲ್ದಂಡೆ ಯೋಜನೆ ಕಾಲುವೆಗಳು ಬಿರುಕು ಬಿಟ್ಟಿದ್ದು, ಪಕ್ಕದ ಜಮೀನುಗಳಲ್ಲಿ ನೀರು ನುಗ್ಗಿ ಬೆಳೆ ಹಾಳಾಗುತ್ತಿವೆ. ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದರು.
ಸುಮಾ ಪುರದ, ಮಂಜುನಾಥ ಕೋಲಕಾರ, ಶಾಂತಮ್ಮ ಕಜ್ಜರಿ, ಅನುಸೂಯಮ್ಮ ಗಂಗಣ್ಣನವರ, ಬೀರಪ್ಪ ಕರಿಯಣ್ಣನವರ, ಷಣ್ಮುಖಪ್ಪ ಅಂಗಡಿ, ಸುನಂದಾ ಪುಲಿಕಟ್ಟಿ, ರೇವಣೆಪ್ಪ ಲಮಾಣಿ, ಪ್ರಭಾಕರ ಬಿಸನಾಳ, ಲೋಹಿತ ಮಡಿವಾಳರ, ಶಾಂತವೀರಪ್ಪ ನೇಕಾರ, ಕೊಟ್ರೇಶ ಶೆಟ್ಟರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.