ಹಾವೇರಿ: ‘ನಾವ್ಯಾರು ವ್ಯಭಿಚಾರ ಮಾಡಿಲ್ಲ. ಆದರೆ, ನಮಗೆ ಕೆಟ್ಟ ಹೆಸರು ತರಲು ಸಿ.ಡಿ ಬಿಡುಗಡೆ ಮಾಡಿದರೆ, ಒಮ್ಮೆ ಹೋದ ಮಾನ ಮತ್ತೆ ಬರುವುದಿಲ್ಲ. ಮೀರ್ಸಾಧಿಕ್ ಮತ್ತು ನಂಬಿಕೆದ್ರೋಹಿಗಳಿಂದ ರಕ್ಷಣೆ ಅಗತ್ಯವಾದ್ದರಿಂದ ಸಿಡಿ ಬಿಡುಗಡೆಗೆ ತಡೆಯಾಜ್ಞೆ ತರಲಾಗಿತ್ತು’ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.
ಸಿ.ಡಿ. ಬಿಡುಗಡೆಗೆ ಯಾಕೆ ಕೋರ್ಟ್ನಲ್ಲಿ ಸ್ಟೇ ತಂದರು ಎಂಬ ಬಣಕಾರ್ ಹೇಳಿಕೆಗೆ ಹಿರೇಕೆರೂರಿನಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿ, ಮೀರ್ ಸಾಧಿಕ್ರಂಥ ಜನ ನಮ್ಮ ಸುತ್ತಮುತ್ತಲೇ ಇರುತ್ತಾರೆ. ಇದೇ ಬಣಕಾರ್ ನಮ್ಮ ಜೊತೆಗೆ ಇದ್ದು, ಈಗ ಕಾಂಗ್ರೆಸ್ ಸೇರಿದ್ದಾರೆ. ರಮೇಶ್ ಜಾರಕಿಹೊಳಿಯವರ ಬಗ್ಗೆ ಅನವಶ್ಯಕವಾಗಿ ಸಿಡಿ ಬಿಡುಗಡೆ ಮಾಡಿದರು. ಆದರೆ ಏನಾಯ್ತು? ಬಿ ರಿಪೋರ್ಟ್ ಆಯ್ತು. ನಾವು ನಮ್ಮ ಗೌರವ ರಕ್ಷಿಸಿಕೊಳ್ಳುವ ಕೆಲಸ ಮಾಡಲೇಬೇಕು. ಸ್ಟೇ ಅವಧಿ ಹಿಂದೆಯೇ ಮುಗಿದಿದೆ. ನಂತರವಾದರೂ ಸಿಡಿ ಬಿಡುಗಡೆ ಮಾಡಬಹುದಿತ್ತಲ್ಲ ಎಂದರು.
‘ಯು.ಬಿ.ಬಣಕಾರ ಅವರ ಧಮ್, ತಾಕತ್ತನ್ನು ಮೂರು ಬಾರಿ ನೋಡಿ ಆಗಿದೆ. ನನಗೆ ಧಮ್ ಇರೋದಕ್ಕೆ ಅವರಿಗೆ ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನ, ಒಂದು ಕಾರು, ರಾಜ್ಯ ಸಚಿವ ದರ್ಜೆ ಸ್ಥಾನಮಾನ ಬಂದಿತ್ತು. ಧಮ್, ತಾಕತ್ತಿನ ಮೇಲೆ ಚುನಾವಣೆ ನಡೆಯಲ್ಲ, ಅಭಿವೃದ್ಧಿ ಮೇಲೆ ಚುನಾವಣೆ ನಡೆಯುತ್ತದೆ. ಅವರು ಏನು ಅಭಿವೃದ್ಧಿ ಕೆಲಸ ಮಾಡಿದ್ದಾರೆ ಎಂಬುದನ್ನು ಪುಸ್ತಕ ಬಿಡುಗಡೆ ಮಾಡಲಿ. ಆಗ ಒಪ್ಪಿಕೊಳ್ಳುತ್ತೇನೆ’ ಎಂದು ಸವಾಲು ಹಾಕಿದರು.
ನಾವು 17 ಮಂದಿ ಕಾಂಗ್ರೆಸ್ಗೆ ರಾಜೀನಾಮೆ ನೀಡಿ, ಬಿಜೆಪಿ ಸರ್ಕಾರ ರಚನೆಯಾಗಿದ್ದಕ್ಕೆ ಸಿದ್ದರಾಮಯ್ಯ ಅವರಿಗೆ ವಿರೋಧ ಪಕ್ಷದ ನಾಯಕನ ಸ್ಥಾನ ಸಿಕ್ಕಿತು. ಇದಕ್ಕಾಗಿ ಅವರು ನಮಗೆ ಅಭಿನಂದನೆ ತಿಳಿಸಬೇಕು ಎಂದು ಸಿದ್ದರಾಮಯ್ಯನವರ ಟೀಕೆಗೆ ಪ್ರತ್ಯುತ್ತರ ನೀಡಿದರು.
ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.